ಬಿಜೆಪಿ 40% ಕಮಿಷನ್ ಆರೋಪ ಸುಳ್ಳೆಂದು ತನಿಖೆಯಿಂದಲೇ ಸಾಬೀತು: ಬಿವೈ ವಿಜಯೇಂದ್ರ
ಬೆಂಗಳೂರು, ನವೆಂಬರ್ 16: ಹಾಲಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಕಾಂಗ್ರೆಸ್ ನಡೆಸಿದ ಪೇಸಿಎಂ ಅಭಿಯಾನ, 40% ಕಮಿಷನ್ ಆರೋಪಕ್ಕೆ ಈಗ ಲೋಕಾಯುಕ್ತ ತನಿಖೆಯಿಂದ ಸತ್ಯ ಹೊರ ಬಿದ್ದಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಕಾಂಗ್ರೆಸ್ ನಾಯಕರು 40% ಕಮಿಷನ್ ಸುಳ್ಳು ಅಪಪ್ರಚಾರ ನಡೆಸಿದ್ದರು. ಬಿಜೆಪಿ ವಿರುದ್ಧದ ಕಾಂಗ್ರೆಸ್ ಭ್ರಷ್ಟಾಚಾರ ಆರೋಪ ಆಧಾರ ರಹಿತವಾಗಿದೆ. ಇದೊಂದು ಹಸೀ ಸುಳ್ಳು ಎಂಬುದು ಇದೀಗ ಲೋಕಾಯುಕ್ತ ತನಿಖೆಯಲ್ಲೇ ಬಹಿರಂಗವಾಗಿದೆ ಎಂದು ಅವರು ವಿವರಿಸಿದ್ದಾರೆ.

ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ಭ್ರಷ್ಟತೆಯ ಕೂಪದಲ್ಲಿ ಮುಳುಗಿ ಹೋಗಿದೆ. ಕಾಂಗ್ರೆಸ್ ಸರ್ಕಾರ ತಾನು ಹೇಳುವುದೆಲ್ಲಾ ಸುಳ್ಳು, ಕಟ್ಟುಕಥೆ ಕಟ್ಟುವಲ್ಲಿ ತಾನು ನಿಸ್ಸೀಮ ಎಂಬುದು ಸಾಬೀತಾಗಿದೆ ಎಂದು ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಕಾಂಗ್ರೆಸ್ನಿಂದ ಸಮಾಜ ಒಡೆಯುವ ಕೆಲಸ
ನೈತಿಕ ಮಾರ್ಗದಲ್ಲಿ ಎಂದೂ ಅಧಿಕಾರ ಹಿಡಿಯದ ಕಾಂಗ್ರೆಸ್ಸಿಗರು ದುರ್ಮಾರ್ಗ, ಅನೀತಿ, ಅಪಪ್ರಚಾರ ಹಾಗೂ ಸಮಾಜ ಒಡೆಯುವ ಕೆಲಸಗಳಿಂದ ಅಧಿಕಾರ ಕಬಳಿಸಿದ್ದಾರೆ ಎಂಬುದಕ್ಕೆ ಪ್ರಸ್ತುತ ಬಹಿರಂಗ ಲೋಕಾಯುಕ್ತ ವರದಿ ಸಾಕ್ಷಿ ಹೇಳುತ್ತಿದೆ.
ಕರ್ನಾಟಕದ ಜನತೆಯನ್ನು ವಂಚಿಸಿ, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಅಧಿಕಾರದಿಂದ ಕೆಳಗಿಳಿದು ಕರ್ನಾಟಕದ ಜನತೆಯ ಕ್ಷಮೆ ಕೋರಲಿ ಎಂದು ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ಗೆ ಯಾವುದಕ್ಕೂ ಅವಕಾಶ ಇಲ್ಲ: ಬಿವೈವಿ
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವಾಗಲೇ ಲೋಕಾಯುಕ್ತ ತನಿಖಾ ವರದಿ ಬಹಿರಂಗವಾಗಿದೆ. ಈ ಕುರಿತು ಕಾಂಗ್ರೆಸ್ಸಿಗರು ಇನ್ನೇನೂ ಸಮಾಜಾಯಿಸಿ ನೀಡುವುದಕ್ಕಾಗಲಿ, ವಿತಂಡವಾದ ಮಾಡುವುದಕ್ಕಾಗಲಿ ಅವಕಾಶವಿಲ್ಲ ಎಂದು ಅವರು ಹೇಳಿದರು.
ಸದ್ಯ ಬಾಕಿ ಬಿಲ್ ಪಾವತಿಯಾಗದೇ ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಗುತ್ತಿಗೆದಾರರು ರಾಜ್ಯದಲ್ಲಿರುವುದು ಶೇಕಡಾ 40ರಷ್ಟು ಅಲ್ಲ ಶೇಕಡಾ 80ರಷ್ಟು ಕಾಂಗ್ರೆಸ್ ಸರ್ಕಾರ ಎಂಬ ಅಸಲಿ ಸತ್ಯವನ್ನು ಬಹಿರಂಗ ಪಡಿಸಲಾಗುತ್ತಿದೆ. ಒಂದರ ಮೇಲೊಂದು ಹಗರಣಗಳ ತನಿಖೆಯ ಕಾನೂನು ಉರುಳು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಸುತ್ತಿಕೊಳ್ಳುತ್ತಿದೆ. ಇದರಲ್ಲೇ ಕಾಂಗ್ರೆಸ್ ಶಾಸಕರು ಮಾರಾಟವಾಗುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳೇ ಕರ್ನಾಟಕದ ಅಧಿಕೃತ ಹೇಳಿಕೆ ನೀಡಿ ಹರಾಜು ಹಾಕುತ್ತಿದ್ದಾರೆ ಎಂದು ಅವರು ಕುಟುಕಿದರು.
ಎಸ್ಐಟಿ ತನಿಖೆಯಿಂದ ಕಾಂಗ್ರೆಸ್ ಮುಖಭಂಗ
ಜನಪರ ಹಾಗೂ ಅಭಿವೃದ್ಧಿಪರ ಆಡಳಿತ ನೀಡುತ್ತಿದ್ದ ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದವರಿಗೆ ಜನರೇ ತಕ್ಕ ಶಾಸ್ತಿ ಮಾಡಲಿದ್ದಾರೆ. ಆದರೆ ಇದೀಗ ತಮ್ಮ ಕರಾಳತೆಯ ಭ್ರಷ್ಟ ಮುಖವನ್ನು ಮುಚ್ಚಿಕೊಳ್ಳಲು ಕೋವಿಡ್ ಸಂದರ್ಭದಲ್ಲಿ ಅವ್ಯವಹಾರ ಸಂಭವಿಸಿದೆ ಎಂದಿದ್ದಾರೆ. ಆ ಬಗ್ಗೆ ಸಲ್ಲಿಕೆಯಾದ ಮಧ್ಯಂತರ ವರದಿಯನ್ನು ತರಾಟೆಗೆ ತೆಗೆದುಕೊಂಡರು. ರಚನೆಯಾಗಿರುವ ಎಸ್ಐಟಿ ಮೂಲಕವು ನಿಮ್ಮ ಮುಖಭಂಗವಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದರು.












Click it and Unblock the Notifications