ಹೊಸ ಪ್ರಯೋಗದೊಂದಿಗೆ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ತಯಾರಿ; ಏ.8ಕ್ಕೆ ಪಟ್ಟಿ ಬಿಡುಗಡೆಗೆ ಮುಂದಾದ ಹೈಕಮಾಂಡ್!
ಬೆಂಗಳೂರು, ಮಾರ್ಚ್30: ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಮೂರು ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಆರಂಭಗೊಂಡಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಆಡಳಿತರೂಢ ಬಿಜೆಪಿ ಇದೀಗ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈಗಾಗಲೇ ರಾಜಕೀಯ ಪಕ್ಷಗಳು ಚುನಾವಣೆ ಸಮರಕ್ಕೆ ಸಜ್ಜಾಗಿದ್ದು, ಈ ನಡುವೆ ರಾಜ್ಯ ಬಿಜೆಪಿ ಪಾಳಯದಲ್ಲಿ ಟಿಕೆಟ್ ಗಾಗಿ ಸಾಕಷ್ಟು ಟಿಕೆಟ್ ಆಕಾಂಕ್ಷಿಗಳು ಲಾಭಿ ನಡೆಸಿದ್ದು, ಕೆಲವರಿಗೆ ಟಿಕೆಟ್ ಕೈ ತಪ್ಪುವ ಆತಂಕ ಎದುರಾಗಿದೆ ಎನ್ನಲಾಗಿದೆ.

ಈಗಾಗಲೇ ಪಕ್ಷವನ್ನ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಪಣ ತೊಟ್ಟಿರುವ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಗೆಲ್ಲುವ ಕುದುರೆಗೆ ಟಿಕೆಟ್ ನೀಡಲು ನಿರ್ಧರಿಸಿದೆ. ಮಿಷನ್ 150 ಸ್ಥಾನಗಳನ್ನ ಗೆಲ್ಲುವ ಗುರಿ ಹಾಕಿಕೊಡಿರುವ ಹೈಕಮಾಂಡ್ ಟಿಕೆಟ್ ನೀಡುವ ಕುರಿತು ಸಾಕಷ್ಟು ಲೆಕ್ಕಾಚಾರವನ್ನ ಹಾಕಿಕೊಂಡಿದೆ.
ಇನ್ನೂ ಮೂರು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದು, ಟಿಕೆಟ್ ವಿಚಾರದಲ್ಲಿ ಯಾವದೇ ಗೊಂದಲಗಳು ಹಾಗೂ ಭಿನ್ನಮತಗಳು ಉಂಟಾಗದ ರೀತಿಯಲ್ಲಿ ಟಿಕೆಟ್ ಘೋಷಿಸುವ ಲೆಕ್ಕಾಚಾರವನ್ನ ಬಿಜೆಪಿ ಹೈಕಮಾಂಡ್ ಹಾಕಿಕೊಂಡಿದೆ. ಸದ್ಯ ಕರ್ನಾಟಕದಲ್ಲಿ ಅಭ್ಯರ್ಥಿ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಆಯಾ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮತದಾನ ನಡೆಯಲಿದೆ. ಗೆಲುವಿನ ಅಭ್ಯರ್ಥಿಗೆ ಟಿಕೆಟ್ ನೀಡಲು ಪ್ಲಾನ್ ಮಾಡಲಾಗಿದೆ. ಏಪ್ರಿಲ್ 8 ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಪಕ್ಷದ ಅಭ್ಯರ್ಥಿಯಾರಾಗಬೇಕು ಎಂದು ಪಕ್ಷದ ವಿವಿಧ 10 ಅಂಶಗಳಡಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಸಜ್ಜಾಗಿದೆ. ಮಾ.31ರಿಂದ ರಾಜ್ಯದ 39 ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಈ ಪ್ರಕ್ರಿಯೆ ಆರಂಭವಾಗಲಿದೆ. ಈ ಪ್ರಯೋಗ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ದೇಶ ವಿವಿಧೆಡೆಗಳಲ್ಲಿ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಇದೇ ಮಾದರಿ ಅನುಷ್ಠಾನಗೊಳಿಸುವ ಸಾಧ್ಯತೆ ಇದ್ದು, ಇದು ಸಾಧ್ಯವಾದರೆ ಅದು ಕರ್ನಾಟಕ ಮಾದರಿ ಎಂದೇ ಹೆಸರಾಗಲಿದೆ ಎಂದು ಬಿಜೆಪಿ ಚಿಂತನೆ ನಡೆಸಿದೆ.

ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಈಗಾಗಲೇ ಹಲವು ಸಮೀಕ್ಷೆಗಳನ್ನ ನಡೆಸಿರುವ ಬಿಜೆಪಿ. ಇನ್ನು ಹಲವು ತಂತ್ರ೦ಗಾರಿಕೆಯನ್ನ ಹಾಕಿಕೊಂಡಿದ್ದು, ಕ್ಷೇತ್ರದಲ್ಲಿ ಆಕಾಂಕ್ಷಿಗಳ ಬಗೆಗಿನ ಅನಿಸಿಕೆ ಏನಿದೆ, ಅಭ್ಯರ್ಥಿಯಾಗಿಸಿದರೆ ಗೆಲುವಿನ ಲೆಕ್ಕಾಚಾರ ಏನಾಗಬಹುದು ಎಂಬುದನ್ನ ಅಳೆದು-ತೂಗಿ ಅಭ್ಯರ್ಥಿ ಯಾರೆಂಬುದನ್ನು ನಿರ್ಧರಿಸಲು ಬಿಜೆಪಿ ಯೋಚಿಸಿದೆ. ಅಭ್ಯರ್ಥಿ ಆಯ್ಕೆಗೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳ ಮತದಾನ ಮಾಡುವ ಮೂಲಕ ಆಯ್ಕೆ ಪ್ರಕ್ರಿಯೆಗೆ ಮುಂದಾಗಿದೆ.
ಇನ್ನೂ ಒಂದು ಜಿಲ್ಲೆಗೆ ಐದಾರು ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಆಯಾ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳು ಯಾರಾಗಬೇಕೆಂದು ಪಕ್ಷದ ಪ್ರಮುಖ ಪದಾಧಿಕಾರಿಗಳ ಅನಿಸಿಕೆ ಸಂಗ್ರಹಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮತ ಪೆಟ್ಟಿಗೆ ಇರಿಸಲಾಗುತ್ತದೆ. ಬಿಜೆಪಿಯಲ್ಲಿ ಶಕ್ತಿ ಕೇಂದ್ರಗಳ ಮೇಲ್ಪಟ್ಟ ವಿವಿಧ ವಿಭಾಗಗಳ ಪದಾಧಿಕಾರಿಗಳು ತಮ್ಮ ಕ್ಷೇತ್ರದ ಅಭ್ಯರ್ಥಿಯಾರಾಗಬೇಕೆಂದು ನಿರ್ಧರಿಸುವ ಹಕ್ಕು ನೀಡಲಾಗುತ್ತದೆ. ಮಾರ್ಚ್ 31 ರಂದು ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಈ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಬಿಜೆಪಿಯ ಮಾತೃ ಘಟಕದ ಪದಾಧಿಕಾರಿಗಳು, ಮಹಿಳಾ, ರೈತ, ಅಲ್ಪಸಂಖ್ಯಾಕ ತರಿಗಿಷ್ಟ ಜಾತಿ-ಪಂಗಡ, ಯುವ ಮೋರ್ಚಾ, ಹಿಂದುಳಿದ ಕಾರ್ಮಿಕ ಹೀಗೆ ವಿವಿಧ ಘಟಕಗಳ ಆಯಾ ವಿಧಾನಸಭಾ ಕೇತ್ರದ ಪದಾಧಿಕಾರಿಗಳು ತಮ್ಮ ಕ್ಷೇತ್ರದ ಅಭ್ಯರ್ಥಿ ಯಾರೆಂಬುದನ್ನು ಅವರ ಹೆಸರು ಬರೆದು ಮತ ಪೆಟ್ಟಿಗೆಗೆ ಹಾಕಬೇಕಿದೆ. ಪದಾಧಿಕಾರಿಗಳ ಮೇಲೂ ಪ್ರಭಾವ ಬೀರುವ ಇಲ್ಲವೆ ಹಾಲಿ ಶಾಸಕರು ತಮ್ಮದೇ ಶಕ್ತಿ ಪ್ರದರ್ಶಿಸುವುದಕ್ಕೆ ಅವಕಾಶ ನೀಡದಂತೆ ಬೇರೆ ಜಿಲ್ಲೆಯ ಪಕ್ಷದ ನಾಯಕರನ್ನು ಮೇಲುಸ್ತುವಾರಿಗೆ ನಿಯೋಜಿಸಲಾಗಿದೆ.
ಮಾ.31ರಂದು ಆಯಾ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಯಾರೆಂಬುದರ ಬಗ್ಗೆ ಪಕ್ಕದ ಪದಾಧಿಕಾರಗಳಿಂದ ಮತದಾನ ನಡೆದ ಅನಂತರ ಮತ ಪೆಟ್ಟಿಗೆಗಳನ್ನು ಬೆಂಗಳೂರಿಗೆ ತಂದು ಅಲ್ಲಿಯೇ ತೆರೆಯಲಾಗುತ್ತದೆ. ಎ.1 ಹಾಗೂ 2ರಂದು ಬೆಂಗಳೂರಿನಲ್ಲಿ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಲ್ಲಿಯೂ ಅಭ್ಯರ್ಥಿ ಯಾರಾಗಬೇಕು ಎಂಬುದರ ಅನಿಸಿಕೆಗಳನ್ನು ಸಂಗ್ರಹಿಸಿ ಪಟ್ಟಿ ರೆಡಿ ಮಾಡಿ ಹೈಕಮಾಂಡ್ ಗೆ ಆ ಶಾರ್ಟ್ ಲಿಸ್ಟ್ ನ್ನ ಕಳುಹಿಸಲಿದ್ದು, ಏಪ್ರಿಲ್ 8 ರಂದು ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.












Click it and Unblock the Notifications