Siddaramaiah: ರಾಜೀನಾಮೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು
ಚಿಕ್ಕಬಳ್ಳಾಪುರ, ಜೂನ್ 11: ಆರ್ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರ್ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿದೆ. ಪೊಲೀಸ್ ಇಲಾಖೆ ಕೊಟ್ಟ ಸಲಹೆ ಸ್ವೀಕರಿಸದೇ, ಬೇಡ ಅಂದ್ರು ದಿಢೀರ್ ಕಾರ್ಯಕ್ರಮ ಆಯೋಜಿಸಿ 11 ಮುಗ್ದ ಜೀವಗಳ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ನೀಡ್ಬೇಕು ಎಂದು ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಸಿಎಂ ಸಿದ್ದರಾಮಯ್ಯ, ರಾಜೀನಾಮೆ ಅಂತಿದ್ದಂತೆ ಫುಲ್ ಗರಂ ಆಗಿ ಮಾತಾಡಿದ್ದಾರೆ.
ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.
ಇಡಿ ಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಜಾತಿ ಗಣತಿ ಬಗ್ಗೆ ಕೆಲವು ದೂರುಗಳು ಬಂದಿವೆ. ಸಮೀಕ್ಷೆ ನಡೆದು 10 ವರ್ಷಗಳಾಗಿದ್ದು, ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ. ವರದಿಯನ್ನು ನಾವು ತಿರಸ್ಕರಿಸುವುದಿಲ್ಲ. ತಾತ್ವಿಕವಾಗಿ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದರು.
ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ನಾಮಕರಣ ಮಾಡಲು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟದ ಮುಂದೆ ಬಂದಾಗ ಪರಿಶೀಲಿಸಲಾಗುವುದು ಎಂದರು. ಕಾಂತರಾಜ ಆಯೋಗ ವರದಿ ಬಗ್ಗೆ ಪಕ್ಷದ ವರಿಷ್ಠರ ನಿರ್ಧಾರ ಮುಖ್ಯಮಂತ್ರಿಗಳಿಗೆ ನಿರಾಸೆ ತಂದಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಪಕ್ಷದ ವರಿಷ್ಠರು ನಿರ್ಧಾರ ಮಾಡಿದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಇದು ನಮ್ಮ ತೀರ್ಮಾನವಲ್ಲ ಎಂದರು.
ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾತನಾಡಿ ಖಾಲಿ ಇರುವಡೆಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇನ್ನು ಹೆಚ್ಚಿನ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು, ಅವರ ವೇತನವನ್ನು ಹೆಚ್ಚಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ನಮ್ಮ ಸರ್ಕಾರ ಒತ್ತುನೀಡಿದೆ ಎಂದರು.












Click it and Unblock the Notifications