ಬಿಜೆಪಿ ದುರಾಡಳಿತದಿಂದ ಕೂಡಿದೆ, ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 06: ಮುಂಬರುವ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಬಿಜೆಪಿ ಸರ್ಕಾರವನ್ನು ಕಿತ್ತುಹಾಕಿ, ಕಾಂಗ್ರೆಸ್ ಸರ್ಕಾರವನ್ನು ರಚನೆ ಮಾಡುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲಿಕಾರ್ಜುನ್ ಖರ್ಗೆ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭರವಸೆ ನೀಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸರ್ವೋದಯ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಭಾಗವಹಿಸಿ ಮಾತನಾಡಿದರು. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಮುಂಬರು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಜನರು ನಿಮಗೆ ಅಭಿನಂದನೆ ಸಲ್ಲಿಸಲಿದ್ದಾರೆ ಎಂದರು.
ಎಸ್, ನಿಜಲಿಂಗಪ್ಪನವರ ನಂತರ ಮಲ್ಲಿಕಾರ್ಜುನ್ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದು ಏಳು ಕೋಟಿ ಕನ್ನಡಿಗರಿಗೆ ಹೆಮ್ಮೆ ತಂದಿದೆ. ನನ್ನ ಪ್ರಕಾರ ರಾಜ್ಯದ ಜನರು ಬಿಜೆಪಿಯ ಭ್ರಷ್ಟ, ದುರಾಡಳಿತದ ಸರ್ಕಾರವನ್ನು ಕಿತ್ತುಹಾಕಲು ಸಂಕಲ್ಪ ಮಾಡಿದ್ದಾರೆ. ನಮ್ಮಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇರಬಹುದು, ಆದರೆ ನಮಗಿರುವ ಸವಾಲು ಕರ್ನಾಟಕದಲ್ಲಿ ಕೋಮುವಾದಿ, ಬಡವರ ವಿರೋಧಿ, ರೈತರ ಮತ್ತು ಅಲ್ಪಸಂಖ್ಯಾತರ ವಿರೋಧಿ ಬಿಜೆಪಿ ಸರ್ಕಾರ ಕಿತ್ತುಹಾಕುವುದಾಗಿದೆ ಎಂದು ಅವರು ತಿಳಿಸಿದರು.

ಬಿಜೆಪಿ ಸರ್ಕಾರದ ದುರಾಡಳಿತ
ಈ ಸರ್ಕಾರವನ್ನು 40 ಪರ್ಸೆಂಟ್ ಸರ್ಕಾರ ಎಂದು ಗುತ್ತಿಗೆದಾರರ ಸಂಘದವರು ಪ್ರಧಾನಿಗಳಿಗೆ ಪತ್ರ ಬರೆದು ದೂರಿದ್ದಾರೆ. ಬಾಕಿ ಬಿಲ್ ಸುಮಾರು 27,000 ಕೋಟಿ ರೂ. ಬಂದಿಲ್ಲ. ಅದಕ್ಕಾಗಿ ಪರ್ಸೆಂಟೇಜ್ ಕೇಳುತ್ತಿದ್ದಾರೆ ಎಂದು ಉಲ್ಲೇಖಿಸಿದರೂ ಪ್ರಧಾನಿಯವರು ಯಾವ ಕ್ರಮ ಕೈಗೊಂಡಿಲ್ಲ.
ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ತನ್ನ ಸಾವಿಗೆ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ನಂದೀಶ್ ಎಂಬ ಇನ್ಸ್ ಪೆಕ್ಟರ್ ಒತ್ತಡದಿಂದ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಗುತ್ತಿಗೆದಾರ ಒಬ್ಬರು ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣ ಕೋರಿದ್ದಾರೆ. ಇಂಥ ಸರ್ಕಾರ ರಾಜ್ಯದ ಇತಿಹಾಸದಲ್ಲಿ ಯಾವತ್ತೂ ಬಂದಿರಲಿಲ್ಲ. ಇನ್ಸ್ ಪೆಕ್ಟರ್ ನಂದೀಶ್ ಎಂಬುವವರು 70-80 ಲಕ್ಷ ಲಂಚ ಕೊಟ್ಟು ಕೆ.ಆರ್ ಪುರಂಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದಾರೆ. ಈ ಸಾವಿಗೆ ಮುಖ್ಯಮಂತ್ರಿ ಮತ್ತು ಗೃಹಸಚಿವರೇ ಕಾರಣ ಎಂದು ದೂರಿದರು.

ರಾಜ್ಯದಲ್ಲಿ ಸರ್ಕಾರದ ಭ್ರಷ್ಟಚಾರ ಮುಗಿಲು ಮುಟ್ಟಿದೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಎಂಟಿಬಿ ನಾಗರಾಜ್ ಅವರು ಹೇಳಿಕೆ ನೀಡಿದ ತಕ್ಷಣ ರಾಜೀನಾಮೆ ನೀಡಿ ಮನೆಗೆ ಹೋಗಬೇಕಿತ್ತು. ಈ ಸರ್ಕಾರಕ್ಕೆ ಯಾವ ಮಾನ ಮರ್ಯಾದೆ ಇಲ್ಲ. ಇಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ, ಅಭಿವೃದ್ಧಿ ಶೂನ್ಯವಾಗಿದೆ ಎಂದರು.
ರಾಜ್ಯದಲ್ಲಿ ಬಡವರು, ದಲಿತರು, ಅಲ್ಪಸಂಖ್ಯಾತರು ನೆಮ್ಮದಿಯಾಗಿ ಬದುಕಲು ಸಾಧ್ಯವಾಗದ ಪರಿಸ್ಥಿತಿ ಇದೆ. ದ್ವೇಷ ರಾಜಕಾರಣ, ನಿರುದ್ಯೋಗ, ರೈತರ ಸಮಸ್ಯೆಗಳು ಇವುಗಳಿಗೆ ಪರಿಹಾರ ನೀಡುವ ಕೆಲಸ ಇಂದು ನಡೆಯುತ್ತಿಲ್ಲ. ಇದೇ ಕಾರಣಕ್ಕೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆ. ಇದರ ಮೂಲಕ ಜನರನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬರಲಿದೆ.

ಖರ್ಗೆ ಸ್ವಾಭಿಮಾನಿ ರಾಜಕಾರಣಿ
ಖರ್ಗೆಯವರು ರಾಜ್ಯದಲ್ಲಿ ಸುದೀರ್ಘ ಕಾಲ ರಾಜಕಾರಣ ಮಾಡಿದವರು. ಆಡಳಿತ ನಡೆಸಿದ ಅನುಭವ ಇರುವವರು. ಹಲವು ಇಲಾಖೆಗಳಲ್ಲಿ ಅಭಿವೃದ್ಧಿಪರ ಚಿಂತನೆಗಳಿಂದ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ. ಖರ್ಗೆಯವರಿಗೆ ದ್ವೇಷದ, ಶ್ರೀಮಂತರ ಪರವಾದ ರಾಜಕಾರಣ ಮಾಡಿ ಗೊತ್ತಿಲ್ಲ. ಬಡವರ ಪರವಾದ, ಗೌತಮ ಬುದ್ಧ, ಶರಣ ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಅವರ ಸಿದ್ಧಾಂತಗಳಿಗೆ ಬದ್ಧರಾಗಿ ರಾಜಿಯಿಲ್ಲದೆ ರಾಜಕಾರಣ ಮಾಡಿದ್ದಾರೆ. ಅವರೊಬ್ಬ ಸ್ವಾಭಿಮಾನಿ ರಾಜಕಾರಣಿ. ನಾನು ಕಂಡಂತೆ ಕರ್ನಾಟಕದಲ್ಲಿ ಸಮಚಿತ್ತವಿರುವ, ಮೌಢ್ಯವಿರೋಧಿ, ಪ್ರಗತಿಪರ ರಾಜಕಾರಣಿ ಇದ್ದರೆ ಅದು ಮಲ್ಲಿಕಾರ್ಜುನ ಖರ್ಗೆಯವರು. ಲೋಕಸಭೆ, ರಾಜ್ಯಸಭೆಯಲ್ಲಿ ಸೇವೆ ಮಾಡಿ ಈಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರುವುದು ಹೆಮ್ಮೆಯ ವಿಚಾರ. 2023ರಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ಬಣ್ಣಿಸಿದರು.

ಕಾಂಗ್ರೆಸ್ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ
ಎಐಸಿಸಿ ಚುನಾವಣೆಯಲ್ಲಿ ಖರ್ಗೆಯವರು ಬಹಳ ದೊಡ್ಡ ಬಹುಮತದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯವರು ಕಾಂಗ್ರೆಸ್ನಲ್ಲಿ ವಂಶಪಾರಂಪರ್ಯ ಆಡಳಿತ ಇದೆ, ಬೇರೆಯವರಿಗೆ ಅವಕಾಶ ಇಲ್ಲ ಎಂದು ಮಾತನಾಡುತ್ತಿದ್ದರು ಆದರೆ ಇಂದು ಖರ್ಗೆಯವರು ಅಧ್ಯಕ್ಷರಾಗಿ ಅಂಥಾ ಟೀಕೆಗಳಿಗೆ ಸರಿಯಾದ ಉತ್ತರ ನೀಡಿದ್ದಾರೆ. ಕಾಂಗ್ರೆಸ್ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ ಎಂಬುದು ಇದರಿಂದ ಸಾಬೀತಾಗಿದೆ. ಇದಕ್ಕಾಗಿ ನಾಡಿನ ಜನತೆ, ಕಾಂಗ್ರೆಸ್ ಪಕ್ಷದ ಪರವಾಗಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.












Click it and Unblock the Notifications