'2015 ಸಿಎಂ ಸಿದ್ದರಾಮಯ್ಯ ಅವರಿಗೆ ಶುಭ ಸೂಚಕವಲ್ಲ'
ಬೆಂಗಳೂರು, ಜ.14 : ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿಕೆ ಮತ್ತೊಮ್ಮೆ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆ ಆಡಳಿತ ಮತ್ತು ಪ್ರತಿಪಕ್ಷಗಳ ಮಾತಿನ ಸಮರಕ್ಕೆ ಕಾರಣವಾಗಿದೆ. 'ಸಿಎಂ ಸಿದ್ದರಾಮಯ್ಯ ಅವರಿಗೆ 2015 ಶುಭ ಸೂಚಕವಲ್ಲ' ಎಂದು ಬಿಜೆಪಿ ನಾಯಕರು ಭವಿಷ್ಯ ನುಡಿದಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಸಿ.ಟಿ.ರವಿ ಅವರು 'ಹೊಸ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಲಿಗೆ ಶುಭ ಸೂಚಕವಲ್ಲ' ಎಂದು ಭವಿಷ್ಯ ನುಡಿದಿದ್ದಾರೆ. ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿಕೆ ಸೃಷ್ಟಿಯಾಗಿರುವುದು ದೆಹಲಿಯಲ್ಲಿ ಎಂದು ಹೇಳಿ ಕುತೂಹಲ ಮೂಡಿಸಿದ್ದಾರೆ. [ದಲಿತ ನಾಯಕರು ಮುಖ್ಯಮಂತ್ರಿ : ಯಾರು, ಏನು ಹೇಳಿದರು?]
ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಚ್.ಆಂಜನೇಯ, ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಹ ದಲಿತರು ಮುಖ್ಯಮಂತ್ರಿಯಾಗುವ ಬಗ್ಗೆ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಅಂದಹಾಗೆ ನಮ್ಮ ಸಿಎಂ ಸಿದ್ದರಾಮಯ್ಯ ಅವರದ್ದು ವೃಶ್ಚಿಕ ರಾಶಿ, 2015ರಲ್ಲಿ ವೃಶ್ಚಿಕ ರಾಶಿಯವರ ಭವಿಷ್ಯ ಏನೆಂದು ತಿಳಿದುಕೊಳ್ಳಿ. ಯಾರು ಏನು ಹೇಳಿದರು ಎಂಬುದನ್ನು ನೋಡೋಣ ಬನ್ನಿ. [ಯಾವ ರಾಶಿಗೆ ಸಾಡೇಸಾತಿಯಾಗಿ ಕಾಡಲಿದ್ದಾನೆ ಶನಿದೇವ?]

2015 ಸಿದ್ದರಾಮಯ್ಯ ಪಾಲಿಗೆ ಶುಭಸೂಚಕವಲ್ಲ
2015ರ ಹೊಸ ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಲಿಗೆ ಶುಭ ಸೂಚಕವಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ. ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿಕೆ ದೆಹಲಿಯಲ್ಲಿ ಸೃಷ್ಟಿಯಾಗಿದೆ ಎಂಬ ಮಾಹಿತಿ ಇದೆ. ಈ ವರ್ಷದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಭಿನ್ನಮತ ಭುಗಿಲೇಳುವುದು ನಿಶ್ಚಿತವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿನ ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ಈ ಹೊಸ ವರ್ಷ ಸಿದ್ದರಾಮಯ್ಯ ಅವರಿಗೆ ಕಂಟಕಪ್ರಾಯವಾಗಬಹುದು ಎಂದು ಅವರು ಹೇಳಿದ್ದಾರೆ.

ಇಂತಹ ಯಾವುದೇ ನಿರ್ಧಾರವಿಲ್ಲ
ಸಿಎಂ ಸಿದ್ದರಾಮಯ್ಯ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಲಿತರಿಗೆ ಮುಖ್ಯಮಂತ್ರಿ ಪಟ್ಟ ಎಂಬ ಚರ್ಚೆಯೇ ಈಗ ಅಪ್ರಸ್ತುತ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದಲಿತ ಮುಖ್ಯಮಂತ್ರಿಯನ್ನು ಆಯ್ಕೆಮಾಡುವ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ದಲಿತರಿಗೆ ಮುಖ್ಯಮಂತ್ರಿ ಪಟ್ಟ ಎಂಬ ಅರ್ಥದಲ್ಲಿ ದಲಿತರನ್ನು ಪ್ರಚೋದಿಸುವ ಹೇಳಿಕೆ ಸರಿಯಲ್ಲ. ಇಂತಹ ಹೇಳಿಕೆಗಳಿಂದ ದಲಿತರೂ ಪ್ರಚೋದನೆಗೆ ಒಳಗಾಗಬಾರದು ಎಂದು ಅವರು ಹೇಳಿದ್ದಾರೆ.

ಪ್ರತಿಕ್ರಿಯೆ ಕೊಡೋಲ್ಲ : ಪರಮೇಶ್ವರ್
ದಲಿತರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಕೆಲ ಸಚಿವರು ಯಾವ ಅರ್ಥದಲ್ಲಿ ಹೇಳುತ್ತಿದ್ದಾರೋ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಒಂದೇ ಸಮುದಾಯಕ್ಕೆ ಸೀಮಿತನಾಗಲು ಸಾಧ್ಯವಿಲ್ಲ. ಎಲ್ಲಾ ಸಮುದಾಯಗಳನ್ನೂ ಜತೆಯಲ್ಲಿ ಒಯ್ಯುವ ಹೊಣೆಯಿದೆ ಎಂದು ಅವರು ತಿಳಿಸಿದ್ದಾರೆ.

ಸದ್ಯಕ್ಕೆ ಸಿಎಂ ಮಾಡುವ ಅವಕಾಶ ಉದ್ಭವ ಆಗುವುದಿಲ್ಲ
'ದಲಿತರನ್ನು ಮುಖ್ಯಮಂತ್ರಿ ಮಾಡುವ ಅವಕಾಶ ಸದ್ಯಕ್ಕೆ ಉದ್ಭವ ಆಗುವುದಿಲ್ಲ. 2018ರ ನಂತರ ಈ ಬಗ್ಗೆ ಚರ್ಚಿಸೋಣ' ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹೈ ಕಮಾಂಡ್ ನಾಯಕರು ಯಾರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದರೂ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ದಲಿತರಿಗೆ ಮುಖ್ಯಮಂತ್ರಿ ಅವಕಾಶ ಸದ್ಯಕ್ಕೆ ಉದ್ಭವಿಸುವುದಿಲ್ಲ ಎಂದು ಹೇಳಿದರು.

ಬಿಜೆಪಿಯವರಿಗೆ ಆಂಜನೇಯ ಸವಾಲು
ದಲಿತರಿಗೆ ಕಾಂಗ್ರೆಸ್ ಪಕ್ಷ ಸಿಎಂ ಸ್ಥಾನ ನೀಡಲಿ ಎಂದು ಹೇಳುತ್ತಿರುವ ಬಿಜೆಪಿ ಮೊದಲು ತಮ್ಮ ಪಕ್ಷದ ದಲಿತ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಕೇಂದ್ರ ಸಚಿವ ಸ್ಥಾನ ಕೊಡಿಸಲಿ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಸವಾಲು ಹಾಕಿದ್ದಾರೆ. ದಲಿತರು ಮುಖ್ಯಮಂತ್ರಿಯಾಗಬೇಕು ಎಂಬುದರಲ್ಲಿ ಯಾವ ತಕರಾರೂ ಇಲ್ಲ. ಸಿದ್ದರಾಮಯ್ಯ ಅವರು ದಲಿತರು ಮುಖ್ಯಮಂತ್ರಿಯಾಗಬೇಕು ಎಂದಿದ್ದಾರೆ. 2018ರ ವಿಧಾನಸಭೆ ಚುನಾವಣೆ ನಂತರ ಹೈಕಮಾಡ್ ಈ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಖಡಕ್ ಉತ್ತರ
ರಾಜ್ಯಕ್ಕೆ ದಲಿತ ನಾಯಕನೊಬ್ಬ ಮುಖ್ಯಮಂತ್ರಿ ಆಗುವುದು ಖಚಿತ ಎಂಬ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಖಡಕ್ ಆದ ಉತ್ತರ ನೀಡಿದ್ದರು. 'ಈ ಬಗ್ಗೆ ಯಾರು ಹೇಳಿದ್ದರೋ ಅವರನ್ನೇ ಕೇಳಿಕೋಳ್ಳಿ, ನನ್ನನ್ನು ಏನು ಕೇಳ್ತಿರಿ' ಮಾಧ್ಯಮಗಳಿಗೆ ಪ್ರಶ್ನಿಸಿದ್ದರು.












Click it and Unblock the Notifications