ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲು ಈಶ್ವರಪ್ಪಗಿಲ್ಲ ಅವಕಾಶ: ಹೆಸರು ಕೈ ಬಿಟ್ಟ ಬಿಜೆಪಿ - ಕಾರಣವೇನು?
ಶಿವಮೊಗ್ಗ, ಮಾರ್ಚ್ 18: 2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜ್ಯದಲ್ಲಿ ಬಿಜೆಪಿ ಗೆಲ್ಲಲು ಮಹಾ ರಣತಂತ್ರ ರೆಡಿಯಾಗಿದೆ. ಈಗಾಗಲೇ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕೋಟೆಯಿಂದಲೇ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ರಣಕಹಳೆ ಮೊಳಗಿಸಿದ್ದು, ಇದೀಗ ರಾಜಾಹುಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಭದ್ರಕೋಟೆ ಶಿವಮೊಗ್ಗದಲ್ಲಿ ಮೋದಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಇನ್ನೂ ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದ ಫ್ರೀಡಂಪಾರ್ಕ್ನ ಅಲ್ಲಮಪ್ರಭು ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗಿಯಾಲಿದ್ದಾರೆ.ಈಗಾಗಲೇ ಕಮಲ ಪಡೆ ಬೃಹತ್ ವೇದಿಕೆಯನ್ನ ಸಜ್ಜುಗೊಳಿಸಿದ್ದು, ಈ ವೇದಿಕೆ ಮೇಲೆ ಹಲವು ಗಣ್ಯರಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ, ಮಾಜಿ ಸಚಿವ ಹಾಗೂ ಕುರುಬ ನಾಯಕ ಕೆ ಎಸ್ ಈಶ್ವರಪ್ಪ ಅವರನ್ನ ಹೆಸರನ್ನ ಗಣ್ಯರ ಪಟ್ಟಿಯಿಂದ ಬಿಜೆಪಿ ತೆಗೆದು ಹಾಕಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಮೇಲೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಆರಗ ಜ್ಞಾನೇಂದ್ರ, ಎಂಎಲ್ಸಿಗಳಾದ ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಆಗಮಿಸಿದ್ದಾರೆ. ಆದರೆ, ಈಶ್ವರಪ್ಪ ಅವರು ಆಗಮಿಸಿಲ್ಲ.
ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳುವ ಗಣ್ಯರ ಪಟ್ಟಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಹೆಸರು ಇಲ್ಲ. ವೇದಿಕೆಯಲ್ಲಿ ಪ್ರಧಾನಿ ಜೊತೆ 43 ಗಣ್ಯರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಇನ್ನೂ ಪ್ರಧಾನಿ ಜೊತೆಗೆ ವೇದಿಕೆಯಲ್ಲಿ ಇರುವವರ ಪಟ್ಟಿಯಿಂದ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಅವರ ಹೆಸರನ್ನು ತೆಗೆದು ಹಾಕಲಾಗಿದೆ ಎಂದು ಹೇಳಲಾಗಿದೆ.
ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಅಲ್ಲದೇ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನನಗೆ ಮೋಸ ಮಾಡಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದು, ನೊಂದ ಪಕ್ಷದ ಕಾರ್ಯಕರ್ತರ ಧ್ವನಿಯಾಗಲು ನಾನು ಶಿವಮೊಗ್ಗದಿಂದ ಸ್ಪತಂತ್ರವಾಗಿ ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ್ದಾರೆ.
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರ ವಿರುದ್ಧವಾಗಿ ಈಶ್ವರಪ್ಪ ಅವರ ಸ್ಪರ್ಧೆಯಿಂದಾಗಿ ಬಿಜೆಪಿ ಸಾಕಷ್ಟು ನಷ್ಟವಾಗಲಿದೆ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ. ಶಿವಮೊಗ್ಗಕ್ಕೆ ಸೋಮವಾರ ನರೇಂದ್ರ ಮೋದಿ ಅವರು ಆಗಮಿಸಿದ್ದು, ಈ ವೇಳೆ ಈಶ್ವರಪ್ಪ ಅವರಿಗೆ ವೇದಿಕೆಯ ಮೇಲೆ ಬಿಜೆಪಿ ಅವಕಾಶ ನೀಡದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಒಂದು ವೇಳೆ ಅವಕಾಶ ನೀಡಿದ್ರೆ, ಬಹಿರಂಗವಾಗಿಯೇ ಈಶ್ವರಪ್ಪ ಅವರು ವೇದಿಕೆಯ ಮೇಲೆ ಯಡಿಯೂರಪ್ಪ ಅವರ ವಿರುದ್ಧವಾಗಿ ಅಸಮಾಧಾನ ಹೊರಹಾಕುತ್ತಾರಾ ಎನ್ನುವ ಆತಂಕದಿಂದ ಬಿಜೆಪಿಯೂ ಈಶ್ವರಪ್ಪ ಅವರಿಗೆ ಅವಕಾಶ ನೀಡಿಲ್ವಾ ಎನ್ನುವ ಪ್ರಶ್ನೆಗೆ ಉದ್ಭವಿಸಿದೆ.
ಯಡಿಯೂರಪ್ಪ ಮೇಲೆ ಮುನಿಸು; ಶಿವಮೊಗ್ಗದಿಂದ ಸ್ಪರ್ಧೆ!
ಬಿಜೆಪಿ ಪಕ್ಷ ಒಂದು ಕುಟುಂಬದ ಹಿಡಿದದಲ್ಲಿರಬಾರದು. ಹೀಗಾಗಿ ನಾನು ಸ್ಪರ್ಧೆ ಮಾಡುತ್ತೇನೆ. ನಾನು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಕ್ಷೇತ್ರಕ್ಕೆ ಬರುತ್ತಿರುವುದು ಸ್ವಾಗತ. ನಾನು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಹೇಳಿದರು.












Click it and Unblock the Notifications