ವಿಧಾನ ಪರಿಷತ್ ಚುನಾವಣೆ; ಪ್ರಭಾರಿಗಳ ನೇಮಕ ಮಾಡಿದ ಬಿಜೆಪಿ
ಬೆಂಗಳೂರು, ಮೇ 18: ಕರ್ನಾಟಕ ವಿಧಾನ ಪರಿಷತ್ನ 3 ಪದವೀಧರ ಮತ್ತು 3 ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದೆ. ಜೂನ್ 3ರಂದು ಚುನಾವಣೆ ನಡೆಯಲಿದ್ದು, ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಪಕ್ಷ ಚುನಾವಣೆ ಎದುರಿಸುತ್ತಿದೆ.
ವಿಧಾನ ಪರಿಷತ್ನ 3 ಪದವೀಧರ ಮತ್ತು 3 ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಪ್ರಭಾರಿಗಳನ್ನು ನೇಮಕ ಮಾಡಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡಿದ್ದು, ನಾಮಪತ್ರ ವಾಪಸ್ ಪಡೆಯಲು ಮೇ 20 ಕೊನೆಯ ದಿನವಾಗಿದೆ.

ಈಶಾನ್ಯ ಪದವೀಧರ ಕ್ಷೇತ್ರದ ಡಾ. ಚಂದ್ರಶೇಖರ ಪಾಟೀಲ, ನೈಋತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ, ಬೆಂಗಳೂರು ಪದವೀಧರ ಕ್ಷೇತ್ರದ ಎ. ದೇವೇಗೌಡ ಜೂನ್ 21ರಂದು ನಿವೃತ್ತರಾಗಲಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಡಾ. ವೈ. ಎ. ನಾರಾಯಣ ಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದ ಎಸ್. ಎಲ್. ಭೋಜೇಗೌಡ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇ ಗೌಡ ಸಹ ನಿವೃತ್ತರಾಗಲಿದ್ದು, ಈ 6 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದರೂ ಸಹ ಬಂಡಾಯದ ಬಿಸಿ ತಟ್ಟಿದೆ. ಆದ್ದರಿಂದ ಬಿಜೆಪಿ ಘಟಕ ಬಂಡಾಯ ಶಮನ, ಚುನಾವಣಾ ಪ್ರಚಾರಕ್ಕಾಗಿ ಪ್ರಭಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಯಾವ ಕ್ಷೇತ್ರಕ್ಕೆ ಯಾರು ಪ್ರಭಾರಿಗಳು?
* ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಎನ್. ರವಿ ಕುಮಾರ್ ಪ್ರಭಾರಿಗಳು. ಕ್ಷೇತ್ರದ ವ್ಯಾಪ್ತಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ.
* ನೈಋತ್ಯ ಪದವೀಧರ, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಪ್ರಭಾರಿ, ರಾಜ್ಯ ಕಾರ್ಯದರ್ಶಿ ಡಿ. ಎಸ್. ಅರುಣ್ (ಸಹ ಪ್ರಭಾರಿ). ಕ್ಷೇತ್ರದ ವ್ಯಾಪ್ತಿ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ (ಹೊನ್ನಾಳಿ, ಚನ್ನಗಿರಿ ವಿಧಾನಸಭಾ ಕ್ಷೇತ್ರ).
* ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಜ್ಯ ಮುಖ್ಯ ವಕ್ತಾರಾದ ಅಶ್ವಥ್ ನಾರಾಯಣ ಪ್ರಭಾರಿಗಳು. ಕ್ಷೇತ್ರದ ವ್ಯಾಪ್ತಿ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ.
* ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಎಸ್. ನವೀನ್ ಪ್ರಭಾರಿಗಳು. ವ್ಯಾಪ್ತಿ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ದಾವಣಗೆರೆಯ (ಹರಿಹರ, ಜಗಳೂರು, ದಾವಣಗೆರೆ ವಿಧಾನಸಭಾ ಕ್ಷೇತ್ರಗಳು).
* ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷರಾದ ಎಂ. ರಾಜೇಂದ್ರ ಪ್ರಭಾರಿಗಳು. ಕ್ಷೇತ್ರದ ವ್ಯಾಪ್ತಿಗೆ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರುತ್ತದೆ.
ಅಭ್ಯರ್ಥಿ ಯಾರು?; ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮಾಜಿ ಎಂಎಲ್ಸಿ ಮರಿತಿಬ್ಬೇಗೌಡ ಕಾಂಗ್ರೆಸ್ ಅಭ್ಯರ್ಥಿ. ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ, ಬಿಜೆಪಿ ಅಭ್ಯರ್ಥಿ ಡಾ. ಇ. ಸಿ. ನಿಂಗರಾಜೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿ ಅಭ್ಯರ್ಥಿ ಯಾರು, ಮೈತ್ರಿ ಧರ್ಮ ಪಾಲನೆ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಮತ್ತೊಂದು ಕಡೆ ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ ಬಿಜೆಪಿ ಅಭ್ಯರ್ಥಿ. ಆದರೆ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿಯೂ ಸಹ ಯಾರು ಕಣದಲ್ಲಿ ಉಳಿಯಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಮೊದಲು ಘೋಷಣೆ ಮಾಡಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ನೈಋತ್ಯ ಶಿಕ್ಷಕರ ಕ್ಷೇತ್ರವನ್ನು ಮಾತ್ರ ಜೆಡಿಎಸ್ಗೆ ಬಿಟ್ಟು ಕೊಡಲಾಗಿದೆ. ಆದರೆ ಈಗ ದಕ್ಷಿಣ ಶಿಕ್ಷಕರ ಕ್ಷೇತ್ರ ಸಹ ಜೆಡಿಎಸ್ ಪಾಲಾಗುವ ನಿರೀಕ್ಷೆ ಇದೆ.












Click it and Unblock the Notifications