ಹಾವೇರಿ ಕ್ಷೇತ್ರದಿಂದ ಲೋಕಸಭೆಗೆ ಬೊಮ್ಮಾಯಿ ಕಣಕ್ಕಿಳಿಸಲು ಬಿಜೆಪಿ ಪ್ಲಾನ್!? ಕೈ ತಪ್ಪುತ್ತಾ ವಿಪಕ್ಷ ಸ್ಥಾನ?
ಬೆಂಗಳೂರು, ಸೆಪ್ಟೆಂಬರ್ 02: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದ್ದು, ಬಿಜೆಪಿ ಹೈಕಮಾಂಡ್ ಸಹ ಗೆಲ್ಲುವ ನಾಯಕರನ್ನ ಕಣಕ್ಕಿಳಿಸಲು ಚಿಂತನೆ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಹಾವೇರಿ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಹೌದು, ಲೋಕಸಭಾ ಚುನಾವಣೆಯಲ್ಲಿ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ ಹೊಸ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಬಿಜೆಪಿ ನಾಯಕತ್ವವು ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಇನ್ನೂ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಆಯ್ಕೆಯಾಗಿದ್ದಾರೆ. ಶಿಗ್ಗಾಂವಿ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸೇರಿದರೂ ಹಾವೇರಿ ಜಿಲ್ಲೆಯಲ್ಲಿ ಮಾಜಿ ಸಿಎಂ ಗಣನೀಯ ಪ್ರಭಾವ ಹೊಂದಿದ್ದಾರೆ. ಅದಲ್ಲದೇ ಮುಖ್ಯಮಂತ್ರಿ ಆಗಿದ್ದಾಗ ಹಾವೇರಿ ಜಿಲ್ಲೆಯ ಅಭಿವೃದ್ಧಿಗಾಗಿ ಮಾಡಿದ ಕೆಲಸಗಳನ್ನು ಹೈಕಮಾಂಡ್ ಗಮನಿಸಿದ್ದು, ಇವು ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಗೆಲ್ಲಿಸುತ್ತವೆ ಎಂಬ ಚಿಂತನೆಯಲ್ಲಿ ಪಕ್ಷದ ನಾಯಕರು ಇದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಗದಗ ಜಿಲ್ಲೆಯ ಕೆಲ ಕ್ಷೇತ್ರಗಳು ಕೂಡ ಬರಲಿದ್ದು, ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಏಕೆಂದರೆ ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಹೀನಾಯ ಪ್ರದರ್ಶನ ತೋರಿದ್ದು, ಗದಗ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಶಿರಹಟ್ಟಿ ಹಾಗೂ ಹಾವೇರಿಯ 6 ಕ್ಷೇತ್ರಗಳ ಪೈಕಿ ಶಿಗ್ಗಾಂವಿಯಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.ಇತ್ತ ಕಾಂಗ್ರೆಸ್ ತನ್ನ ಶಕ್ತಿಯನ್ನ ವೃದ್ದಿಸಿಕೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಳಿಕ ಐದು ಚುನಾವಣಾ ಗ್ಯಾರಂಟಿಗಳಿಗೆ ಜನರಿಂದ ಬರುವ ಪ್ರತಿಕ್ರಿಯೆ ಕಾಂಗ್ರೆಸ್ ಅನ್ನು ಆತ್ಮವಿಶ್ವಾಸದ ಅಲೆಯಲ್ಲಿ ತೇಲಾಡಿಸುತ್ತಿದೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ಕಷ್ಟಸಾಧ್ಯ ಎನ್ನುವ ಮಾತುಗಳು ಕೇಳಿ ಬಂದಿವೆ.

ಇನ್ನೂ ಈ ಬಗ್ಗೆ ಧಾರವಾಡ ವಿಭಾಗದ ಚುನಾವಣಾ ಉಸ್ತುವಾರಿ ಲಿಂಗರಾಜ್ ಪಾಟೀಲ್, ಹಾವೇರಿಯಲ್ಲಿ ಬಿಜೆಪಿಗಿರುವ ಸವಾಲಿನ ಬಗ್ಗೆ ನಮಗೆ ಅರಿವಿದೆ. ಹಾವೇರಿಗೆ ಸಮರ್ಥ ಅಭ್ಯರ್ಥಿಯನ್ನು ಘೋಷಿಸುತ್ತೇವೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಸರ್ವೇ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ. ಶಿವಕುಮಾರ್ ಉದಾಸಿ ಅವರು 2009ರಿಂದ ಹಾವೇರಿಯಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ಆದರೆ, ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇದರಿಂದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ್ ಕಲ್ಕೋಟಿ, ಒಬಿಸಿ ನಾಯಕ ರಾಜಶೇಖರ್ ಕತ್ತೆಗೌಡರ್ ಬಿಜೆಪಿ ಟಿಕೆಟ್ಗೆ ಲಾಬಿ ನಡೆಸಿದ್ದಾರೆ.
ಇನ್ನೂ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ವಿಳಂಬದ ಕುರಿತು ಈಗಾಗಲೇ ಬಿಜೆಪಿ ಪಕ್ಷದ ವಿರುದ್ದ ಕಾಂಗ್ರೆಸ್ ನಾಯಕರು ಸಾಕಷ್ಟು ಟೀಕೆ ಟಿಪ್ಪಣಿಗಳನ್ನ ನಡೆಸಿದ್ದು, ಇತ್ತ ಲೋಕಸಭಾ ಚುನಾವಣಾ ಸಿದ್ದತೆ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ಗುರುವಾರ ಬಿಜೆಪಿ ನಾಯಕರ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ವಿಧಾನಸಭಾ ವಿರೋಧ ಪಕ್ಷದ ನಾಯಕನ ನೇಮಕ ವಿಳಂಬದ ಬಗ್ಗೆಯೂ ಚರ್ಚೆ ನಡೆದಿದೆ. ಜೊತೆಗೆ ಬಸವರಾಜ ಬೊಮ್ಮಾಯಿ ಪಾತ್ರದ ಬಗ್ಗೆಯೂ ಮಾತುಕತೆ ನಡೆದಿದೆ.
ಸೆಪ್ಟೆಂಬರ್ 10ರಂದು ಜಿ-20 ಶೃಂಗಸಭೆ ಮುಗಿಯಲಿದ್ದು, ಬೊಮ್ಮಾಯಿ ಅವರ ಸೇವೆಯನ್ನು ಬಳಸಿಕೊಳ್ಳಲು ಪಕ್ಷ ಯೋಚಿಸಿದೆ ಎಂದು ಎನ್ ರವಿಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನ ಸಿಗದಿದ್ದರೆ ಅವರನ್ನು ಲೋಕಸಭಾ ಚುನಾವಣೆಗೆ ಪರಿಗಣಿಸುವ ಸಾಧ್ಯತೆ ಇದೆ ಎಂದು ಹಿರಿಯ ನಾಯಕರು ತಿಳಿಸಿದ್ದಾರೆ.
ಹಾವೇರಿಯಿಂದ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೆಸರು ಕೇಳಿಬರುತ್ತಿದೆ. ಅವರು ಎರಡು ಬಾರಿ ಈ ಸ್ಥಾನಕ್ಕೆ ಸ್ಪರ್ಧಿಸಿದರು ಮತ್ತು 2014 ರಲ್ಲಿ 43% ಮತಗಳನ್ನು ಪಡೆದಿದ್ದರು, ಇನ್ನೂ 2019 ರಲ್ಲಿ ಉದಾಸಿ ವಿರುದ್ಧ ಸೋತ DR ಪಾಟೀಲ್ ಮತ್ತು ಕಾನೂನು ಸಚಿವ HK ಪಾಟೀಲ್ ಅವರ ಪುತ್ರ ಕೃಷ್ಣ ಪಾಟೀಲ್ ಇತರ ಸಂಭಾವ್ಯರಲ್ಲಿ ಸೇರಿದ್ದಾರೆ. ಪಕ್ಷ ಬಯಸಿದರೆ ನಾನು ಸ್ಪರ್ಧಿಸಲು ಸಿದ್ಧ ಎಂದು ಸಲ್ಲಿಂ ಅಹ್ಮದ್ ಹೇಳಿದ್ದಾರೆ.












Click it and Unblock the Notifications