ಸಿದ್ದರಾಮಯ್ಯನವರೇ.. ಅಂಬೇಡ್ಕರ್ ರಚಿಸಿರುವ ಸಂವಿಧಾನದ ಬಗ್ಗೆ ನಿಮಗೇಕೆ ಈ ಪರಿ ದ್ವೇಷ: ಬಿಜೆಪಿ ಪ್ರಶ್ನೆ
ಬೆಂಗಳೂರು,ಸೆಪ್ಟೆಂಬರ್ 22: ನೂತನ ಸಂಸತ್ನ ಮೊದಲ ಅಧಿವೇಶನದ ದಿನದಂದು, ಸದಸ್ಯರಿಗೆ ನೀಡಿದ್ದು, ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನ. ಬಾಬಾ ಸಾಹೇಬರು ರಚಿಸಿದ್ದ ಸಂವಿಧಾನವನ್ನು ಸದಸ್ಯರಿಗೆ ನೀಡಬಾರದೆಂಬ ನಿಯಮವೇನಾದರೂ ಇದೆಯೇ..? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ರಾಜ್ಯ ಬಿಜೆಪಿ ಪ್ರಶ್ನಿಸಿದೆ.
ಸ್ವಾಮಿ ಸ್ವಯಂಘೋಷಿತ ಸಂವಿಧಾನ ತಜ್ಞ ಸಿದ್ದರಾಮಯ್ಯರವರೇ,
— BJP Karnataka (@BJP4Karnataka) September 22, 2023
ನೂತನ ಸಂಸತ್ನ ಮೊದಲ ಅಧಿವೇಶನದ ದಿನದಂದು, ಸದಸ್ಯರಿಗೆ ನೀಡಿದ್ದು, ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನ. ಬಾಬಾ ಸಾಹೇಬರು ರಚಿಸಿದ್ದ ಸಂವಿಧಾನವನ್ನು ಸದಸ್ಯರಿಗೆ ನೀಡಬಾರದೆಂಬ ನಿಯಮವೇನಾದರೂ ಇದೆಯೇ..? ಅಂಬೇಡ್ಕರ್ ಅವರು ರಚಿಸಿರುವ ಮೂಲ… https://t.co/KjRUOLpCRe
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್ ಗೆ ತಿರುಗೇಟು ನೀಡಿದ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದೆ. ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಮೂಲ ಸಂವಿಧಾನದ ಬಗ್ಗೆ ನಿಮಗೇಕೆ ಈ ಪರಿ ದ್ವೇಷ..!! ಎಂದು ಪ್ರಶ್ನಿಸಿದೆ.

ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಸಂವಿಧಾನದ ಆಶಯವನ್ನೇ ಬುಡಮೇಲು ಮಾಡಿದ್ದ ನಿಮ್ಮ ನಾಯಕಿ ಇಂದಿರಾಗಾಂಧಿಯವರು, ಓಲೈಕೆ ರಾಜಕಾರಣಕ್ಕಾಗಿ ಸಮಾಜವಾದ ಮತ್ತು ಜಾತ್ಯಾತೀತ ಎಂಬ ಪದಗಳನ್ನು ಒತ್ತಾಯಪೂರ್ವಕವಾಗಿ ಸಂವಿಧಾನಕ್ಕೆ ಅಳವಡಿಸಿದ್ದರು. ನೀವು ಸದಾ ಗುರಾಣಿಯಂತೆ ಬಳಸಿಕೊಳ್ಳುವ ಆ ಎರಡು ಪದಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನದಲ್ಲಿ ಇರಲೇ ಇಲ್ಲ..!!
ಇನ್ನು ನಿಮ್ಮ ಸಮಾಜವಾದದ ಅಸಲಿ ಮುಖವಾಡವನ್ನು ನಿಮ್ಮ ಪಕ್ಷದವರೇ ಬೆತ್ತಲು ಮಾಡಿದ್ದಾರೆ. ಹಿಂದೂಗಳನ್ನು ತುಚ್ಛವಾಗಿ ದ್ವೇಷಿಸುವುದೇ, ನಿಮ್ಮ ಸೋಗಲಾಡಿ ಜಾತ್ಯಾತೀತತೆ ಎಂಬುದು ಸಹ ಸಾಬೀತಾಗಿದೆ. ಮುಸ್ಲಿಂ ಲೀಗ್ನಂತಹ ಮತೀಯ ಪಕ್ಷದ ಜೊತೆ ಸೇರಿ ದಶಕಗಳ ಕಾಲ ಅಧಿಕಾರ ಅನುಭವಿಸಿರುವ ಕಾಂಗ್ರೆಸ್ ಪಕ್ಷ, ಯಾವ ರೀತಿಯಿಂದ ಜಾತ್ಯಾತೀತ ಪಕ್ಷ ಎಂಬ ಪ್ರಶ್ನೆಗೆ ನೀವೇ ಉತ್ತರಿಸಬೇಕು ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಅವರನ್ನ ಕೇಳಿದೆ.
ಸಿದ್ದರಾಮಯ್ಯ ಟ್ವೀಟ್ ಮೂಲಕ ಹೇಳಿದ್ದೇನು?
ನೂತನ ಸಂಸತ್ ಭವನದ ಪ್ರವೇಶದ ನೆನಪಿಗಾಗಿ ಸಂಸದರಿಗೆ ಕೇಂದ್ರ ಸರ್ಕಾರ ನೀಡಿರುವ ಸಂವಿಧಾನದ ಪ್ರತಿಯ ಪ್ರಸ್ತಾವನೆಯಿಂದ ಜಾತ್ಯತೀತ ಮತ್ತು ಸಮಾಜವಾದ ಪದಗಳನ್ನು ಕಿತ್ತುಹಾಕಿರುವುದು ಭಾರತೀಯ ಜನತಾ ಪಕ್ಷದ ಅಂತರಂಗದಲ್ಲಿ ಸಂವಿಧಾನದ ಬಗ್ಗೆ ಇರುವ ಅಸಹನೆಗೆ ಸಾಕ್ಷಿ. ಇದು ಅತ್ಯಂತ ಖಂಡನೀಯ ಕೃತ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

1949ರ ಸಂವಿಧಾನದ ಪ್ರತಿಯನ್ನೇ ನೀಡಲಾಗಿದೆ ಎನ್ನುವುದು ತಮ್ಮೊಳಗಿನ ದುಷ್ಟ ಆಲೋಚನೆಯನ್ನು ಮುಚ್ಚಿಕೊಳ್ಳುವ ಪ್ರಯತ್ನವಾಗಿದೆ. ತಿದ್ದುಪಡಿಯಾದ ನಂತರ ಪರಿಷ್ಕೃತ ಪ್ರತಿಯನ್ನು ನೀಡಬೇಕಾಗಿರುವುದು ನ್ಯಾಯವೂ ಹೌದು, ಧರ್ಮವೂ ಹೌದು. 1972ರಲ್ಲಿಯೇ ಸಂವಿಧಾನಕ್ಕೆ 42ನೇ ತಿದ್ದುಪಡಿ ಮಾಡಿ ''ಸಮಾಜವಾದಿ'' ಮತ್ತು "ಜಾತ್ಯತೀತ" ಎಂಬ ಪದಗಳನ್ನು ಸೇರಿಸಲಾಗಿತ್ತು. ಈ ಪದಗಳನ್ನು ಕಿತ್ತುಹಾಕಿರುವುದು ಸಂವಿಧಾನ ವಿರೋಧಿ ನಡೆ ಮಾತ್ರವಲ್ಲ, ಇದೊಂದು ದೇಶದ್ರೋಹ ಕೃತ್ಯವಾಗಿದೆ. ಇದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನವಾಗಿದೆ.
ಸಂವಿಧಾನದ ಬಗ್ಗೆ ಭಾರತೀಯ ಜನತಾ ಪಕ್ಷ ಮತ್ತು ಅದರ ಮಾತೃಸಂಸ್ಥೆಯಾಗಿರುವ ಆರ್ ಎಸ್ ಎಸ್ ಗೆ ಇರುವ ವಿರೋಧಕ್ಕೆ ಇತಿಹಾಸ ಸಾಕ್ಷಿ. ಸಂವಿಧಾನವನ್ನು ದೇಶ ಒಪ್ಪಿಕೊಂಡ ಕಾಲದಲ್ಲಿಯೇ ಆರ್.ಎಸ್.ಎಸ್ ಅದನ್ನು ವಿರೋಧಿಸಿತ್ತು. ಈ ಸಂವಿಧಾನದಲ್ಲಿ ಭಾರತೀಯತೆ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದನ್ನು ಮರೆಯಲಾಗದು. ಅಟಲ್ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನದ ಪುನರ್ ಪರಿಶೀಲನೆಗೊಳಪಡಿಸುವ ವಿಫಲ ಪ್ರಯತ್ನ ನಡೆದಿರುವುದನ್ನು ದೇಶದ ಜನತೆ ಮರೆತಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರದ ಕಾಲದಲ್ಲಿ ಬಿಜೆಪಿ ನಾಯಕರು ಮತ್ತು ಸಂಸದರು ನಿರಂತರವಾಗಿ ಸಂವಿಧಾನದ ಮೇಲೆ ದಾಳಿ ನಡೆಸಿದ್ದಕ್ಕೆ ದೇಶ ಸಾಕ್ಷಿಯಾಗಿದೆ.
ಸಂವಿಧಾನವನ್ನು ಬದಲಾಯಿಸಲಿಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಅನಂತ್ಕುಮಾರ ಹೆಗಡೆ ಎಂಬ ರಾಜ್ಯದ ಸಂಸದ ನೀಡಿದ್ದ ಬೇಜವಾಬ್ದಾರಿ ಹೇಳಿಕೆಯನ್ನು ಕನಿಷ್ಠ ಖಂಡಿಸುವ ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳುವ ಕೆಲಸವನ್ನೂ ನರೇಂದ್ರ ಮೋದಿ ಸರ್ಕಾರ ಮಾಡದೆ ಇರುವುದು ಆ ಪಕ್ಷದ ಅಂತರಂಗದ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ.
ನೇರಾನೇರವಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡುವ ಧೈರ್ಯ ಇಲ್ಲದ ಬಿಜೆಪಿ ಮತ್ತು ಕೇಂದ್ರ ಸರ್ಕಾರ, ಈ ರೀತಿ ಅಡ್ಡದಾರಿ ಹಿಡಿದು ಸಂವಿಧಾನದ ಆಶಯಗಳನ್ನು ಅಳಿಸಿಹಾಕುವ ಪ್ರಯತ್ನ ನಡೆಸುತ್ತಿದೆ. ಅಂತಿಮವಾಗಿ ಸಂವಿಧಾನಕ್ಕೆ ವಿರುದ್ಧವಾಗಿ ಮನುಧರ್ಮ ಶಾಸ್ತ್ರವನ್ನು ಜಾರಿಗೊಳಿಸುವ ಗುಪ್ತ ಅಜೆಂಡಾದ ಭಾಗವಾಗಿಯೇ ಈ ಎಲ್ಲ ಕಸರತ್ತುಗಳು ನಡೆಯುತ್ತಿರುವಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.












Click it and Unblock the Notifications