ವಿಧಾನ ಪರಿಷತ್ ಚುನಾವಣೆ: ಬಿಜೆಪಿ ನಾಯಕರಗೆ ಹೊಸ ಟಾಸ್ಕ್
ಬೆಂಗಳೂರು, ನ.9: ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಒಂದು ಕಡೆ ಗೆದ್ದು, ಮತ್ತೊಂದು ಕಡೆ ಬಿದ್ದಿರುವ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಮತ್ತೊಂದು ಟಾಸ್ಕ್ ನೀಡಿದೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಿತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಯೂ ಆದ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್, ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ಕುಮಾರ್ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್ ಉಪಚುನಾವಣೆಯಲ್ಲಿನ ಬಿಜೆಪಿ ಸಾಧನೆಯನ್ನು ಹೊರಗಡೆ ಸಮರ್ಥಿಸಿಕೊಂಡಿದ್ದರು. ಆದರೆ, ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದರೂ ಸಹ ಉಪಚುನಾವಣೆಯ ಎರಡು ಸ್ಥಾನಗಳನ್ನು ಪಡೆಯದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕೇಂದ್ರದ ನಾಯಕರಿಗೂ ಸಹ ಈ ಸಂಬಂಧ ತೃಪ್ತಿ ಇಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯ ಪದಾಧಿಕಾರಿಗಳ ಸಭೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಚುನಾವಣಾ ಆಯೋಗದಿಂದ ರಾಜ್ಯದ 25 ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಡಿಸೆಂಬರ್ 10ರಂದು ಚುನಾವಣೆ ನಡೆಯುತ್ತದೆ. ನವೆಂಬರ್ 16 ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ನವೆಂಬರ್ 26 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ಡಿಸೆಂಬರ್ 10ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯ ಬಿಜೆಪಿಗೆ ಹೊಸ ಟಾಸ್ಕ್:
ರಾಜ್ಯದ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕೆಲ ಕೇಂದ್ರದ ನಾಯಕರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ಮುಗಿಸಿ, ಬಳಿಕ ಸಭೆಯಲ್ಲಿ ಮತ್ತೆ ಪಾಲ್ಗೊಂಡಿದ್ದಾರೆ.
ಕರ್ನಾಟಕದಲ್ಲಿ ಇತ್ತೀಚಿನ ಬೆಳವಣಿಗೆಗಳು ನೋಡಿದರೆ ಬಿಜೆಪಿಗೆ ಆಶಾದಾಯಕವಾಗಿಲ್ಲ. ನಮ್ಮದೇ ಸರ್ಕಾರ ಇದ್ದಾಗ ಉಪಚುನಾವಣೆಯ ಸೋಲು ಸಹನೀಯ ಅಲ್ಲ. ರಾಜ್ಯ ವಿಧಾನಸಭೆಗೆ ಚುನಾವಣೆಗೆ ವರ್ಷವಷ್ಟೇ ಬಾಕಿ ಇರುವ ಸಂದರ್ಭದಲ್ಲಿ ಸೋಲುಗಳನ್ನು ಸಹಿಸಲು ಸಾಧ್ಯವಿಲ್ಲ ಎಂಬ ಎಚ್ಚರಿಕೆಯನ್ನು ಕೇಂದ್ರದ ನಾಯಕರು ನೀಡಿದ್ದಾರೆ ಎಂದು ಗೊತ್ತಾಗಿದೆ.
ಈ ಮಧ್ಯೆ ಮುಂದಿನ ಒಂದು ತಿಂಗಳಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸಾಮರ್ಥ್ಯ ಸಾಬೀತುಪಡಿಸುವಂತಹ ಟಾಸ್ಕ್ನ್ನು ರಾಜ್ಯ ನಾಯಕರಿಗೆ ನೀಡಲಾಗಿದೆ. 25 ಕ್ಷೇತ್ರಗಳ ಪೈಕಿ ಕನಿಷ್ಟ 15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ನೆರವಾಗುತ್ತದೆ ಎಂಬ ಟಾಸ್ಕ್ ಅನ್ನು ನೀಡಲಾಗಿದೆ ಎಂಬ ಮಾಹಿತಿ ಇದೆ.
ಪ್ರಧಾನಿ ಮೋದಿಯವರನ್ನೇ ಪ್ರೇರಣೆಯಾಗಿಟ್ಟುಕೊಳ್ಳಿ:
ರಾಜ್ಯ ಪದಾಧಿಕಾರಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್.ಸಂತೋಷ್, "ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರವು ಆರ್ಥಿಕ ಕ್ಷೇತ್ರ, ಗಡಿ ರಕ್ಷಣೆ, ದೇಶವನ್ನು ಮುಂಚೂಣಿ ರಾಷ್ಟ್ರವಾಗಿ ಅಭಿವೃದ್ಧಿ ಮಾಡಿದೆ. ಮೋದಿಯವರು ವಿಶ್ವ ನಾಯಕತ್ವವನ್ನು ವಹಿಸಿರುವುದು, ದೇಶದಲ್ಲಿ ಮೂಲಭೂತ ಸೌಕರ್ಯ ವರ್ಧನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಅನನ್ಯ ಸಾಧನೆ ಮಾಡಿದ್ದಾರೆ" ಎಂದು ಹೇಳಿದರು.
ಪ್ರಧಾನಿ ಮೋದಿ ಅವರನ್ನೇ ಪ್ರೇರಣೆ ಆಗಿ ಇಟ್ಟುಕೊಂಡು ರಾಜ್ಯದಲ್ಲಿ ಬದಲಾವಣೆ ಮಾಡುವ ಕಡೆಗೆ ನಡೆಯಬೇಕು ಎಂದು ಉಲ್ಲೇಖಿಸಿದರು. ಕೇಂದ್ರ ಸರಕಾರವು ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದ ಸಂದರ್ಭದಲ್ಲಿ ರಾಜ್ಯದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಕೂಡಲೇ ಸ್ಪಂದಿಸಿ ಇನ್ನಷ್ಟು ದರ ಇಳಿಸಿದ್ದು ಶ್ಲಾಘನೀಯ ಎಂದರು.
ಡಿ. 18 ಮತ್ತು 19ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ''ಪ್ರಚಲಿತ ವಿದ್ಯಮಾನಗಳು ಮತ್ತು ಮುಂಬರುವ ವಿಧಾನಪರಿಷತ್ ಸದಸ್ಯರ ಚುನಾವಣೆ, ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಬಿಬಿಎಂಪಿ ಚುನಾವಣೆಗಳ ಪ್ರಾಮುಖ್ಯತೆ ಬಗ್ಗೆ ಉಲ್ಲೇಖಿಸಿದರು. ಮುಂದಿನ ಡಿಸೆಂಬರ್ 18 ಮತ್ತು 19ರಂದು ಮುಂದಿನ ರಾಜ್ಯ ಕಾರ್ಯಕಾರಿಣಿಯನ್ನು ಹುಬ್ಬಳ್ಳಿಯಲ್ಲಿ ನಡೆಸಲಾಗುವುದು" ಎಂದು ಪ್ರಕಟಿಸಿದರು.
ನಾಲ್ಕು ತಂಡಗಳು, ನಾಲ್ಕು ದಿನಗಳ ಕಾಲ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುವ ಜನಸ್ವರಾಜ್ ಯಾತ್ರೆಯಲ್ಲಿ ಪಕ್ಷದ ಎಲ್ಲರೂ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ರಾಜ್ಯ ಪದಾಧಿಕಾರಿಗಳಿಗೆ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದರು.
Recommended Video