ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ: ಕಾಂಗ್ರೆಸ್ ಸೇರಲು ಮಂದಾದ ಹಲವು ನಾಯಕರು- ಡಿಕೆಶಿ ಸ್ಫೋಟಕ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 25: 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿವೆ. ಈ ನಿರ್ಧಾರದ ಕುರಿತು ಅಸಮಾಧಾನಗೊಂಡಿರುವ ಎರಡೂ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಯಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ ಮೊದಲು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಹೇಳಿದ್ದಾರೆ.

'ಬಿಜೆಪಿ-ಜೆಡಿಎಸ್ ಮೈತ್ರಿಯ ನಂತರ, ಹಲವಾರು ನಾಯಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಆ ಪಕ್ಷಗಳು ಹಲವು ನಾಯಕರು ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸಂಪುಟದ ಕೆಲ ಸಹೋದ್ಯೋಗಿಗಳು ಹಾಗೂ ಪಕ್ಷದ ಮುಖಂಡರ ಜತೆ ಚರ್ಚಿಸಬೇಕಿದೆ. ಆ ನಂತರ, ಪಕ್ಷಾಂತರ ಮಾಡಲು ಬಯಸುವ ನಾಯಕರೊಂದಿಗೆ ಮಾತನಾಡುತ್ತೇನೆ' ಎಂದು ಡಿಕೆಶಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬಿಜೆಪಿ-ಜೆಡಿಎಸ್ನ ಹಲವು ನಾಯಕರು ( ಗೆದ್ದವರು ಅಥವಾ ಸೋತವರು ) ಕಾಂಗ್ರೆಸ್ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಮೈತ್ರಿ ಕುರಿತು ತಮ್ಮ ಅಭಿಪ್ರಾಯವನ್ನು ಕೇಳಲಾಗಿಲ್ಲ. ಈ ಮೈತ್ರಿಯಿಂದ ನಮಗೆ ಸಂತೋಷವಿಲ್ಲ' ಎಂಬುದಾಗಿ ಅವರು ತಿಳಿಸಿದ್ದಾರೆ.

ನಾನು ಮೊದಲು ನಮ್ಮ ಪಕ್ಷದ ಒಳಗಿನ ನಾಯರೊಂದಿಗೆ ಸಮಾಲೋಚಿಸುತ್ತೇನೆ. ಸ್ಥಳೀಯ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಪಕ್ಷದ ಸ್ಥಳೀಯ ನಾಯಕರು ಕೆಲಸ ಮಾಡಬೇಕೆಂದು ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷದಿಂದ ರಾಜ್ಯ ಸರ್ಕಾರದ ಬಹುತೇಕ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. 28 ಕ್ಷೇತ್ರಗಳಿಗೆ ತಲಾ ಒಬ್ಬರಂತೆ 28 ಸಚಿವರನ್ನು ನೇಮಿಸಲಾಗಿದೆ. ಅವರು ಎಂಟರಿಂದ ಹತ್ತು ದಿನಗಳಲ್ಲಿ ಎರಡು ಅಥವಾ ಮೂರು (ಅಭ್ಯರ್ಥಿಗಳು) ಹೆಸರುಗಳನ್ನು ನೀಡುತ್ತಾರೆ. ಆದಷ್ಟು ಬೇಗ ಲೋಕಸಭೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿಗೆ ಮುನ್ನವೇ ಪ್ರಕಟಿಸುವ ನಿರೀಕ್ಷೆಯಲ್ಲಿದ್ದೇವೆ. ನಾವು ಜನವರಿಗೂ ಮೊದಲೇ ಪಟ್ಟಿಯನ್ನು ಬಿಡುಗಡೆ ಮಾಡಿದರೆ ಆಶ್ಚರ್ಯವೇನಿಲ್ಲ. ಹತ್ತು ದಿನಗಳಲ್ಲಿ ವರದಿ ಕೇಳಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಉಪಮುಖ್ಯಮಂತ್ರಿಗಳನ್ನು ನೇಮಿಸುವ ವಿಚಾರವನ್ನು ಬಹಿರಂಗವಾಗಿ ಚರ್ಚಿಸಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಪತ್ರ ಬರೆದಿದೆ. ಇದರ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲವೆಂದು ಶಿವಕುಮಾರ್ ತಿಳಿಸಿದ್ದಾರೆ.












Click it and Unblock the Notifications