ಇಂದು ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಐದು ಹಾಲಿ ಸಂಸದರಿಗೆ ಟಿಕೆಟ್ ಮಿಸ್- ಇಲ್ಲಿದೆ ಪಟ್ಟಿ
ಬೆಂಗಳೂರು, ಮಾರ್ಚ್ 22: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದೆ. ಈಗಾಗಲೇ 28 ಕ್ಷೇತ್ರಗಳ ಫೈಕಿ ಬಿಜೆಪಿ ಹೈಕಮಾಂಡ್ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈಗಾಗಲೇ ಚುನಾವಣೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿ ಬಂಡಾಯದ ಬೆಂಕಿ ಹೊತ್ತಿದೆ.
ಹೌದು, 20 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಫೋಷಿಸಿದ ಬೆನ್ನಲ್ಲೇ ಟಿಕೆಟ್ ಕೈ ತಪ್ಪಿದ ಹಾಲಿ ಸಂಸದರ ಸ್ವಪಕ್ಷದ ನಾಯಕರ ವಿರುದ್ಧವೇ ಗರಂ ಆಗಿ ಅಸಮಾಧಾನ ಹೊರ ಹಾಕಿದ್ದಾರೆ. ಸದ್ಯ 28 ಲೋಕಸಭಾ ಕ್ಷೇತ್ರದಲ್ಲಿ 20 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಉಳಿದ 8 ಕ್ಷೇತ್ರಗಳ ಫೈಕಿ ಮೂರು ಜೆಡಿಎಸ್ ನಾಯಕರಿಗೆ ಬಿಜೆಪಿ ಹೈಕಮಾಂಡ್ ಬಿಟ್ಟು ಕೊಟ್ಟಿದೆ. ಇನ್ನೂ ಉಳಿದ ಐದು ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದರಿದ್ದು, ಈ ಐವರಿಗೂ ಸಹ ಟಿಕೆಟ್ ಕೈ ತಪ್ಪಲಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಹೈಕಮಾಂದು ಬಾಕಿ ಉಳಿದ ಐದು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನ ಶುಕ್ರವಾರ ಪ್ರಕಟವಾಗಲಿದ್ದು,ಐದು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹುರಿಯಾಳುಗಳು ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ. ಯಾಕೆಂದರೆ ಈ ಐದು ಕ್ಷೇತ್ರದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಲಿದೆ.
ಇನ್ನೂ ದೆಹಲಿಯಲ್ಲಿ ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್ ಅಶೋಕ್ ಚರ್ಚೆ ನಡೆಸಿದ್ದಾರೆ. ಬಾಕಿ ಉಳಿದ ಉತ್ತರ ಕನ್ನಡ, ಬೆಳಗಾವಿ, ರಾಯಚೂರು, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮಾಲೋಚನೆ ನಡೆಸಿದ್ದಾರೆ.
ಉತ್ತರ ಕನ್ನಡದಿಂದ ಅನಂತ ಕುಮಾರ ಹೆಗಡೆ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಂಗಳಾ ಅಂಗಡಿ, ರಾಯಚೂರು ಲೋಕಸಭಾ ಕ್ಷೇತ್ರದಿಂದ ರಾಜಾ ಅಮರೇಶ್ವರ್ ನಾಯಕ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಎ ನಾರಾಯಣಸ್ವಾಮಿ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪುವುದು ಖಚಿತವಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಸಿಎನ್ ಬಚ್ಚೇಗೌಡ ಅವರು ಈಗಾಗಲೇ ರಾಜೀನಾಮೆ ನೀಡಿದ್ದು, ಈ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಚಿವ ಡಾ. ಕೆ ಸುಧಾಕರ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಫೈಪೋಟಿ ನಡೆಸಿದ್ದಾರೆ.
ಯಾವ ಕ್ಷೇತ್ರದಿಂದ ಯಾರಿಗೆ ಕೊಕ್?
1. ಉತ್ತರ ಕನ್ನಡ ಲೋಕಸಭಾ ಕ್ಷೇತ್ರ - ಅನಂತ ಕುಮಾರ ಹೆಗಡೆ
2. ಬೆಳಗಾವಿ ಲೋಕಸಭಾ ಕ್ಷೇತ್ರ- ಮಂಗಳಾ ಅಂಗಡಿ
3. ರಾಯಚೂರು ಲೋಕಸಭಾ ಕ್ಷೇತ್ರ - ರಾಜಾ ಅಮರೇಶ್ವರ್ ನಾಯಕ್
4. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ- ಸಿಎನ್ ಬಚ್ಚೇಗೌಡ
5. ಚಿತ್ರದುರ್ಗ ಲೋಕಸಭಾ ಕ್ಷೇತ್ರ- ಎ ನಾರಾಯಣಸ್ವಾಮಿ












Click it and Unblock the Notifications