ಬಸವರಾಜ ಬೊಮ್ಮಾಯಿ ಬೆಂಬಲಕ್ಕೆ ನಿಂತ ಬಿಜೆಪಿ ಹೈಕಮಾಂಡ್: ಅರುಣ್ ಸಿಂಗ್ ಹೇಳಿದ್ದೇನು?
ಹುಬ್ಬಳ್ಳಿ, ಡಿ.28: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭಾ ಚುನಾವಣೆ ನಡೆಸಲಾಗುವುದು ಎಂದು ಪುನರುಚ್ಚರಿಸಿದ್ದಾರೆ.
ಡಿ.28, 29ರಂದು ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಇಲ್ಲಿಗೆ ಭೇಟಿ ನೀಡಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಸರಳ, ಪ್ರಾಮಾಣಿಕ ರೀತಿಯಲ್ಲಿ ಮತ್ತು ಸಮರ್ಥ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅವರ ನೇತೃತ್ವದಲ್ಲೇ ಪಕ್ಷವು ಮುಂದಿನ ಅಸೆಂಬ್ಲಿ ಚುನಾವಣೆಯನ್ನು ಎದುರಿಸಲಿದೆ ಎಂದು ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.
ಯಡಿಯೂರಪ್ಪ ಅವರು ಪಕ್ಷದ ಅತ್ಯಂತ ಹಿರಿಯ ನಾಯಕರು. ಅವರು ಪ್ರಧಾನಮಂತ್ರಿಯವರನ್ನು ಸ್ವತಃ ಭೇಟಿ ಮಾಡಿ ಬೇರೆಯವರಿಗೆ ಅವಕಾಶ ನೀಡುವ ದೃಷ್ಟಿಯಿಂದ ರಾಜೀನಾಮೆ ನೀಡಿದ್ದರು ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.
ಕಾಂಗ್ರೆಸ್ ಒಡೆದ ಮನೆ
ಕಾಂಗ್ರೆಸ್ ಒಡೆದ ಮನೆಯಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಜಗಳ ಹೆಚ್ಚಾಗಿದೆ. ಇಬ್ಬರ ಅನುಯಾಯಿಯಗಳು ತಮ್ಮ ಮುಖಂಡನೇ ಮುಖ್ಯಮಂತ್ರಿ ಆಗಬೇಕೆಂದು ಬಯಸುತ್ತಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಈ ಜಗಳ ಹೆಚ್ಚಾಗಲಿದೆ. ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆಡಳಿತ ನಡೆಸಿದಾಗ ತುಷ್ಟೀಕರಣ ನೀತಿಯನ್ನು ಅನುಸರಿಸುತ್ತಿದ್ದುದನ್ನು ಜನತೆ ಮರೆತಿಲ್ಲ. ಜಾತಿ- ಜಾತಿ ನಡುವೆ ಒಡೆದು ಆಳುವ ನೀತಿ, ಭ್ರಷ್ಟಾಚಾರದ ನೀತಿಯೂ ಜನರಿಗೆ ಗೊತ್ತಿದೆ ಎಂದರು.
ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರ ಸರಕಾರಗಳ ಸಾಧನೆ ಮತ್ತು ಸಿದ್ದರಾಮಯ್ಯ ಅವರ ಸರಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಲಾಗುವುದು ಎಂದರಲ್ಲದೆ, ಸರಕಾರ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಗಳು ಪ್ರಾಮಾಣಿಕರಿದ್ದಾರೆ. ಕೆಳಮಟ್ಟದಲ್ಲಿ ಭ್ರಷ್ಟಾಚಾರ ಇದ್ದಲ್ಲಿ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

150ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ
ರಾಜ್ಯದಲ್ಲಿ ಮುಂದೆಯೂ ಬಿಜೆಪಿ ಸರಕಾರ ಬರಲಿದೆ. 150ಕ್ಕೂ ಹೆಚ್ಚು ಶಾಸಕರ ಸ್ಥಾನವನ್ನು ನಾವು ಗೆಲ್ಲಲಿದ್ದೇವೆ ಎಂದ ಅವರು, ಮುರುಗೇಶ್ ನಿರಾಣಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಲಾಗಿದೆ ಎಂದು ಸ್ವತಃ ಅವರೇ ಹೇಳಿದ್ದಾರೆ. ರಾಜ್ಯದಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆಗಳು, ಪಾಲಿಕೆ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಪಕ್ಷ ಪಡೆದಿದೆ. ಬಿಜೆಪಿ ಗ್ರಾಫ್ ಮೇಲೇರುತ್ತಿದೆ. ಕಾಂಗ್ರೆಸ್ ಗ್ರಾಫ್ ಕೆಳಗಿಳಿಯುತ್ತಿದೆ ಎಂದು ವಿಧಾನಪರಿಷತ್ ಚುನಾವಣೆ ಫಲಿತಾಂಶ ಕುರಿತ ಇನ್ನೊಂದು ಪ್ರಶ್ನೆಗೆ ಅವರು ಉತ್ತರಿಸಿದರು.
ರಾಜ್ಯ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಪಕ್ಷ ಮತ್ತು ರಾಜ್ಯ ಸರಕಾರಗಳು ರಾಜ್ಯದ ಜನತೆಯ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿವೆ. ಡಿ.28ರಂದು ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ಡಿ.29 ಪಕ್ಷದ ಕಾರ್ಯಕಾರಿಣಿ ಸಭೆಗಳು ನಡೆಯಲಿವೆ. ಈ ಸಭೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಭಾಗವಹಿಸಬೇಕಿತ್ತು. ಇದೇವೇಳೆ ಅವರು ಪಕ್ಷದ ಮುಖಂಡರನ್ನು ಉದ್ದೇಶಿಸಿ ಭಾಷಣ ಮಾಡುವುದೆಂದು ನಿಗಪಡಿಸಲಾಗಿತ್ತು. ಕೋವಿಡ್ ಆತಂಕದಿಂದ ಹೊಸ ನಿಯಮಾವಳಿ ಜಾರಿಗೊಂಡಿದೆ. ಅದರನ್ವಯ 300ಕ್ಕೂ ಹೆಚ್ಚು ಜನರು ಭಾಗವಹಿಸುವಂತಿಲ್ಲ. ಇದೇ ಕಾರಣದಿಂದ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಪಕ್ಷದ ಕಾರ್ಯಕಾರಿಣಿ ಎಂದಿನಂತೆ ನಡೆಯಲಿದೆ. ಹಲವು ನಿರ್ಣಯಗಳನ್ನು ಅಂಗೀಕರಿಸಲಾಗುವುದು ಎಂದು ತಿಳಿಸಿದರು.