'ಪಾದರಾಯನಪುರ: ದೇಶದ್ರೋಹದ ಪ್ರಕರಣ ದಾಖಲಿಸಿ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ'
ಬೆಂಗಳೂರು, ಏ. 20: ಕೊರೊನಾ ವೈರಸ್ ನಿಯಂತ್ರಣದ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ಹೊಸ ಸವಾಲುಗಳು ಎದುರಾಗುತ್ತಿವೆ. ಹೊಸ ಸವಾಲುಗಳನ್ನು ಧೈರ್ಯವಾಗಿ ಎದುರಿಸುವಂತೆ ಸರ್ಕಾರಕ್ಕೆ ಬಿಜೆಪಿ ಘಟಕ ಸಲಹೆ ಕೊಟ್ಟಿದೆ. ಜೊತೆಗೆ ಸಮಾಜಕ್ಕೆ ತೊಂದರೆ ಕೊಡುವವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಈ ಬಗ್ಗೆ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನಿನ್ನೆ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿರುವ ಘಟನೆಯ ಸಂಪೂರ್ಣ ವಿವರ ಪಡೆದು ಕೊಂಡಿದ್ದಾರೆ. ಜೊತೆಗೆ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು ತನಿಖೆ ನಡೆಸುವಂತೆ ಸೂಚಿಸಿದ್ದಾರೆ.
ಅತಿಹೆಚ್ಚು ಕೋವಿಡ್ ಸೋಂಕಿತ ಪ್ರಕರಣಗಳು ಪತ್ತೆಯಾಗಿರುವ ಬಾಪೂಜಿನಗರ ಹಾಗೂ ಪಾದರಾಯನಪುರ ವಾರ್ಡ್ಗಳನ್ನು ಕೆಂಪು ವಲಯಗಳೆಂದು ಗುರುತಿಸಿ ಅಲ್ಲಿ ಸೀಲ್ಡೌನ್ ಮಾಡಲಾಗಿದೆ. ಸೋಂಕಿತರೊಂದಿಗೆ ದ್ವಿತೀಯ ಹಂತದ ಸಂಪರ್ಕ ಹೊಂದಿದ್ದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಹೀಗೆ ಮನೆಯಲ್ಲಿ ಪ್ರತ್ಯೇಕವಾಗಿರುವ ಜನರ ಆರೋಗ್ಯ ತಪಾಸಣೆಗೆ ತೆರಳಿದ್ದ ಆರೋಗ್ಯ ಸೈನಿಕರ ಮೇಲೆ ಕ್ವಾರಂಟೈನ್ನಲ್ಲಿದ್ದವರು ನಿನ್ನೆ ಮಾರಣಾಂತಿಕ ಹಲ್ಲೆಯನ್ನು ನಡೆಸಿದ್ದರು. ಈ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ.
ದೇಶದ್ರೋಹದ ಪ್ರಕರಣ ದಾಖಲಿಸಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತೆಗೆದುಕೊಂಡಿರುವ ಕ್ರಮಗಳಿಂದ ಕೊರೊನಾ ವೈರಸ್ ನಿಯಂತ್ರಣದಲ್ಲಿ ಸಫಲವಾಗಿದೆ. ಆದರೆ ಯಾವುದೇ ಜಾತಿ, ಮತ, ಧರ್ಮಗಳಿಲ್ಲ. ನಮ್ಮ ಸಂಕಲ್ಪ ಹಾಗೂ ಸಂಯಮದಿಂದ ನಿಯಂತ್ರಣವಾಗಬಹುದು. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಯಮ ಹಾಗೂ ಸಂಕಲ್ಪಗಳನ್ನು ಪಾಲಿಸುವಂತೆ ಕರೆ ನೀಡಿದ್ದರು.
ಆದರೆ ಇವತ್ತು ನಾವು ಇಡೀ ದೇಶದಲ್ಲಿ ನಮ್ಮ ರಕ್ಷಣೆ ಮಾಡುತ್ತಿರುವ ವೈದ್ಯರು, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಹಾಗೂ ಹತ್ಯೆ ಮಾಡುತ್ತಿರುವುದನ್ನು ನೋಡುತ್ತಿದ್ದೇವೆ. ಇವೆಲ್ಲ ರಾಷ್ಟ್ರದ್ರೋಹದ ಘಟನೆಗಳಾಗಿವೆ. ನಿನ್ನೆ ಪಾದರಾಯನಪುರದಲ್ಲಿ 300-400 ಜನರು ಸೇರಿಕೊಂಡು ದಾಂಧಲೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ. ದಾಂಧಲೆ, ಹಲ್ಲೆ ಮಾಡಿದವರನ್ನು ಹುಡುಕಿ ಹುಡುಕಿ ಜೈಲಿಗೆ ಹಾಕಬೇಕು. ಉತ್ತರ ಪ್ರದೇಶ ಸರ್ಕಾರ ಮಾಡಿದಂತೆ ಅಂಥವರನ್ನು ಹುಡುಕಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಅವರನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಂತೆ ಇಲ್ಲಿಯೂ ಮಾಡಬೇಕೆಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಹೇಳಿದ್ದೇನೆ.
ಇದನ್ನು ಯಾವುದೇ ರೀತಿ ಸಹಿಸಿಕೊಳ್ಳುವುದು ಸಾಧ್ಯವೆ ಇಲ್ಲ. ಮುಂದೆ ಇಂತಹ ಯಾವುದೇ ಕ್ರಮಗಳು ನಡೆಯದಂತೆ ಪಾದರಾಯನಪುರ ಪ್ರಕರಣದಿಂದಲೇ ಕಠಿಣಕ್ರಮಗಳನ್ನು ಕೈಗೊಳ್ಳುವ ಕುರಿತು ಮಾತನಾಡಿದ್ದೇನೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.