2 ಕ್ಷೇತ್ರದ ಉಪ ಚುನಾವಣೆ : ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ಬೆಂಗಳೂರು, ಏಪ್ರಿಲ್ 25 : ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕ ಬಿಜೆಪಿ ಎರಡು ಕ್ಷೇತ್ರಗಳ ಉಪ ಚುನಾವಣೆಯತ್ತ ಗಮನಹರಿಸಿದೆ. ಮೇ 19ರಂದು ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.
ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದಾಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ. ಸಿ.ಎಸ್.ಶಿವಳ್ಳಿ ಅವರ ನಿಧನದಿಂದಾಗಿ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಗಳು ತೆರವಾಗಿವೆ. ಉಪ ಚುನಾವಣೆ ದಿನಾಂಕ ಈಗಾಗಲೇ ಘೋಷಣೆಯಾಗಿದೆ.
ಚಿಂಚೋಳಿ, ಕುಂದಗೋಳ ಉಪ ಚುನಾವಣೆಯತ್ತ ಎಲ್ಲರ ಚಿತ್ತ
ಕರ್ನಾಟಕ ಬಿಜೆಪಿ ಗುರುವಾರ ಕೋರ್ ಕಮಿಟಿ ಸಭೆ ನಡೆಸಿದ್ದು ಎರಡೂ ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಅದರಲ್ಲೂ ಕುಂದಗೋಳ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಬಿಜೆಪಿ 634 ಮತಗಳ ಅಂತರದಲ್ಲಿ ಸೋಲು ಕಂಡಿತ್ತು. ಆದ್ದರಿಂದ, ಉಪ ಚುನಾವಣೆ ಗೆಲ್ಲಲು ತಂತ್ರ ರೂಪಿಸಿದೆ.
ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆ
ಎರಡೂ ಕ್ಷೇತ್ರಗಳ ಉಪ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ಪಾಲಿಗೆ ಪ್ರತಿಷ್ಠೆಯಾಗಿದೆ. ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರು. ಆದ್ದರಿಂದ, ಕ್ಷೇತ್ರವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕಿದೆ. ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ.....
ಚಿಂಚೋಳಿಗೆ ಉಸ್ತುವಾರಿಗಳು
ಮೇ 19ರಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ವಿ.ಸೋಮಣ್ಣ, ಲಕ್ಷ್ಮಣ್ ಸವದಿ, ರವಿ ಕುಮಾರ್, ಮಾಲೀಕಯ್ಯ ಗುತ್ತೇದಾರ್, ಬಾಬೂರಾವ್ ಚಿಂಚನಸೂರು ಅವರು ಚಿಂಚೋಳಿ ಕ್ಷೇತ್ರಕ್ಕೆ ಉಸ್ತುವಾರಿಯಾಗಿದ್ದಾರೆ.
ಕುಂದಗೋಳ ಕ್ಷೇತ್ರ
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೂ ಮೇ 19ರಂದು ಚುನಾವಣೆ ನಡೆಯಲಿದೆ. ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಪ್ರಹ್ಲಾದ್ ಜೋಶಿ ಕುಂದಗೋಳ ಕ್ಷೇತ್ರದ ಉಸ್ತುವಾರಿಗಳಾಗಿದ್ದಾರೆ.
600 ಮತಗಳ ಸೋಲು
ಕುಂದಗೋಳ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಸಿ.ಎಸ್.ಈಶ್ವರ ಗೌಡ ಅವರು ಅಭ್ಯರ್ಥಿಯಾಗಿದ್ದರು. 64,237 ಮತಗಳನ್ನು ಪಡೆದು ಕಾಂಗ್ರೆಸ್ನ ಸಿ.ಎಸ್.ಶಿವಳ್ಳಿ ಅವರ ವಿರುದ್ಧ ಕೇವಲ 634 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಈ ಬಾರಿ ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಬೇಕು ಎಂದು ಬಿಜೆಪಿ ತಂತ್ರ ರೂಪಿಸುತ್ತಿದೆ.
ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆ
ಚಿಂಚೋಳಿ ಕ್ಷೇತ್ರದಲ್ಲಿ ಜಯಗಳಿಸುವುದು ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಚಿಂಚೋಳಿಯಲ್ಲಿ ಕಾಂಗ್ರೆಸ್ನಿಂದ ಗೆದ್ದಿದ್ದ ಡಾ.ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದ್ದರಿಂದ, ಚಿಂಚೋಳಿಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವ ಪ್ರತಿಷ್ಠೆ ಬಿಜೆಪಿಗಿದೆ.