ಬಿಜೆಪಿ ಟಿಕೆಟ್ ಬಂಡಾಯ; ನಾಲ್ವರು ನಾಯಕರಿಗೆ ಬಂತು ಹೈಕಮಾಂಡ್ ಸೂಚನೆ!
ಬೆಂಗಳೂರು, ಏಪ್ರಿಲ್ 14; ಕರ್ನಾಟಕದ ಚುನಾವಣೆಗೆ ಬಿಜೆಪಿ 189 ಮತ್ತು 23 ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದೆ. ಟಿಕೆಟ್ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸಿದ್ದಾರೆ. ಬೇರೆ ಪಕ್ಷ ಸೇರುತ್ತಿದ್ದಾರೆ. ಮೇ 10ರಂದು ನಡೆಯುವ ಚುನಾವಣೆ ಹಿನ್ನಲೆಯಲ್ಲಿ ಈ ಬೆಳವಣಿಗೆಯನ್ನು ಹೈಕಮಾಂಡ್ ನಾಯಕರು ಗಮನಿಸಿದ್ದಾರೆ.
ಅದರಲ್ಲೂ ಬೆಳಗಾವಿ ಭಾಗದ ಪ್ರಭಾವಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಂಡಾಯ ಎದ್ದ ಮೇಲೆ ಬಿಜೆಪಿ ನಾಯಕರು ಬಂಡಾಯ ಶಮನ ಮಾಡಲು ಮುಂದಾಗಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ, ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಸೇರುತ್ತಿರುವುದು ಬಿಜೆಪಿಗೆ ಭಾರೀ ಹಿನ್ನಡೆ ಉಂಟು ಮಾಡಿದೆ.

ಬಿಜೆಪಿ ಹೈಕಮಾಂಡ್ ಪಟ್ಟಿ ಬಿಡುಗಡೆ ಬಳಿಕ ಉಂಟಾದ ಅಸಮಾಧಾನ ಬಗೆಹರಿಸಲು ನಾಲ್ವರು ನಾಯಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಅಧಿಕಾರದಲ್ಲಿ ಪಕ್ಷಕ್ಕೆ ಟಿಕೆಟ್ ಸಿಗಲಿಲ್ಲ ಎಂಬ ಗೊಂದಲಗಳೇ ಚುನಾವಣೆಯಲ್ಲಿ ಹಿನ್ನಡೆ ಉಂಟು ಮಾಡಬಾರದು. ಆದ್ದರಿಂದ ಬಂಡಾಯ ಶಮನ ಮಾಡಿ, ಅಸಮಾಧಾನಗೊಂಡ ಶಾಸಕರ ಜೊತೆ ಮಾತನಾಡಿ ಎಂದು ನಾಯಕರಿಗೆ ನಿರ್ದೇಶನ ನೀಡಲಾಗಿದೆ.
ನಾಲ್ವರು ನಾಯಕರಿಗೆ ಹೊಣೆ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಉಂಟಾಗಿರುವ ಅಸಮಾಧಾನವನ್ನು ಶಮನಗೊಳಿಸುವ ಹೊಣೆಯನ್ನು ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ನೀಡಿದೆ. ಹೈಕಮಾಂಡ್ ಸೂಚನೆ ಬೆನ್ನಲ್ಲೆ ಅಸಮಾಧಾನಿತರ ಜೊತೆ ಮಾತುಕತೆ ಮಾಡಲು ನಾಯಕರು ಸಮಯ ನಿಗದಿ ಮಾಡುತ್ತಿದ್ದಾರೆ.

ಬಿಜೆಪಿ ಪಕ್ಷ ನಿಮಗೆ ಸಾಕಷ್ಟು ನೀಡಿದೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲು ಶ್ರಮಿಸಿ. ಮುಂದೆ ಪಕ್ಷ ನಿಮಗೆ ಅವಕಾಶ ನೀಡಲಿದೆ ಎಂದು ನಾಯಕರು ಅಸಮಾಧಾನಗೊಂಡ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಪಕ್ಷದ ಘೋಷಿತ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಮನವೊಲಿಕೆ ಮಾಡಲಾಗುತ್ತದೆ. ಟಿಕೆಟ್ ಸಿಗದವರು ಬೇರೆ ಪಕ್ಷಕ್ಕೆ ವಲಸೆ ಹೋಗದಂತೆ ತಡೆಯಲು ಸಹ ಪ್ರಯತ್ನ ನಡೆಸಿ ಎಂದು ಹೈಕಮಾಂಡ್ ಸೂಚನೆ ನೀಡಿದೆ.
ಟಿಕೆಟ್ ಕೈತಪ್ಪಿದ ಬಳಿಕ ಬಿಜೆಪಿ ಕಚೇರಿಗೆ ಆಗಮಿಸಿದ ನಾಯಕರು, ಮುಖಂಡರ ಜೊತೆ ಅಲ್ಲೇ ಇದ್ದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಮಾತುಕತೆ ನಡೆಸಿದ್ದಾರೆ. ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡೋಣ, ಪಕ್ಷ ಅಧಿಕಾರಕ್ಕೆ ಬರಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಹೇಳುವ ಮೂಲಕ ಅವರ ಮನವೊಲಿಕೆ ಮಾಡಿ ಅಸಮಾಧಾನ ಶಮನ ಮಾಡಲು ಪ್ರಯತ್ನ ನಡೆಸಿದ್ದಾರೆ. ಟಿಕೆಟ್ ವಂಚಿತರು ಪಕ್ಷ ಬಿಟ್ಟು ಹೋಗಿ ಅದು ಬೇರೆ ಪಕ್ಷಕ್ಕೆ ಸಹಕಾರಿಯಾಗದಂತೆ ಎಚ್ಚರ ವಹಿಸಲಾಗುತ್ತಿದೆ.
ಬಿಜೆಪಿ ಟಿಕೆಟ್ ಕೈ ತಪ್ಪಿದ ಬಳಿಕ ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರಿಗೆ ಬಿಜೆಪಿ ರಾಜ್ಯ ಉಸ್ತುವಾಗಿ ಅರುಣ್ ಸಿಂಗ್ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಯಾರೋ ನಾಲ್ಕು ಜನ ಪಕ್ಷ ಬಿಟ್ಟು ಹೋದರೆ ಏನೂ ನಷ್ಟ ಆಗುವುದಿಲ್ಲ. ಹೋಗುವವರು ದುಡುಕಿನ ನಿರ್ಧಾರ ತಗೆದುಕೊಂಡು ಹೋಗಿದ್ದಾರೆ. ಅಂಥವರಿಗೆ ನಮ್ಮ ಪಕ್ಷದ ಬಾಗಿಲು ಶಾಶ್ವತವಾಗಿ ಬಂದ್ ಆಗಲಿದೆ. ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳಲು 20 ವರ್ಷವಾಗಬಹುದು" ಎಂದು ಹೇಳುವ ಮೂಲಕ ಎಚ್ಚರಿಕೆ ರವಾನಿಸಿದರು.












Click it and Unblock the Notifications