Bihar Election Result: ರಾಜ್ಯ ಕಾಂಗ್ರೆಸ್ಗೆ ಮಹತ್ವದ ಸಂದೇಶ ರವಾನಿಸಿದ ವಿಜಯೇಂದ್ರ
ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಎನ್ಡಿಎ ಒಕ್ಕೂಟವು ಭರ್ಜರಿ ಗೆಲುವು ಸಾಧಿಸಿ ಮುನ್ನಡೆಯಲ್ಲಿದೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಮಹತ್ವದ ಸಲಹೆ ಕೊಟ್ಟಿದ್ದಾರೆ. ಬಿಹಾರದ ಚುನಾವಣೆಯ ಫಲಿತಾಂಶದಿಂದಾದರೂ ರಾಜ್ಯದ ಕಾಂಗ್ರೆಸ್ಸಿಗರು ಪಾಠ ಕಲಿಯಲಿ. ತಮ್ಮ ಉಳಿದಿರುವ ಅವಧಿಯನ್ನಾದರೂ ಜನಪರ ಕಾರ್ಯಕ್ಕಾಗಿ ಮೀಸಲಿರಿಸಿ ಮತದಾರರ ಋಣ ತೀರಿಸಲಿ ಎಂದು ತಿರುಗೇಟು ನೀಡಿದ್ದಾರೆ.
ಬಿಹಾರದಲ್ಲಿ ಪ್ರಜಾಪ್ರಭುತ್ವದ ದಿಗ್ವಿಜಯ, ಬಿಹಾರ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಜಯ, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸದೃಢ ನಾಯಕತ್ವದ ಕೊರಳನ್ನು ಅಲಂಕರಿಸಿದ ಪ್ರಜಾಪ್ರಭುತ್ವದ ವಿಜಯದ ಹಾರವಾಗಿ ವಿಜೃಂಭಿಸಿದೆ. ಪ್ರಧಾನಿ ಅವರ ನೇತೃತ್ವದ ಎನ್ಡಿಎ ಸರ್ಕಾರ ದೇಶಕ್ಕೆ ಅನಿವಾರ್ಯ ಎಂಬ ಸಂದೇಶವನ್ನೂ ಬಿಹಾರದ ಮತದಾರರು ರವಾನಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಎನ್ಡಿಎ ಮೈತ್ರಿಕೂಟದ ಸಂಘಟಿತ ಹೋರಾಟ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಕಾರ್ಯತಂತ್ರ, ಸಿಎಂ ನಿತೀಶ್ ಕುಮಾರ್ ಅವರ ದಕ್ಷ ಆಡಳಿತವನ್ನು ಮೆಚ್ಚಿ ಬಿಹಾರದ ಜನತೆ ಮತ್ತೆ ಎನ್ಡಿಎ ಸರ್ಕಾರವನ್ನು ನಿರೀಕ್ಷೆ ಮೀರಿದ ಐತಿಹಾಸಿಕ ದಾಖಲೆಯ ಬಹುಮತದಿಂದ ಗೆಲ್ಲಿಸಿ ಆಶೀರ್ವದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಪಾಳೆಗಾರಿಕೆ ರಾಜಕೀಯಕ್ಕೆ ಪಾಠ
ಈ ಚುನಾವಣೆಯಲ್ಲಿ ಮತಚೋರಿ ಹೆಸರಿನಲ್ಲಿ ಅಪಪ್ರಚಾರ ನಡೆಸಿ ರಾಜಕೀಯ ಚೋರತನ ಮಾಡಲು ಹೊರಟ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ಗೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿ, ಬಿಹಾರದ ರಾಜಕೀಯ ಭೂಪಟದಲ್ಲಿ ಕಾಂಗ್ರೆಸ್ಗೆ ಅಸ್ತಿತ್ವಕ್ಕಾಗಿ ತಿಣುಕಾಡಬೇಕಾದ ಸ್ಥಿತಿಗೆ ತಳ್ಳಿದ್ದಾರೆ. ಆರ್.ಜೆ.ಡಿ ಸೇರಿದಂತೆ ಮಹಾಘಟಬಂಧನ್ ಕೂಟವನ್ನು ಬಿಹಾರದ ಜನತೆ ಸೋಲಿನ ಬಂಧನದ ರುಚಿ ತೋರಿಸಿದ್ದಾರೆ. ಪಾಳೆಗಾರಿಕೆ ರಾಜಕೀಯಕ್ಕೆ ಇನ್ನೆಂದೂ ಅವಕಾಶ ನೀಡಲ್ಲ ಎಂಬ ಉತ್ತರ ಕೊಟ್ಟಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಪ್ರಚಾರ ನಡೆಯುವುದಿಲ್ಲ, ಅಲ್ಪಸಂಖ್ಯಾತರ ಹೆಸರಿನಲ್ಲಿ ಓಲೈಕೆಯ ಮತಬ್ಯಾಂಕ್ ರಾಜಕಾರಣಕ್ಕೆ ಭವಿಷ್ಯವಿಲ್ಲ ಎನ್ನುವುದನ್ನು ಬಿಹಾರದ ಜನತೆ ತೋರಿಸಿಕೊಟ್ಟಿದ್ದಾರೆ. ಬಿಹಾರದ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಸೇರಿದಂತೆ ದೇಶದ ಇತರ ವಿರೋಧ ಪಕ್ಷಗಳಿಗೆ ನೀತಿ ಪಾಠ ಹೇಳಿದೆ. ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ನಡೆದುಕೊಳ್ಳದಿದ್ದರೆ ನಿಮ್ಮನ್ನು ವಿರೋಧ ಪಕ್ಷದ ಸ್ಥಾನದಲ್ಲೂ ಕುಳ್ಳಿರಿಸಲಾಗದು ಎಂಬ ಎಚ್ಚರಿಕೆ ರವಾನಿಸಿದ್ದಾರೆ ಎಂದಿದ್ದಾರೆ.
ರಾಹುಲ್ ಗಾಂಧಿ ಅವರು ಬೆನ್ನತ್ತಿಹೋದ ಈವರೆಗಿನ ಚುನಾವಣೆಗಳೆಲ್ಲವೂ ಸರಣೀ ಪತನದ ಕಹಿಯನ್ನು ಕಾಂಗ್ರೆಸ್ ಅನುಭವಿಸಿದೆ. ಸದ್ಯ ಸೋಲಿನ ಸುಳಿಯಲ್ಲಿ ಸಿಲುಕಿಕೊಂಡು ಕಾಂಗ್ರೆಸ್ ಹಡಗು ಸಮುದ್ರದಲ್ಲಿ ಮುಳುಗುತ್ತಿದೆ. ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳು ಕಾಂಗ್ರೆಸ್ ಪಾಲಿಗೆ ಊರುಗೋಲುಗಳಾಗಿವೆ. ಇಂತಹ ಪರಿಸ್ಥಿತಿಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್ನ ಮುಂದಾಳುಗಳು ಜನಪರವಾಗಿ ಚಿಂತಿಸದೇ ಅಭಿವೃದ್ಧಿ ಕೆಲಸಗಳನ್ನು ಮೂಲೆಗೆ ಸರಿಸಿ, ರಾಷ್ಟ್ರಭಕ್ತ ಸಂಘಟನೆಗಳ ಕುರಿತು ಅವಿವೇಕದ ಹೇಳಿಕೆಗಳನ್ನು ನೀಡುವುದರಲ್ಲೇ ತಲ್ಲೀನರಾಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.












Click it and Unblock the Notifications