ಜನನ-ಮರಣ ನೋಂದಣಿ ಸಂಬಂಧಿಸಿದ ತಿದ್ದುಪಡಿ ಹೈಕೋರ್ಟ್ನಿಂದ ರದ್ದು
ಬೆಂಗಳೂರು, ಏಪ್ರಿಲ್ 19; ಜನನ-ಮರಣಗಳ ನೋಂದಣಿಗೆ ಸಂಬಂಧಿಸಿದಂತೆ ವ್ಯಾಜ್ಯಗಳ ಕುರಿತು ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿ ವರ್ಗಾಯಿಸಿದ್ದ ನಿಯಮಗಳನ್ನು ಕರ್ನಾಟಕ ಹೈಕೋರ್ಟ್ ಅಸಂವಿಧಾನಿಕ ಎಂದು ಸಾರಿದೆ. ಅಷ್ಟೇ ಅಲ್ಲದೇ, ಸರ್ಕಾರ ಜಾರಿಗೊಳಿಸಿದ್ದ ಕರ್ನಾಟಕ ಜನನ ಮರಣಗಳ ನೋಂದಣಿ (ತಿದ್ದುಪಡಿ) ಅಧಿನಿಯಮಗಳು-2022 ಅನ್ನು ರದ್ದುಪಡಿಸಿ ಮಹತ್ವದ ಆದೇಶ ನೀಡಿದೆ. ಇದರಿಂದಾಗಿ ಈ ಮೊದಲಿದ್ದ ವ್ಯವಸ್ಥೆಯಂತೆ ಜನನ-ಮರಣಗಳ ನೋಂದಣಿಗೆ ಸಂಬಂಧಿಸಿದಂತೆ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ ಅಧಿಕಾರ ಜೆಎಂಫ್ಸಿ ಕೋರ್ಟ್ಗೆ ಮರಳಲಿದೆ.
ಬೀದರ್ ವಕೀಲರ ಸಂಘದ ಅಧ್ಯಕ್ಷ ಸುದರ್ಶನ ವಿ. ಬಿರಾದರ್ ಕರ್ನಾಟಕ ಜನನ ಮತ್ತು ಮರಣ (ತಿದ್ದುಪಡಿ) ಅಧಿನಿಯಮಗಳು-2022 ಜಾರಿಗೆ 2022ರ ಜು.18ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಮಂಡಿಸಿದ್ದ ಹಿರಿಯ ವಕೀಲ ಪಿ.ಪಿ. ಹೆಗ್ಡೆ, ಕೇಂದ್ರ ಸರ್ಕಾರದ ಜನನ ಮತ್ತು ಮರಣ ಕಾಯ್ದೆಗೆ ವಿರುದ್ಧವಾಗಿ ನಿಯಮಕ್ಕೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರ ನ್ಯಾಯಾಲಯಗಳ ಅಧಿಕಾರ ಮೊಟಕುಗೊಳಿಸಿ ಉಪವಿಭಾಗಾಧಿಕಾರಿಗಳಿಗೆ ನೀಡಿದೆ. ಇದು ಕಾನೂನುಬಾಹಿರ ಕ್ರಮ. ಮೂಲ ಕಾಯ್ದೆಯ ಪ್ರಕಾರ, ಜನನ ಮತ್ತು ಮರಣ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಅಧಿಕಾರ ಜೆಎಂಎಫ್ಸಿ ನ್ಯಾಯಾಲಯಕ್ಕೆ ಮಾತ್ರವಿದೆ. ಈ ರೀತಿ ತಿದ್ದುಪಡಿ ನಿಯಮ ಜಾರಿಗೆ ತರುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ವಾದ ಮಂಡಿಸಿದ್ದರು.
ವಾದ ಮನ್ನಣೆ: ಈ ವಾದ ಮಾನ್ಯ ಮಾಡಿರುವ ಹೈಕೋರ್ಟ್, ತಿದ್ದುಪಡಿ ನಿಯಮಗಳು ಮೂಲ ಕಾಯ್ದೆಯ ವಿರುದ್ಧವಾಗಿದೆ. ಅದರಂತೆ ತಿದ್ದುಪಡಿ ನಿಯಮಗಳ ಮೂಲ ಕಾಯ್ದೆಗೆ ವಿರುದ್ಧವಾಗಿದೆ ಕಾನೂನು ಬಾಹಿರ ಮತ್ತು ಅಸಿಂಧುಗೊಳಿಸಬಹುದಾಗಿದೆ. 2022ರ ತಿದ್ದುಪಡಿ ನಿಯಮಗಳನ್ನು ರದ್ದುಪಡಿಸದಿದ್ದರೆ ಬಾಲವೇ ನಾಯಿಯನ್ನು ಅಲ್ಲಾಡಿಸಲು ಅವಕಾಶ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟು ತಿದ್ದುಪಡಿ ನಿಯಮಗಳನ್ನು ರದ್ದುಪಡಿಸಿದೆ. ಅಧಿಸೂಚನೆಯ ನಂತರ ಕೈಗೊಂಡಿರುವ ಕ್ರಮಗಳು ಕಾನೂನಿನ ದೃಷ್ಟಿಯಲ್ಲಿ ಅನೂರ್ಜಿತವಾಗಲಿದೆ ಎಂದು ಆದೇಶದಲ್ಲಿ ನ್ಯಾಯಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ: ಕೇಂದ್ರ ಸರ್ಕಾರದ ಜನನ-ಮರಣಗಳ ಕಾಯ್ದೆ-1986ರ ಸೆಕ್ಷನ್ 30ರ ಪ್ರಕಾರ ಜನನ-ಮರಣಗಳ ನೋಂದಣಿ ಕುರಿತ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಅಧಿಕಾರ ಜೆಎಂಎಫ್ಸಿ ನ್ಯಾಯಾಲಯ ಹೊಂದಿತ್ತು. ಆದರೆ, ಅಧಿಕಾರವನ್ನು ಕಂದಾಯ ಇಲಾಖೆ ಉಪವಿಭಾಗಾಧಿಕಾರಿಗಳಿಗೆ ವರ್ಗಾಯಿಸುವ ಸಂಬಂಧ ರಾಜ್ಯ ಸರ್ಕಾರ 2022ರಲ್ಲಿ ತಿದ್ದುಪಡಿ ನಿಯಮ ರೂಪಿಸಿತ್ತು. ಅದರಂತೆ ಕರ್ನಾಟಕ ಜನನ-ಮರಣಗಳ ನೋಂದಣಿ (ತಿದ್ದುಪಡಿ) ಅಧಿಯಮಗಳು-2022 ಅನ್ನು ಜಾರಿಗೊಳಿಸಿ ರಾಜ್ಯ ಸರ್ಕಾರವು 2022ರ ಜು.18ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.












Click it and Unblock the Notifications