ಬೆಳಗಾವಿ ಚಳಿಗಾಲ ಅಧಿವೇಶನ: ಬಿಜೆಪಿ ಪ್ರಸ್ತಾಪಿಸಲಿರುವ ಪ್ರಮುಖ ವಿಷಯಗಳು
ಬೆಂಗಳೂರು, ನವೆಂಬರ್ 26: ಮುಂದಿನ ತಿಂಗಳು ಡಿಸೆಂಬರ್ 09ರಿಂದ ಹತ್ತು ದಿನಗಳ ಕಾಲ ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಚಳಿಗಾಲದ ವಿಧಾನಸಭೆ ಅಧಿಕವೇಶನ 2024 ನಡೆಯಲಿದೆ. ಈ ಸಂಬಂಧ ರಾಜ್ಯ ಬಿಜೆಪಿಯು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲಿದೆ. ಇದಕ್ಕೆ ಟಕ್ಕರ್ ನೀಡಲು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಲಿದ್ದಾರೆ.
ಸದ್ಯ ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಅನ್ಯಾಯಗಳ ವಿರುದ್ಧ ತೀವ್ರ ಹೋರಾಟ ಮಾಡಲಾಗುವುದು. ಎಲ್ಲ ಸಮಸ್ಯೆಗಳ ಬಗ್ಗೆ ಸದನದಲ್ಲಿ ಪ್ರಶ್ನಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಮಾಹಿತಿ ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರ ಜೊತೆಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಬಾರಿ ಎರಡು ವಾರ ಮಾತ್ರ ಅಧಿವೇಶನ ನಡೆಸಲಾಗುತ್ತಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಕೇಳಲಾಗುವುದು. ವಕ್ಫ್ ಮಂಡಳಿ ವತಿಯಿಂದ ಆಗುತ್ತಿರುವ ಭೂ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ. ಬಡವರ ರೇಷನ್ ಕಾರ್ಡ್ ರದ್ದು ಮಾಡಿ ಗ್ಯಾರಂಟಿಗಾಗಿ ಹಣ ಉಳಿಸಲಾಗುತ್ತಿದೆ.
ಈ ಎಲ್ಲ ಸಮಸ್ಯೆಗಳ ವಿರುದ್ಧ ಅಧಿವೇಶನದಲ್ಲಿ ಹೋರಾಟ ಮಾಡಲಾಗುವುದು. ಅಬಕಾರಿ ಇಲಾಖೆಯ ಹಗರಣ, ಬೆಳೆನಾಶಕ್ಕೆ ಪರಿಹಾರ ಮೊದಲಾದ ಸಮಸ್ಯೆಯ ವಿರುದ್ಧವೂ ಹೋರಾಟ ಮಾಡಲಾಗುವುದು ಎಂದರು.

ಇದೊಂದು ರೀತಿ ಗುರುವಾರದ ಸರ್ಕಾರ. ಕೇವಲ ಒಂದು ದಿನ ಮಾತ್ರ ಇಲ್ಲಿ ಸಚಿವರು, ಅಧಿಕಾರಿಗಳು ಸಭೆ ಮಾಡುತ್ತಾರೆ. ಉತ್ತರ ಕರ್ನಾಟಕದ ಜಿಲ್ಲೆಗಳ ಸಮಸ್ಯೆ ಬಗ್ಗೆ ಚರ್ಚಿಸಲು ನಾನು ಸಭೆ ನಡೆಸಲಿದ್ದೇನೆ. ಈ ಹಿಂದೆ ಕಲ್ಯಾಣ ಕರ್ನಾಟಕ ಕುರಿತು ಸರ್ಕಾರದಿಂದ ಸಭೆ ನಡೆದಿದೆ. ಆ ಬಳಿಕ ಯಾವುದೇ ಸುದ್ದಿ ಇಲ್ಲ ಎಂದು ವಾಗ್ದಾಲಿ ನಡೆಸಿದರು.
ಬ್ರ್ಯಾಂಡ್ ಬೆಂಗಳೂರು ಅಲ್ಲ, ಮುಳಗುವ ಬೆಂಗಳೂರು
ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತಾರೆ, ಆದರೆ ಮಳೆ ಬಂದು ಮುಳುಗುವ ಬೆಂಗಳೂರು ಇಲ್ಲಿ ಸೃಷ್ಟಿಯಾಗಿದೆ. ಮಳೆಯಿಂದಾಗಿ ರಸ್ತೆ ಗುಂಡಿ ಉಂಟಾಗಿ ವಾಹನ ಚಾಲಕರಿಗೆ ಬೆನ್ನು ನೋವು ಉಂಟಾಗಿದೆ. ಜಯನಗರ ಶಾಸಕರು ಸೇರಿದಂತೆ ಅನೇಕ ಶಾಸಕರಿಗೆ ಅನುದಾನ ಕಡಿತವಾಗಿದೆ. ಹೀಗೆ ಮೊದಲಾದ ವಿಷಯಗಳ ಬಗ್ಗೆ ಪ್ರಶ್ನಿಸಲಾಗುವುದು ಎಂದು ತಿಳಿಸಿದರು.
ಅಧಿಕಾರಿಗಳಿಗೆ ನೇಣಿನ ಭಾಗ್ಯ
ರಾಜ್ಯದಲ್ಲಿ ಅಧಿಕಾರಿಗಳಿಗೆ ನೇಣಿನ ಭಾಗ್ಯ ನೀಡಲಾಗಿದೆ. ಅಧಿಕಾರಿಗಳು ಒಂದೋ ವರ್ಗಾವಣೆಯಾಗಬೇಕು ಅಥವಾ ನೇಣು ಹಾಕಿಕೊಳ್ಳಬೇಕು ಎಂಬ ಸ್ಥಿತಿ ಇದೆ. ರೌಡಿಗಳನ್ನು ಜೈಲಿಗೆ ಹಾಕುವ ಬದಲು ಪ್ರಕರಣ ಹಿಂಪಡೆಯಲಾಗಿದೆ. ಇದರ ವಿರುದ್ಧವೂ ಮಾತನಾಡಲಾಗುವುದು ಎಂದರು.
ಬಿಜೆಪಿಯದ್ದ ಒಂದೇ ತಂಡ: ಸರ್ಕಾರದ ವಿರುದ್ಧ ಹೋರಾಟ
ಬಿಜೆಪಿ ಒಂದೇ ತಂಡವಾಗಿ ಸರ್ಕಾರದ ವಿರುದ್ಧ ಹೋರಾಡಲಿದೆ. ಬಿಜೆಪಿಯ ಎಲ್ಲ ನಾಯಕರು ಹಾಗೂ ಮುಖಂಡರೊಂದಿಗೆ ಹೋರಾಟ ಮಾಡುವ ಬಗ್ಗೆ ಚರ್ಚಿಸುತ್ತೇನೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸರ್ಕಾರ ಪಾಪರ್ ಆಗಿದೆ. ಜನರು ಕೂಡ ಈ ಬಗ್ಗೆ ಹೇಳುತ್ತಿದ್ದಾರೆ. ಒಂದೂವರೆ ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆದಿಲ್ಲ ಎಂದು ಹೇಳಿದರು.
ವಿರೋಧ ಪಕ್ಷದಲ್ಲಿ ಕಾಂಗ್ರೆಸ್ ಇದ್ದಾಗ ಕೋವಿಡ್ ಹಗರಣ ಇರುವ ಬಗ್ಗೆ ಮಾತನಾಡಲಿಲ್ಲ. ಈಗ ಮಾತ್ರ ಆ ಬಗ್ಗೆ ಮಾತನಾಡುತ್ತಿದೆ. ನಮ್ಮ ಅವಧಿ ಹಾಗೂ ಈಗಿನ 16 ತಿಂಗಳ ಅವಧಿಯ ಆಡಳಿತದ ಎಲ್ಲವನ್ನೂ ಸಿಬಿಐಗೆ ವಹಿಸಲಿ. ನಾವು ತನಿಖೆಗೆ ತಯಾರಿದ್ದೇವೆ ಎಂದು ಚಾಲೆಂಜ್ ಮಾಡಿದರು.
ಕಾಂಗ್ರೆಸ್ ನಾಯಕರಂತೆಯೇ ಇವಿಎಂ ಮೇಲೆ ನಮಗೂ ಅನುಮಾನವಿದೆ. ಆದ್ದರಿಂದ ಕಾಂಗ್ರೆಸ್ನ ಎಲ್ಲ ಶಾಸಕರು ರಾಜೀನಾಮೆ ನೀಡಲಿ. ನಂತರ ಒಂದಾಗಿ ಚುನಾವಣೆ ಎದುರಿಸಬಹುದು. ಮಹಾರಾಷ್ಟ್ರದಲ್ಲಿ ಯಾಕೆ ಸೋತಿದ್ದೇವೆ ಎಂದು ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ. ಅದು ಬಿಟ್ಟು ಇವಿಎಂ ಮೇಲೆ ಆರೋಪ ಮಾಡುವುದಲ್ಲ ಎಂದು ತಿರುಗೇಟು ನೀಡಿದರು.












Click it and Unblock the Notifications