ಹೆಚ್ಡಿಕೆ ಪೆನ್ ಡ್ರೈವ್ ಬಾಂಬ್: ಕುಮಾರಸ್ವಾಮಿ ಬಳಿ ಇರುವ ಪೆನ್ ಡ್ರೈ SP ರೋಡ್ ಪೆನ್ಡ್ರೈವ್: ಪ್ರಿಯಾಂಕ್ ಖರ್ಗೆ
ಬೆಂಗಳೂರು, ಆಗಸ್ಟ್ 05: ರಾಜ್ಯ ಸರ್ಕಾರದ ವಿರುದ್ದ ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಬಳಿ ಇರುವ ಪೆನ್ ಡ್ರೈವ್ ಏನಾಗಿದೆ ? ಅದು ಎಸ್ ಪಿ ರೋಡ್ ಪೆನ್ಡ್ರೈವ್ ಇರಬೇಕು ಎಂದು ಕಟಕಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ನಾನು ಆ ಸರ್ಕಾರದಲ್ಲಿ ಸಚಿವನಾಗಿದ್ದೆ. ಅವರು ಪ್ರೋಗ್ರೆಸ್ಸಿವ್ ಆಗಿ ಮಾತನಾಡುತ್ತಿದ್ದವರು ಈಗ ಯಾಕೆ ಹೀಗಾಗಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ಹಾಗೂ ಜೆಡಿಎಸ್ ಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನೂ ಶಾಸಕ ಬಸವರಾಜ ರಾಯರೆಡ್ಡಿ ಅವರ ಸಚಿವರ ಹಾಗೂ ಶಾಸಕರ ನಡುವೆ ಹೊಂದಾಣಿಕೆ ಇಲ್ಲ ಎಂಬ ವಿಚಾರದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಸಿದಿ ಅವರು, ಹಿರಿಯರು ಯಾಕೆ ಹೀಗೆ ಹೇಳಿದರು ಗೊತ್ತಾಗುತ್ತಿಲ್ಲ ನಾನು ಸಚಿವನಾಗಿ ಅವರು ಹೇಳಿದ ಕೆಲಸ ಮಾಡಿಕೊಟ್ಟಿದ್ದೇನೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯಿಂದಾಗಿ ಅವರ ಮೇಲಿನ ಗೌರವ ಕಡಿಮೆಯಾಗಿದೆ ಎಂದು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇದು ಕೇಶವ ಕೃಪಾದ ಹೇಳಿಕೆ. ಅವರ ಹೇಳಿಕೆ ಆರ್ ಎಸ್ ಎಸ್ ಹೇಳಿಕೆ. ದಲಿತರ ಮೇಲಿನ ಬಿಜೆಪಿಯ ಅಸಹನೆಯಾಗಿದೆ. ಈ ಅಸಹನೆ ಬಹಳ ದಿನ ಉಳಿಯುವುದಿಲ್ಲ ಯಾಕೆಂದರೆ, ರಾಜ್ಯದಲ್ಲಿ ಕೇಶವ ಕೃಪಾ ಆಳುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನೂ ಬಾಬಾಸಾಹೇಬರ ಸಂವಿಧಾನದ ಪ್ರಕಾರ ಆಡಳಿತ ನಡೆಯುತ್ತಿದೆ. ಅರಗ ಅವರ ಕ್ಷಮೆ ನಮಗೆ ಬೇಕಿಲ್ಲ. ಕ್ಷಮೆ ಕೇಳಿದ ತಕ್ಷಣ ಮನಸ್ಥಿತಿ ಬದಲಾಗುತ್ತದೆಯೇ? ಈಗಾಗಲೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಕಾನೂನು ಪ್ರಕಾರ ಅದು ಮುಂದುವರೆಯಲಿದೆ ಎಂದು ತಿರುಗೇಟು ನೀಡಿದರು.
ಸರ್ಕಾರ ಇತರೆ ಇಲಾಖೆಗಳಿಂದ ಬರಬೇಕಾಗುವ ಬಾಕಿಯನ್ನು ಹಂತ ಹಂತವಾಗಿ ವಸೂಲಿ ಮಾಡುವುದರ ಜೊತೆಗೆ ಬದಲಿ ವ್ಯವಸ್ಥೆಯ ಮೂಲಕ ರೆವೆನ್ಯೂ ಸಂಗ್ರಹಿಸಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು. ಇತ್ತೀಚಿಗೆ ಮಳೆಬಂದ ಸಂದರ್ಭದಲ್ಲಿ ನೀರಿನ ಕುಳಿಗಳಲ್ಲಿ ಬಿದ್ದು ಇಬ್ಬರು ಬಾಲಕರು ಮುಳುಗಿ ಮೃತರಾಗಿರುವುದು ಕಾಮಗಾರಿ ಗುತ್ತಿಗೆ ಪಡೆದಿರುವ ಎಲ್ ಅಂಡ್ ಟಿ ಕಂಪನಿ ಹಾಗೂ ಕಾರ್ಪೊರೇಷನ್ ಜೊತೆಗೆ ನಾನೂ ಕೂಡಾ ಜವಾಬ್ದಾರನಾಗಿದ್ದೇನೆ.
ಈ ಬಗ್ಗೆ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ಎಲ್ ಅಂಡ್ ಟಿ ಕಂಪನಿಯ ಕಡೆಯಿಂದ ಪರಿಹಾರ ಕೊಡಿಸಲಾಗಿದೆ. ಜೊತೆಗೆ ಇತರೆ ಸರ್ಕಾರಿ ಕಾಮಗಾರಿ ನಡೆಯುತ್ತಿರುವ ಕಡೆಗೆ ಈ ರೀತಿ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಸೀಲ್ ಮಾಡಿರುವ ಪ್ರತಿ ಗ್ಯಾಸ್ ಸಿಲೆಂಡರ್ ನಿಂದ ಕನಿಷ್ಠ 2 ಕೆಜಿಯಷ್ಟು ಅನಿಲವನ್ನು ತೆಗೆದು ಮನೆಗಳಿಗೆ ಸರಬರಾಜು ಮಾಡುತ್ತಿರುವ ಘಟನೆ ತಮ್ಮ ಗಮನಕ್ಕೆ ಬಂದಿದ್ದು ಸಿಎಂ ಅವರ ಕಾರ್ಯಕ್ರಮ ಮುಗಿದ ನಂತರ ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಅವರು, ಅಫಜಲ್ ಪೂರ ತಾಲೂಕಿನ ಅವರಾದ ( ಕೆ) ಗ್ರಾಮವನ್ನು ನೆರೆ ಪೀಡಿತ ಗ್ರಾಮ ಎಂದು ಪರಿಗಣಿಸಿ ಸ್ಥಳಾಂತರ ಮಾಡಲಾಗಿದೆ ಆದರೆ ಅಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ ಕುರಿತು ಶಾಸಕರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು












Click it and Unblock the Notifications