ಲೋಕಸಭೆ ಚುನಾವಣೆ : ಬಿಜೆಪಿ ಕೋರ್ ಕಮಿಟಿ ಸಭೆ ನಿರ್ಣಯಗಳು
ಬೆಂಗಳೂರು, ಜುಲೈ 29 : ಲೋಕಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ತಯಾರಿ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಾಧನೆಗಳನ್ನು ಜನರಿಗೆ ತಿಳಿಸಲು ಆಗಸ್ಟ್ 9ರಿಂದ ಮೂರು ತಂಡಗಳಲ್ಲಿ ಬಿಜೆಪಿ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಶನಿವಾರ ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಪ್ರವಾಸದ ರೂಪುರೇಷೆಯನ್ನು ತಯಾರು ಮಾಡಲಾಯಿತು.
ಲೋಕಸಭೆ ಚುನಾವಣೆ : ಕರ್ನಾಟಕ ಕಾಂಗ್ರೆಸ್ ತೆಗೆದುಕೊಂಡ ನಿರ್ಧಾರಗಳು
ಸಭೆಯ ಬಳಿಕ ಮಾತನಾಡಿದ ಯಡಿಯೂರಪ್ಪ ಅವರು, 'ಪಕ್ಷ ಸಂಘಟನೆ ದೃಷ್ಟಿಯಿಂದ ಆ.9ರಿಂದ ಮೂರು ತಂಡಗಳು ಪ್ರತ್ಯೇಕವಾಗಿ ತಮಗೆ ವಹಿಸಿದ ಜಿಲ್ಲೆಗಳಲ್ಲಿ 8 ರಿಂದ 10 ದಿನಗಳ ಕಾಲ ಪ್ರವಾಸ ಮಾಡಲಿವೆ' ಎಂದು ಹೇಳಿದರು.
ಕರ್ನಾಟಕ ಅಖಂಡವಾಗಿರಬೇಕು ಎಂದು ಕಡೆಗೂ ದನಿಯೆತ್ತಿದ ಯಡಿಯೂರಪ್ಪ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳು ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಎಡವಟ್ಟುಗಳ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯ ಪ್ರವಾಸ ಕೈಗೊಳ್ಳಲಾಗಿದೆ. ಈ ಮೂಲಕ ಬಿಜೆಪಿ ಅಧಿಕೃತವಾಗಿ ಲೋಕಸಭೆ ಚುನಾವಣೆ ಪ್ರಚಾರವನ್ನು ಆರಂಭಿಸಲಿದೆ...
ವಿಧಾನಸಭೆ ಚುನಾವಣೆ ಸೋಲು
ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಅಧಿಕಾರದ ಹೊಸ್ತಿಲಿಗೆ ಬಂದು ಪಕ್ಷ ಎಡವಿದ ಬಗ್ಗೆ ನಾಯಕರು ಮಾತುಕತೆ ನಡೆಸಿದರು. 104 ಕ್ಷೇತ್ರಗಳಲ್ಲಿ ಪಕ್ಷ ಜಯಗಳಿಸಿತು. 250 ರಿಂದ 9000 ಮತಗಳ ಅಂತದಲ್ಲಿ 35 ಕಡೆ ಸೋಲು ಅನುಭವಿಸಲಾಗಿದೆ ಎಂಬ ಬಗ್ಗೆ ಚರ್ಚೆ ನಡೆಯಿತು.
ಟಿಕೆಟ್ ಹಂಚಿಕೆಯಲ್ಲಿ ಆದ ಗೊಂದಲ ಮತ್ತು ವಿಳಂಬ, ಇನ್ನಷ್ಟು ಜಾತಿ ಲೆಕ್ಕಾಚಾರಗಳನ್ನು ಇಟ್ಟುಕೊಂಡು ಟಿಕೆಟ್ ಹಂಚಿಕೆ ಮಾಡಿದ್ದರೆ ಗೆಲುವು ಸಾಧ್ಯವಿತ್ತು ಎಂದು ನಾಯಕರು ಸಭೆಯಲ್ಲಿ ಅಭಿಪ್ರಾಯಗಳನ್ನು ಹಂಚಿಕೊಂಡರು.
ಲೋಕಸಭೆ ಚುನಾವಣೆಗೆ ಸ್ಪರ್ಧೆ ಇಲ್ಲ
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಿತು. ಬಿ.ವೈ.ವಿಜಯೇಂದ್ರ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
'ಬಿ.ವೈ.ವಿಜಯೇಂದ್ರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮೈಸೂರು, ಚಾಮರಾಜನಗರ ಭಾಗದಲ್ಲಿ ಹೆಚ್ಚು ಸಕ್ರಿಯರಾಗಿದ್ದು, ರಾಜ್ಯದ ಇತರ ಜಿಲ್ಲೆಯಲ್ಲಿಯೂ ಪ್ರವಾಸ ಮಾಡುವರು. ಆದರೆ, ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ' ಎಂದು ಯಡಿಯೂರಪ್ಪ ಹೇಳಿದರು.
ಚುನಾವಣೆಗೆ ರಾಜ್ಯ ಪ್ರವಾಸ
ಲೋಕಸಭೆ ಚುನಾವಣೆಗೆ ರಾಜ್ಯ ಪ್ರವಾಸ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. 3 ತಂಡಗಳಲ್ಲಿ ಪಕ್ಷದ ನಾಯಕರು ರಾಜ್ಯ ಪ್ರವಾಸ ಮಾಡಲಿದ್ದಾರೆ.
ತಂಡದ ವಿವರ
* ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಗೋವಿಂದ ಕಾರಜೋಳ ಇತರರು
* ಜಗದೀಶ್ ಶೆಟ್ಟರ್, ಆರ್.ಅಶೋಕ್, ಅರವಿಂದ ಲಿಂಬಾವಳಿ ಮುಂತಾದವರು
* ಕೆ.ಎಸ್.ಈಶ್ವರಪ್ಪ, ಸಿ.ಟಿ.ರವಿ, ಲಕ್ಷ್ಮಣ ಸವದಿ ಮುಂತಾವರು.
ಕ್ಷೇತ್ರ ಬದಲಾವಣೆ ಇಲ್ಲ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಕ್ಷೇತ್ರ ಬದಲಾವಣೆ ಮಾಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬಗ್ಗೆ ಅವರು ಶನಿವಾರ ಸ್ಪಷ್ಟನೆ ನೀಡಿದರು.
'ನಾನು ಕ್ಷೇತ್ರ ಬದಲಾಯಿಸುವೆ ಎಂಬುದು ಗಾಳಿ ಸುದ್ದಿ. ಇಂತಹ ಸುದ್ದಿ ಹಬ್ಬಿಸುತ್ತಿರುವವರು ದೇಶದ್ರೋಹಿಗಳು. ನಾನು ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂದು ಪಕ್ಷ ನಿರ್ಧಾರ ಮಾಡುತ್ತದೆ' ಎಂದರು.