ಶಿಕ್ಷಕರ ಹಾಜರಿ ಮೇಲೆ ನಿಗಾ: ಶಾಲೆಗಳಲ್ಲಿ ಬಯೊಮೆಟ್ರಿಕ್ ಜಾರಿ
ಬೆಂಗಳೂರು, ಜೂನ್ 11: ಪ್ರತಿಯೊಂದು ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಿಯನ್ನು ನೋಡಿದ್ದೇವೆ. ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರ ಹಾಜರಾತಿಗಾಗಿ ಬಯೋಮೆಟ್ರಿಕ್ ಯಂತ್ರವನ್ನು ಬಳಕೆ ಮಾಡುವಂತೆ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿಶಿಕ್ಷಕರ ಹಾಜರಾತಿ ಮೇಲೆ ನಿಗಾ ಇಡಲು ಬಯೋಮೆಟ್ರಿಕ್ ಅಳವಡಿಕೆ ಕಾರ್ಯವನ್ನು ಚುರುಕುಗೊಳಿಸು ಇಲಾಖೆ ನಿರ್ಧರಿಸಿದೆ.
ದಾಖಲಾತಿ ಕಡಿಮೆ ಆದರೆ ಶಿಕ್ಷಕರಿಗೆ ಶಿಕ್ಷೆ: ಶಿಕ್ಷಣ ಇಲಾಖೆ ಎಚ್ಚರಿಕೆ
ಶಿಕ್ಷಕರು ಶಾಲೆಗಳಲ್ಲಿ ಪಾಠ ಮಾಡುತ್ತಿಲ್ಲ ಅದನ್ನು ಬಿಟ್ಟು ರಾಜಕೀಯ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ ಹಾಗಾಗಿ ಶಾಲೆಯಲ್ಲಿ ಬಯೋಮೆಟ್ರಿಕ್ ಯಂತ್ರ ಅಳವಡಿಸಲಾಗುತ್ತದೆ ಎಂದು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಬಂದರೆ ಸ್ಥಳೀಯ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳಿಗೆ ಶಿಕ್ಷಕರ ಹಾಜರಾತಿಯ ಬಗ್ಗೆ ಮಾಹಿತಿ ದೊರೆಯಲಿದೆ. ಇದರಿಂದ ಶಿಕ್ಷಣದದ ಗುಣಮಟ್ಟವೂ ಹೆಚ್ಚಳವಾಗಲಿದೆ ಎಂದು ಹೇಳಿದರು.
ಶಿಕ್ಷಣ ಇಲಾಖೆ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚುವರಿ ಶುಲ್ಕ, ಡೊನೇಶನ್ ಪಡೆಯುವ ಖಾಸಗಿ ಶಾಲೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸೂಚಿಸಿದ್ದೇವೆ, ಪೋಷಕರಿಂದ ಹಣ ವಸೂಲಿ ಕುರಿತು ಅನೇಕ ದೂರುಗಳು ಕೇಳಿಬಂದಿವೆ. ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಸರ್ಕಾರದ ಆದೇಶ ಪಾಲಿಸದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಹಿನ್ನಡೆಯಾಗಿತ್ತು. ಜೂ.16ರ ನಂತರ ಇದಕ್ಕೆ ಚಾಲನೆ ದೊರೆಯಲಿದೆ. ಉಚಿತ ಪಠ್ಯಪುಸ್ತಕ ವಿತರಣೆ ಕಾರ್ಯ ಶೇ.90ರಷ್ಟು ಪೂರ್ಣಗೊಂಡಿದೆ.