ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ರಾಜಕೀಯ: ಸಿದ್ದರಾಮಯ್ಯ ಹೇಳಿದ್ದೇನು?
ಹುಬ್ಬಳ್ಳಿ, ಡಿಸೆಂಬರ್ 16: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲಾದ ದೌರ್ಜನ್ಯ ಪ್ರಕರಣ ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಶನಿವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ನ್ಯಾಷನಲ್ ಕ್ರೈಂ ಬ್ಯೂರೋ ರ ಪ್ರಕಾರ ಅವರ ಅವಧಿಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆದಿವೆ. ಉತ್ತರಪ್ರದೇಶದ ಬಿಜೆಪಿಯ ಶಾಸಕರೊಬ್ಬರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಕ್ಕಾಗಿ 25 ವರ್ಷ ಜೈಲುಶಿಕ್ಷೆ ವಿಧಿಸಿದೆ. ಇದರ ಬಗ್ಗೆ ನಡ್ಡಾ ಅವರ ಪ್ರತಿಕ್ರಿಯೆ ಏನು ಎಂದು ಪ್ರಶ್ನಿಸಿದರು.

ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಲಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯಗಳು ಎಲ್ಲಿಯೂ ನಡೆಯಬಾರದು. ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲಾದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸತ್ಯಶೋಧನಾ ತಂಡ ಭೇಟಿ ನೀಡಿರುವ ಬಗ್ಗೆಪ್ರತಿಕ್ರಿಯೆ ನೀಡಿ, ಮಹಿಳೆಯ ಮೇಲೆ ದೌರ್ಜನ್ಯವಾಗಿದ್ದು, ಸರ್ಕಾರ ಕಾನೂನು ರೀತ್ಯ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಗೃಹಸಚಿವರು ಆಸ್ಪತ್ರೆಯಲ್ಲಿ ಸಂತ್ರಸ್ಥೆಯನ್ನು ಭೇಟಿ ಮಾಡಿ ಸಾಂತ್ವನ ನೀಡಿ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಲಾಗಿದೆ ಎಂದರು.
ನವದೆಹಲಿಯ ಸಂಸತ್ ಭವನದಲ್ಲಿ ಭದ್ರತಾ ಲೋಪವಾಗಿರುವ ಬಗ್ಗೆ ಸಂಸತ್ತಿನ ವಿಪಕ್ಷಗಳು ರಾಜಕೀಯ ಮಾಡುತ್ತಿರುವುದಾಗಿ ಬಿಜೆಪಿಯವರ ಹೇಳಿಕೆಗೆ ಉತ್ತರಿಸುತ್ತಾ, ಸಂಸತ್ತಿನಲ್ಲಿ ಭದ್ರತಾ ಲೋಪವಾಗಿರುವುದು ಸತ್ಯ. ನಿಜವನ್ನು ಹೇಳಿದರೆ ರಾಜಕೀಯವಾಗುವುದಿಲ್ಲ ಎಂದರು.
ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಕಾಂಗ್ರೆಸ್ ತಂತ್ರ ಮಾಡಿರುವುದಾಗಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಜನರು ಹೇಳಿದಂತೆ ಅಭ್ಯರ್ಥಿಗಳು ಚುನಾವಣೆಗೆ ನಿಲ್ಲುವ ಅಥವಾ ನಿಲ್ಲದಿರುವ ತೀರ್ಮಾನವನ್ನು ಕೈಗೊಳ್ಳುತ್ತಾರೆ. ಲೆಹರ್ ಸಿಂಗ್ ಅವರು ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಈ ರೀತಿ ಯೋಚಿಸುವ ಬಿಜೆಪಿಯವರಿಗೆ ಬುದ್ಧಿ ಕಡಿಮೆ ಇರಬಹುದು ಎಂದರು.
ಜಾತಿ ಗಣತಿ ವರದಿ ಹೊರಬರಲು ಪ್ರಬಲ ಜಾತಿಯವರು ಅಡ್ಡಿಪಡಿಸುತ್ತಿರುವ ರೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿ ಇನ್ನೂ ಬಂದಿಲ್ಲ. ಯಾರಿಗೂ ಆ ವರದಿಯಲ್ಲಿರುವ ಅಂಶಗಳೇನು ಎಂಬ ಮಾಹಿತಿ ಇಲ್ಲ, ಕೇವಲ ಊಹೆಗಳ ಮೇಲೆ ಮಾತನಾಡುತ್ತಿದ್ದಾರೆ ಎಂದರು.












Click it and Unblock the Notifications