ಕೋಲಾರ; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿ ಅಂತಿಮ?
ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಪ್ರತಿಪಕ್ಷ ನಾಯಕ, ಬಾದಾಮಿಯ ಹಾಲಿ ಶಾಸಕ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅವರ ಎದುರು ಬಿಜೆಪಿ ಅಭ್ಯರ್ಥಿ ಯಾರು?
ಬೆಂಗಳೂರು, ಫೆಬ್ರವರಿ 13; "ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ" ಎಂದು ಬಾದಾಮಿ ಕ್ಷೇತ್ರದ ಹಾಲಿ ಶಾಸಕ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜನವರಿಯಲ್ಲಿ ಸಿದ್ದರಾಮಯ್ಯ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಈ ಘೋಷಣೆ ಮಾಡಿದ ಬಳಿಕ ಎದ್ದಿರುವ ಪ್ರಶ್ನೆ ಒಂದೇ. ಸಿದ್ದರಾಮಯ್ಯ ಎದುರಾಳಿ ಯಾರು?. ಅದರಲ್ಲೂ ಬಿಜೆಪಿ ಅಭ್ಯರ್ಥಿ ಯಾರು?.
2018ರಲ್ಲಿ ಜೆಡಿಎಸ್ ಗೆಲುವು ಕಂಡಿದ್ದ ಕ್ಷೇತ್ರ ಕೋಲಾರ. ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ಪರ್ಧೆಯ ಮೂಲಕ ಈ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಈ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದು ಅಂದಿನಿಂದಲೂ ಚರ್ಚೆಯ ವಿಷಯವಾಗಿದೆ.
ಕೋಲಾರ ಕ್ಷೇತ್ರದ ಹಾಲಿ ಶಾಸಕ ಕೆ. ಶ್ರೀನಿವಾಸ ಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ. ಅವರು ಈಗಾಗಲೇ ಸಿದ್ದರಾಮಯ್ಯ ಸ್ಪರ್ಧೆಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಆದರೆ ಅವರು ಸೋಮವಾರ ಆಡಿರುವ ಮಾತು ಕೋಲಾರಕ್ಕೆ ಬಿಜೆಪಿ ಅಭ್ಯರ್ಥಿ ಅಂತಿಮವಾಗಿದೆಯೇ? ಎಂಬ ಚರ್ಚೆ ಹುಟ್ಟು ಹಾಕಿದೆ.

ಕೆ. ಶ್ರೀನಿವಾಸ ಗೌಡ ಹೇಳಿದ್ದೇನು?
ಸೋಮವಾರ ಮಾತನಾಡಿದ ಕೆ. ಶ್ರೀನಿವಾಸ ಗೌಡ, "ಸಿದ್ದರಾಮಯ್ಯ ವಿರುದ್ದ ಸ್ಪರ್ಧಿಸಲು ಕೋಲಾರ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷರಿಗೆ ಬಿಜೆಪಿ ಟಿಕೆಟ್ ಆಫರ್ ನೀಡಲಾಗಿದೆ" ಎಂದು ಹೊಸ ಬಾಂಬ್ ಸಿಡಿಸಿದರು.
ಈ ಹಿಂದೆ ಮಾತನಾಡಿದ್ದ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. "ಕೆಲವರು ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ ನಿಮಗಾಗಿ ನಾವು ಒಂದು ಹೆಲಿಕಾಪ್ಟರನ್ನೇ ಖರೀದಿ ಮಾಡಿ ಕೊಡುತ್ತೇವೆ, ನೀವು ಅದರಲ್ಲೇ ವಾರಕ್ಕೊಮ್ಮೆ ಬಂದು ಹೋದರೆ ಸಾಕು, ಇಲ್ಲೇ ನಿಲ್ಲಿ ಎನ್ನುತ್ತಿದ್ದಾರೆ" ಎಂದು ಹೇಳಿದ್ದರು.

ಯಾರಾಗಲಿದ್ದಾರೆ ಬಿಜೆಪಿ ಅಭ್ಯರ್ಥಿ?
ಕೆ. ಶ್ರೀನಿವಾಸ ಗೌಡ ಮಾತನಾಡಿ, "ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರಿಂದ ಆಫರ್ ನೀಡಲಾಗಿದೆ ಎನ್ನಲಾಗುತ್ತಿದೆ. ಜನವರಿ 25ರಂದು ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಾರೆಡ್ಡಿ ಮನೆಗೆ ಸುಧಾಕರ್ ಭೇಟಿ ನೀಡಿದ್ದು, ನಾವೇ ದುಡ್ಡು ಕೊಡುತ್ತೇವೆ, ಚುನಾವಣೆಗೆ ನಿಂತುಕೊಳ್ಳಿ ಎಂದು ಹೇಳಿದ್ದಾರೆ" ಎಂದರು.
ಹಾಗಾದರೆ ಕೃಷ್ಣಾರೆಡ್ಡಿ ಅವರೇ ಸಿದ್ದರಾಮಯ್ಯ ಎದುರು ಬಿಜೆಪಿ ಅಭ್ಯರ್ಥಿಯೇ? ಎಂಬ ಪ್ರಶ್ನೆ ಎದುರಾಗಿದೆ. ಕೋಲಾರ ಕ್ಷೇತ್ರದಲ್ಲಿ ಬಿಜೆಪಿಗೆ ಹೇಳಿಕೊಳ್ಳುವಷ್ಟು ಪ್ರಭಾವ ಇಲ್ಲ. ಆದರೆ ಈ ಬಾರಿಯ ಚುನಾವಣೆಯಲ್ಲಿ ಏನಾಗಲಿದೆ? ಎಂದು ಕಾದು ನೋಡಬೇಕು.

ಕಳೆದ ಚುನಾವಣೆ ಫಲಿತಾಂಶ
2018ರ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ನ ಕೆ. ಶ್ರೀನಿವಾಸ ಗೌಡ 82788 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ಸೈಯದ್ ಜಮೀರ್ ಪಾಷ 38537 ಮತಗಳನ್ನು ಪಡೆದಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಆರ್. ವೆಂಕಟಾಚಲಪತಿ ಪಡೆದಿದ್ದು ಕೇವಲ 12,458 ಮತಗಳು.
ಆದರೆ ಈ ಬಾರಿಯ ಚಿತ್ರಣ ಬೇರೆಯಾಗಿದೆ. ಸಿದ್ದರಾಮಯ್ಯ ಸೋಲಿಸಬೇಕು ಎಂದು ಬಿಜೆಪಿ ಪಣತೊಟ್ಟಿದೆ. ಬಿ. ಎಲ್. ಸಂತೋಷ್ ಈಗಾಗಲೇ ಕೋಲಾರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಕೋಲಾರದಲ್ಲಿ ಪ್ರಭಾವಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತವಾಗಿದೆ.

ಹೈಕಮಾಂಡ್ ಫೈನಲ್ ಮಾಡಿಲ್ಲ
ಸಿದ್ದರಾಮಯ್ಯ ಕೋಲಾರದಲ್ಲಿ ಮಾತನಾಡಿ, "ಕೋಲಾರದಲ್ಲಿ ಜನ ಮತ್ತು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ನೀವು ಇಲ್ಲಿಂದ ಸ್ಪರ್ಧೆ ಮಾಡಿದರೆ ನಾನು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡದೆ ನಿಮಗೆ ಬೆಂಬಲ ನೀಡುತ್ತೇನೆ ಎನ್ನುತ್ತಿದ್ದಾರೆ. ಇಲ್ಲಿನ ಜನರ ಪ್ರೀತಿ ಅಭಿಮಾನವನ್ನು ನಾನು ತಿರಸ್ಕಾರ ಮಾಡಲಾರೆ. ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ" ಎಂದು ಹೇಳಿದ್ದಾರೆ.
"ಆದರೆ ಹೈಕಮಾಂಡ್ನ ಅನುಮತಿ ಮೇರೆಗೆ ನನ್ನ ಸ್ಪರ್ಧೆ ನಿರ್ಧಾರವಾಗಲಿದೆ. ಸಿದ್ದರಾಮಯ್ಯ ಎಂಬ ಕಾರಣಕ್ಕೆ ಪಕ್ಷದಲ್ಲಿ ನನಗೊಬ್ಬನಿಗೇ ವಿಶೇಷ ಅವಕಾಶ, ಸೌಲಭ್ಯ ಇಲ್ಲ, ಪಕ್ಷದಲ್ಲಿ ಯಾರೇ ಆಗಲಿ ಎಲ್ಲರೂ ಹೈಕಮಾಂಡ್ನ ಅನುಮತಿ ಪಡೆದು ಸ್ಪರ್ಧೆ ಮಾಡಬೇಕು. ಅದರಂತೆ ನನಗೂ ಹೈಕಮಾಂಡ್ ಅನುಮತಿ ನೀಡಿದರೆ ಇಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ" ಎಂದು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications