BJP Candidates: ಮಾರ್ಚ್ 22ಕ್ಕೆ ಉಳಿದ 5 ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮ: ಸಿಎಂ ಬಿಎಸ್ ಯಡಿಯೂರಪ್ಪ
ಬೆಂಗಳೂರು, ಮಾರ್ಚ್ 20: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಇಪ್ಪತ್ತು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು ಉಳಿದ 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಅಳೆದು ತೂಗಿ ಅಭ್ಯರ್ಥಿ ಆಯ್ಕೆ ನಡೆಯುತ್ತಿದೆ. ಹೀಗಾಗಿಯೇ ಐದು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಕಾತುರ ಹೆಚ್ಚಾಗಿಯೇ ಇದೆ.
ಅಭ್ಯರ್ಥಿ ಘೋಷಣೆ ಬಳಿಕ ರಾಜ್ಯದಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಪ್ರಯತ್ನ ತುಸು ಹೆಚ್ಚಾಗಿಯೇ ಇದೆ. ಕುತೂಹಲಗಳ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದ ಉಳಿದ ಐದು ಲೋಕಸಭಾ ಸ್ಥಾನಗಳಿಗೆ ಪಕ್ಷವು ಶುಕ್ರವಾರದೊಳಗೆ (ಮಾರ್ಚ್ 22) ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ ಎಂದು ಬುಧವಾರ ಹೇಳಿದ್ದಾರೆ.

ರಾಜ್ಯದ ಲಿಂಗಾಯತ ಸಮುದಾಯದ ಪ್ರಬಲ ವ್ಯಕ್ತಿ ಮತ್ತು ಪಕ್ಷದ ಪ್ರಮುಖರಾದ ಬಿಎಸ್ ಯಡಿಯೂರಪ್ಪ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, "ನಿನ್ನೆ ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಉಳಿದ ಐದು ಕ್ಷೇತ್ರಗಳ ಬಗ್ಗೆ ವಿವರವಾದ ಚರ್ಚೆ ನಡೆಸಿದ್ದೇವೆ. ಮಾರ್ಚ್ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುವುದು" ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಮತ್ತೆ ಗೆಲುವಿನ ದಾಖಲೆ ಬರೆಯುವುದಾಗಿ, ಪಕ್ಷ ಗೆಲುವು ದಾಖಲಿಸುವುದಾಗಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿಯಾಗಿರುವುದರಿಂದ ಈ ಬಾರಿ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ನೇತೃತ್ವದ ಬಿಜೆಪಿ ಮತ್ತು ಜಾತ್ಯತೀತ ಜನತಾ ದಳ ಈ ಬಾರಿ ಎನ್ಡಿಎ ಮೈತ್ರಿಕೂಟಕ್ಕೆ ಕೈಜೋಡಿಸಿದ್ದು, ಮುಂಬರುವ ನಿರ್ಣಾಯಕ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲು ಸಿದ್ಧವಾಗಿವೆ. ಆದರೆ, ಚುನಾವಣೆಗೂ ಮುನ್ನ ಸೀಟು ಹಂಚಿಕೆ ವಿಷಯಗಳ ಕುರಿತು ಈಗಾಗಲೇ ಭಿನ್ನಮತ ಕೇಳಿಬರುತ್ತಿದೆ.

ಬಿಜೆಪಿ - ಜೆಡಿಎಸ್ ಸೀಟು ಹಂಚಿಕೆಯಲ್ಲಿನ ಭಿನ್ನಮತದ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ, "ಎಲ್ಲಾ ಜೆಡಿಎಸ್ (ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ಎಲ್ಲಾ ಜೆಡಿಎಸ್) ನಾಯಕರು ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಅವರ ಪುತ್ರ ಎಚ್ ಡಿ ಕುಮಾರಸ್ವಾಮಿ ನಮ್ಮೊಂದಿಗಿರುತ್ತಾರೆ. ನಮ್ಮ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಅವರು ಒಪ್ಪಿದ ನಂತರ, ಎಲ್ಲವೂ ಸರಿಯಾಗಲಿದೆ. ಅವರು ಬಯಸುತ್ತಿರುವ ಸ್ಥಾನಗಳನ್ನು ಅವರಿಗೆ ನೀಡಲು ನಾವು ಪ್ರಯತ್ನಿಸುತ್ತೇವೆ" ಎಂದು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಹೀನಾಯವಾಗಿ ಸೋತಿರುವ ಬಿಜೆಪಿ, ಮತ್ತೆ ರಾಜ್ಯದಲ್ಲಿ ಎದ್ದು ನಿಲ್ಲಲು ಪ್ರಯತ್ನಿಸುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಈ ಬಾರಿ 20 ರಿಂದ 22ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹಲವು ಸಮೀಕ್ಷೆಗಳು ಬಹಿರಂಗಪಡಿಸಿವೆ. ಆದರೂ ಕಾಂಗ್ರೆಸ್ ಮಾತ್ರ ತಾನು 22ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದೆ.












Click it and Unblock the Notifications