ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಅಂತಿಮ
ಬೆಂಗಳೂರು, ಜು. 29 : ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ನಿರೀಕ್ಷೆಯಂತೆ ಶಿಕಾರಿಪುರ ಕ್ಷೇತ್ರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ.
ಮಂಗಳವಾರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪ್ರಹ್ಲಾದ್ ಜೋಶಿ ಅಭ್ಯರ್ಥಿಗಳ ಹೆಸರು ಪ್ರಕಟಿಸಿದರು.

ಶಿಕಾರಿಪುರ ಕ್ಷೇತ್ರದಿಂದ ನಿರೀಕ್ಷೆಯಂತೆ ಮಾಜಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಿಂದ ಓಬಳೇಶ್ ಮತ್ತು ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಮಹಾಂತೇಶ ಕವಟಗಿ ಮಠ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ. [ಚಿಕ್ಕೋಡಿಯಲ್ಲಿ ಗಣೇಶ ಹುಕ್ಕೇರಿ ಕಾಂಗ್ರೆಸ್ ಅಭ್ಯರ್ಥಿ]
ಸಂಸದರಾಗಿ ಆಯ್ಕೆಯಾದ ಬಿ.ಎಸ್.ಯಡಿಯೂರಪ್ಪ, ಬಿ.ಶ್ರೀರಾಮುಲು ಮತ್ತು ಪ್ರಕಾಶ್ ಹುಕ್ಕೇರಿ ಅವರಿಂದ ತೆರವಾದ ಸ್ಥಾನಕ್ಕೆ ಆಗಸ್ಟ್ 21 ರಂದು ಮತದಾನ ನಡೆಯಲಿದ್ದು, ಆಗಸ್ಟ್ 25 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇನ್ನು ಅಭ್ಯರ್ಥಿಗಳ ಹುಡುಕಾಟದಲ್ಲಿ ತೊಡಗಿವೆ. ಕಾಂಗ್ರೆಸ್ ಪಕ್ಷ ಚಿಕ್ಕೋಡಿ-ಸದಲಗಾ ಕ್ಷೇತ್ರಕ್ಕೆ ಸಂಸದ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ ಅವರ ಹೆಸರನ್ನು ಅಂತಿಮಗೊಳಿಸಿದ್ದು, ಹೈ ಕಮಾಂಡ್ ಈ ಬಗ್ಗೆ ಅಂತಿಮ ಘೋಷಣೆ ಮಾಡಬೇಕಾಗಿದೆ. ಉಳಿದಂತೆ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಂಡಿಲ್ಲ.
ಬಿಜೆಪಿ ಅಭ್ಯರ್ಥಿಗಳು
ಶಿಕಾರಿಪುರ - ಬಿ.ವೈ.ರಾಘವೇಂದ್ರ
ಬಳ್ಳಾರಿ ಗ್ರಾಮಾಂತರ - ಓಬಳೇಶ್
ಚಿಕ್ಕೋಡಿ - ಮಹಾಂತೇಶ ಕವಟಗಿ ಮಠ












Click it and Unblock the Notifications