ಬಿಜೆಪಿ ಸರ್ಕಾರದ ಭ್ರಷ್ಟಾಚಾರ; ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
ಬೆಂಗಳೂರು, ನವೆಂಬರ್ 25; ಕರ್ನಾಟಕ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಿದೆ.
ಗುರುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿತು. ಸಂವಿಧಾನದ 356ನೇ ಪರಿಚ್ಛೇದದಡಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಮನವಿ ಮಾಡಿತು.
ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಸಹ ನಿಯೋಗ ಮನವಿ ಮಾಡಿದೆ. ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸರ್ಕಾರಿ ಕಾಮಗಾರಿಗಳ ವೆಚ್ಚದಲ್ಲಿ ಶೇ 40ರಷ್ಟನ್ನು ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳಿಗೆ ಕಮಿಷನ್ ರೂಪದಲ್ಲಿ ನೀಡಬೇಕಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಹಾಗೂ ಸಂಘದ ಲಕ್ಷಕ್ಕೂ ಅಧಿಕ ಸದಸ್ಯರು ಪ್ರಧಾನಿಗಳಿಗೆ ಬರೆದ ಪತ್ರವೇ ಸಾಕ್ಷಿ ಎಂದು ನಿಯೋಗ ಹೇಳಿದೆ.

ರಾಜ್ಯ ಸರ್ಕಾರದ ಕಮಿಷನ್ ದಂಧೆ ಹಾಗೂ ಅಕ್ರಮ ಹಣದ ವರ್ಗಾವಣೆ ಬಗ್ಗೆ ಗುತ್ತಿದಾರರ ಸಂಘ ಪ್ರಧಾನಿಗಳಿಗೆ ಬರೆದ ಪತ್ರದ ಬಗ್ಗೆ ಪತ್ರಿಕೆಗಳು ವರದಿ ಮಾಡಿವೆ. ನಮ್ಮ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ಕರೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇದಕ್ಕೇನು ಹೇಳುತ್ತಾರೆ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಮೇಲೆ ನಡೆದಿರುವ ಎಸಿಬಿ ದಾಳಿಯಿಂದ ಅಲ್ಲಿನ ಭ್ರಷ್ಟಾಚಾರವೂ ಬಯಲಾಗಿದೆ. ಒಂದು ಅಂದಾಜಿನ ಪ್ರಕಾರ ಬಿಡಿಎ ಭ್ರಷ್ಟಾಚಾರದಿಂದ ಸರ್ಕಾರದ ಖಜಾನೆಗೆ ಸುಮಾರು 300 ಕೋಟಿ ರೂ. ನಷ್ಟವಾಗಿದೆ. ಎಸಿಬಿ ಕಾರ್ಯದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡದೆ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, "ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ. ಸಂವಿಧಾನಾತ್ಮಕವಾಗಿ ಸರ್ಕಾರ ನಡೆಯುತ್ತಿಲ್ಲ. 356 ಅಡಿಯಲ್ಲಿ ರಾಷ್ಟ್ರಪತಿ ಅಳ್ವಿಕೆ ಜಾರಿ ಮಾಡುವಂತೆ ಮನವಿ ಮಾಡಿದ್ದೇವೆ. ಸರ್ಕಾರ ವಜಾ ಮಾಡಿ ರಾಷ್ಟ್ರಪತಿ ಅಳ್ವಿಕೆ ಜಾರಿ ಮಾಡಬೇಕು. ಇಂಥ ಭ್ರಷ್ಟ ಸರ್ಕಾರವನ್ನು ನಾವು ಎಂದೂ ಕಂಡಿಲ್ಲ" ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
"ನರೇಂದ್ರ ಮೋದಿ ಹಿಂದೆ ಕರ್ನಾಟಕಕ್ಕೆ ಬಂದಿದ್ದಾಗ ನಮ್ಮದು ಕಮಿಷನ್ ಸರ್ಕಾರ ಎಂದು ಆರೋಪ ಮಾಡಿದ್ದರು. ಈಗ ನಡೆಯುತ್ತಿರುವುದೇನು?. ಕಮಿಷನ್ ದಂಧೆಯು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಬರುತ್ತದೆ" ಎಂದರು.
ರಾಜ್ಯ ಸರ್ಕಾರದ ಕಮಿಷನ್ ದಂಧೆ ಹಾಗೂ ಅಕ್ರಮ ಹಣದ ವರ್ಗಾವಣೆ ಬಗ್ಗೆ ಗುತ್ತಿದಾರರ ಸಂಘ ಪ್ರಧಾನಿಗಳಿಗೆ ಬರೆದ ಪತ್ರದ ಬಗ್ಗೆ ಪತ್ರಿಕೆಗಳು ವರದಿ ಮಾಡಿವೆ. ನಮ್ಮ ಸರ್ಕಾರವನ್ನು 10% ಸರ್ಕಾರ ಎಂದು ಕರೆದಿದ್ದ ಪ್ರಧಾನಿ @narendramodi ಅವರು ಇದಕ್ಕೇನು ಹೇಳ್ತಾರೆ? 3/4
— Siddaramaiah (@siddaramaiah) November 25, 2021
#40%BJP pic.twitter.com/ikycpWF76D
"2021ರ ಜುಲೈ 6ರಂದು ಪ್ರಧಾನಿ ನರೇಂದ್ರ ಮೋದಿಗೆ ಕೆಂಪಣ್ಣ ಎಂಬುವವರು ಪತ್ರ ಬರೆದಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿಯೇ ಇದೇ ಮೊದ ಬಾರಿಗೆ ಇಂತಹ ಘಟನೆ ನಡೆದಿದೆ. ಕೆಂಪಣ್ಣ ಬರೆದಿರುವ ಪತ್ರದ ಜೊತೆ ದಾಖಲೆಗಳನ್ನು ರಾಜ್ಯಪಾಲರಿಗೆ ನೀಡಿದ್ದೇವೆ" ಎಂದು ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಾತನಾಡಿ, "ರಾಜ್ಯ ಸರ್ಕಾರವನ್ನು ಕೂಡಲೇ ರಾಜ್ಯಪಾಲರು ವಜಾ ಮಾಡಬೇಕು. ಅಕ್ರಮದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ಕಾಮಗಾರಿ ವೇಳೆ ವೆಚ್ಚವನ್ನು ದುಪ್ಪಟ್ಟು ಅಂದಾಜು ಮಾಡಲಾಗುತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದೇವೆ" ಎಂದರು.
"ಇವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಪ್ರತಿಪಕ್ಷ ಕಾಂಗ್ರೆಸ್ ಹಂತ-ಹಂತವಾಗಿ ಸರ್ಕಾರದ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡಲಿದೆ" ಎಂದು ಡಿ. ಕೆ. ಶಿವಕುಮಾರ್ ತಿಳಿಸಿದರು.












Click it and Unblock the Notifications