ಬೀದರ್ ರಾಜಕೀಯ : 3 ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ!
ಬೀದರ್, ಡಿಸೆಂಬರ್. 13 : 2018ರ ಚುನಾವಣಾ ಪ್ರಚಾರಕ್ಕಾಗಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ನಡೆಸುತ್ತಿರುವ ಕರ್ನಾಟಕ ಬಿಜೆಪಿ, ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ.
ಎಲ್ಲಾ ರಾಜಕೀಯ ಪಕ್ಷಗಳಿಗೂ ಮೊದಲೇ ಪ್ರಚಾರ ಕಾರ್ಯ ಆರಂಭಮಾಡಿರುವ ಬಿಜೆಪಿ, ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಅಭ್ಯರ್ಥಿಗಳ ಹೆಸರು ಪ್ರಕಟಿಸುವ ಮೂಲಕ ಚುನಾವಣೆಗೆ ನಾವು ಸಿದ್ಧ ಎಂಬ ಸಂದೇಶವನ್ನು ಉಳಿದ ಪಕ್ಷಗಳಿಗೆ ರವಾನೆ ಮಾಡುತ್ತಿದೆ.
ಬೀದರ್ ಜಿಲ್ಲೆಯಲ್ಲಿ ಕಳೆದ ವಾರ ಪರಿವರ್ತನಾ ಯಾತ್ರೆಯ ಸಮಾವೇಶಗಳು ನಡೆದವು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು.
ಬೀದರ್ ಜಿಲ್ಲೆಯ ಬೀದರ್, ಬಸವ ಕಲ್ಯಾಣ, ಹುಮ್ನಾಬಾದ್, ಬೀದರ್ ದಕ್ಷಿಣ, ಭಾಲ್ಕಿ, ಔರಾದ್ ಸೇರಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವರು ಈಶ್ವರ ಖಂಡ್ರೆ. ಸಿದ್ದರಾಮಯ್ಯ ಸಂಪುಟದಲ್ಲಿ ಅವರು ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು. 2018ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆ ಅವರ ಮೇಲಿದೆ...

ಭಾಲ್ಕಿ ಕ್ಷೇತ್ರಕ್ಕೆ ಪ್ರಕಾಶ್ ಖಂಡ್ರೆ
ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಯಡಿಯೂರಪ್ಪ ಅವರು, ಪ್ರಕಾಶ್ ಖಂಡ್ರೆ ಅವರು 2018ರ ಚುನಾವಣೆ ಅಭ್ಯರ್ಥಿ ಎಂದು ಘೋಷಣೆ ಮಾಡಿದರು. ಕಳೆದ ಚುನಾವಣೆಯಲ್ಲಿ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಕೆ.ಸಿದ್ರಾಮ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು.

ಸೂರ್ಯಕಾಂತ ನಾಗಮಾರಪಲ್ಲಿಗೆ ಟಿಕೆಟ್
ಬೀದರ್ನ ಗಣೇಶ ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಯಡಿಯೂರಪ್ಪ ಅವರು, 'ಈ ಸಮಾವೇಶದ ಕೇಂದ್ರ ಬಿಂದು ಭಾವಿ ಶಾಸಕ ಸೂರ್ಯಕಾಂತ ನಾಗಮಾರಪಲ್ಲಿ ಅವರೇ' ಎಂದು ಮಾತು ಆರಂಭಿಸಿದರು. ನೂರಾರು ಅಭಿಮಾನಿಗಳು ಚಪ್ಪಾಳೆ ತಟ್ಟಿ ಯಡಿಯೂರಪ್ಪ ಮಾತನ್ನು ಸ್ವಾಗತಿಸಿದರು. ಭಾಷಣದ ಕೊನೆಗೆ 'ನಮ್ಮ ಅಭ್ಯರ್ಥಿ ಗೆಲ್ಲಿಸಿ' ಎಂದು ಸೂರ್ಯಕಾಂತ ನಾಗಮಾರಪಲ್ಲಿ ಅವರತ್ತ ಕೈ ತೋರಿಸಿ, 2018ರ ಚುನಾವಣೆಗೆ ಅವರೇ ಅಭ್ಯರ್ಥಿ ಎಂದು ಪರೋಕ್ಷವಾಗಿ ಘೋಷಿಸಿದರು.

ಔರಾದ್ ಅಭ್ಯರ್ಥಿ ಘೋಷಣೆ
ಔರಾದ್ನಲ್ಲಿ ನಡೆದ ಸಮಾವೇಶದಲ್ಲಿ ಯಡಿಯೂರಪ್ಪ ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಿದರು. ಹಾಲಿ ಶಾಸಕ ಪ್ರಭು ಚವ್ಹಾಣ್ ಅವರು 2018ರ ಅಭ್ಯರ್ಥಿ ಎಂದು ಘೋಷಣೆ ಮಾಡಿದರು. ಕಳೆದ ಬಾರಿ ಕೆಜೆಪಿಯಿಂದ ಸ್ಪರ್ಧಿಸಿದ್ದ ಧನಾಜಿ ಜಾಧವ ಅವರು ಟಿಕೆಟ್ಗೆ ಪ್ರಬಲ ಆಕಾಂಕ್ಷಿಯಾಗಿದ್ದರು.

ಈಶ್ವರ ಖಂಡ್ರೆ ತಂತ್ರವೇನು?
ಬೀದರ್ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಹೊಣೆ ಸಚಿವ ಈಶ್ವರ ಖಂಡ್ರೆ ಅವರ ಮೇಲಿದೆ. ಸ್ವತಃ ಸಚಿವರು ಪ್ರತಿನಿಧಿಸುವ ಭಾಲ್ಕಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಈಗಾಗಲೇ ಘೋಷಣೆ ಮಾಡಿದೆ.

2013ರ ಫಲಿತಾಂಶ
2013ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಬಿಜೆಪಿ ಕೇವಲ 1 ಸ್ಥಾನದಲ್ಲಿ (ಔರಾದ್) ನಲ್ಲಿ ಮಾತ್ರ ಜಯಗಳಿಸಿದೆ. ಕೆಜೆಪಿ-ಬಿಜೆಪಿ ಮತ ವಿಭಜನೆ ಕಾರಣದಿಂದಾಗಿ ಪಕ್ಷಕ್ಕೆ ಹಿನ್ನಡೆ ಉಂಟಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ಬಿಜೆಪಿ ತಂತ್ರ ರೂಪಿಸಿದೆ.











Click it and Unblock the Notifications