ಯಡಿಯೂರಪ್ಪ ಮನೆ ಮುಂದೆ ಪ್ರತಿಭಟನೆ ಯಾರು, ಏನು ಹೇಳಿದರು?
ಬೆಂಗಳೂರು, ಸೆಪ್ಟೆಂಬರ್ 20 : ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ ಮುಂದೆ ಗುರುವಾರ ನಡೆದ ಪ್ರತಿಭಟನೆ ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಯುವ ಕಾಂಗ್ರೆಸ್ ಸದಸ್ಯರು ಯಡಿಯೂರಪ್ಪ 'ಧವಳಗಿರಿ' ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು.
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿತ್ತು.
ಬಿಎಸ್ವೈ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ, ಶಾಸಕರೊಂದಿಗೆ ಜಟಾಪಟಿ
ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಎಲ್ಲರಿಗೂ ಗೊತ್ತು. ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಯಡಿಯೂರಪ್ಪ ಮನೆ ಮುಂದೆ ಗೂಂಡಾಗಿರಿ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ದೂರಿದ್ದಾರೆ. ಸರ್ಕಾರದ ವಿರುದ್ಧ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರ್ಕಾರ ರಚನೆ ಮಾಡುವ ಹೊಣೆ ಯಡಿಯೂರಪ್ಪ ಹೆಗಲಿಗೆ
ಯಡಿಯೂರಪ್ಪ ಮನೆ ಮುಂದೆ ಪ್ರತಿಭಟನೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಒತ್ತಾಯಿಸಿದ್ದಾರೆ. ಯಾವ ನಾಯಕರು ಏನು ಹೇಳಿದರೂ ಚಿತ್ರಗಳಲ್ಲಿ ನೋಡಿ....
ಸಿಎಂ ರ 'ದಂಗೆ' ಹೇಳಿಕೆಗೆ ಬಿಜೆಪಿ ಆಕ್ರೋಶ, ಪ್ರಕರಣ ದಾಖಲಿಸಲು ನಿರ್ಧಾರ
|
ಕಾರ್ಯಕರ್ತರನ್ನು ಬಂಧಿಸಿ
ಯಡಿಯೂರಪ್ಪ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಒತ್ತಾಯಿಸಿದ್ದಾರೆ.
ಪ್ರತಿಭಟನೆಗೆ ಕುಮಾರಸ್ವಾಮಿ ಕಾರಣ
'ಯಡಿಯೂರಪ್ಪ ಅವರ ಮನೆ ಮುಂದೆ ಯುವ ಕಾಂಗ್ರೆಸ್ನವರು ಪ್ರತಿಭಟನೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಕಾರಣ. ಕುಮಾರಸ್ವಾಮಿ ದಂಗೆ ಏಳಿ ಎಂದು ಅಂದಾಕ್ಷಣ ಕಾಂಗ್ರೆಸ್ ನಾಯಕರು ವಿರೋಧ ಪಕ್ಷದ ನಾಯಕರ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿತ್ತು?' ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷ ನಾಯಕರ ಮನೆಗೆ ರಕ್ಷಣೆ ಇಲ್ಲ
'ರಾಜ್ಯದಲ್ಲಿ ಪ್ರತಿಪಕ್ಷ ನಾಯಕರ ಮನೆಗೆ ರಕ್ಷಣೆ ಇಲ್ಲ. ಯಡಿಯೂರಪ್ಪ ಮನೆಯ ಮುಂದೆ ಪ್ರತಿಭಟನೆ ನಡೆಸಿದವರನ್ನು ಬಂಧಿಸಿ, ಇದಕ್ಕೆ ಯಾರೂ ದೂರು ಕೊಡುವ ಅಗತ್ಯವಿಲ್ಲ. ಗೃಹ ಸಚಿವರು ನಪುಂಸಕರ ರೀತಿ ವರ್ತಿಸದೇ ಕುಮಾರಸ್ವಾಮಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು' ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಒತ್ತಾಯಿಸಿದರು.
ಕುಮಾರಸ್ವಾಮಿ ಪ್ರಚೋದನೆ
ಯಡಿಯೂರಪ್ಪ ನಿವಾಸದ ಮುಂದೆ ಮಾತನಾಡಿದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, 'ಕಾಂಗ್ರೆಸ್ ಕಾರ್ಯಕರ್ತರು ಯಡಿಯೂರಪ್ಪ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ಇದಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ನಾವೂ ಕೂಡ ತಾಯಿ ಹಾಲು ಕುಡಿದು ಬೆಳೆದ ಮಕ್ಕಳೇ. ನಮಗೂ ಹೇಗೆ ಉತ್ತರ ಕೊಡಬೇಕು ಎಂದು ತಿಳಿದಿದೆ' ಎಂದರು.
ಪೊಲೀಸರು ಕ್ರಮ ಕೈಗೊಂಡಿಲ್ಲ
'ಕುಮಾರಸ್ವಾಮಿ ಅವರು ದಂಗೆ ಎಬ್ಬಿಸುವ ಹೇಳಿಕೆ ನೀಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಯಡಿಯೂರಪ್ಪ ಮನೆ ಮೇಲೆ ದಾಳಿ ಮಾಡಿದ್ದಾರೆ. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಆರೋಪಿಸಿದರು.