ಈ ಸೋಲು ನಮಗೆ ಸೋಲೆ ಅಲ್ಲ- ಬಿಜೆಪಿ ಪರಾಜಿತ ಅಭ್ಯರ್ಥಿ ಬಂಗಾರಿ ಹನುಮಂತು
ಸಂಡೂರು, ನವೆಂಬರ್ 23: ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಜಯ ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಸೋಲೊಪ್ಪಿಕೊಂಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸೋಲಿನ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ. ಯಾರ ಮೇಲೂ ಇದನ್ನು ಹೊರಿಸಲ್ಲ. ಕಾಂಗ್ರೆಸ್ ಹಣ ಬಲದಿಂದ ಈ ಚುನಾವಣೆ ಗೆದ್ದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇಲ್ಲಿಯೇ ಠಿಕಾಣಿ ಹೂಡಿ ಪ್ರಚಾರ ನಡೆಸಿದ್ದರು. ಸಚಿವ ಶಿವರಾಜ ತಂಗಡಗಿ ಉಸ್ತುವಾರಿ ಹೊತ್ತಿದ್ದ ಪ್ರದೇಶ ಸೇರಿ ಸಚಿವರು ಇದ್ದ ಪ್ರದೇಶದಲ್ಲಿ ನಮಗೆ ಹಿನ್ನಡೆ ಆಗಿದೆ. ಅಂಕಿ-ಅಂಶಗಳ ಪ್ರಕಾರ ಈ ಒಂದು ಸೋಲು ನಮಗೆ ಸೋಲೆ ಅಲ್ಲ. ಚುನಾವಣೆ ಹತ್ತಿರ ಇದ್ದಾಗ ಎಲ್ಲ ಮಹಿಳೆಯರ ಖಾತೆಗೆ ಎರಡು ಸಾವಿರ ಹಣ ಹಾಕಿದರು. ಎರಡು ಸಾವಿರ ಕೊಟ್ಟು ಮತಗಳನ್ನು ಖರೀದಿ ಮಾಡಿದರು ಎಂದು ಸಂಡೂರಿನಲ್ಲಿ ಪರಾಜಿತ ಅಭ್ಯರ್ಥಿ ಬಂಗಾರಿ ಹನುಮಂತು ಹೇಳಿದ್ದಾರೆ.
ಮಾತು ಮುಂದುವರಿಸಿದ ಬಂಗಾರಿ ಹನುಮಂತು 2028ರಲ್ಲಿ ಸಂಡೂರಲ್ಲಿ ಬಿಜೆಪಿ ಬಾವುಟ ಹಾರಿಸುತ್ತೇವೆ. ನಾನು ಅಲ್ಲಿಯೇ ಮನೆ ಮಾಡಿ ಜನರ ಜೊತೆಗೆ ಇರುತ್ತೇನೆ. 2028ರಲ್ಲಿ ಯಾರೇ ಅಭ್ಯರ್ಥಿ ಆಗಲಿ ಒಗ್ಗಟ್ಟಿನಿಂದ ತುಕಾರಾಂ, ಸಂತೋಷ ಲಾಡ್ ಅವರನ್ನು ಸೋಲಿಸುತ್ತೇವೆ ಎಂದು ಮುಂದಿನ ಚುನಾವಣೆಗೆ ಭರವಸೆ ವ್ಯಕ್ತಪಡಿಸಿದರು. ಇನ್ನು ಕರ್ನಾಟಕದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಹಾಗೂ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆಲುವಿನತ್ತ ಹೆಜ್ಜೆ ಹಾಕಿದ್ದಾರೆ.
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ಹಾದಿಯಲ್ಲಿದೆ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೆ ಹಿನ್ನೆಡೆಯಾಗದೆ. ಜೊತೆಗೆ ಚನ್ನಪಟ್ಟಣದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿಗೂ ಹಿನ್ನೆಡೆಯಾಗಿದೆ. ಮೂರು ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿ ನಾಯಕರಿಗೆ ಭಾರೀ ಹಿನ್ನೆಡೆಯಾಗಿದೆ. ಪಕ್ಷದಲ್ಲಿನ ಅಸಮಾಧಾನಗಳೇ ಈ ಸಾಲು ಸಾಲು ಸೋಲಿಗೆ ಕಾರಣ ಎಂದು ಬಿಜೆಪಿ ಕಾರ್ಯಕರ್ತರು ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.












Click it and Unblock the Notifications