ಪಕ್ಷದ ವಿರುದ್ಧ ಹೇಳಿಕೆ ಕೊಟ್ಟಿದ್ದ 11 ಬಿಜೆಪಿ ನಾಯಕರಿಗೆ ನೋಟಿಸ್: ಬಹಿರಂಗ ಹೇಳಿಕೆ ನೀಡದಂತೆ ಸೂಚನೆ
ಬೆಂಗಳೂರು, ಜೂನ್ 30: ಕರ್ನಾಟಕ ಬಿಜೆಪಿ ನಾಯಕರ ಅಸಮಾಧಾನ ಹೆಚ್ಚಾದ ಬೆನ್ನಲ್ಲೇ ಎಚ್ಚೆತ್ತ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಪಕ್ಷದ ವಿರುದ್ಧವೇ ಮಾತನಾಡಿರುವ 11 ನಾಯಕರಿಗೆ ಈಗಾಗಲೇ ನೊಟೀಸ್ ಜಾರಿ ಮಾಡಿದ್ದು, ಪಕ್ಷ ವಿರೋಧಿ ಹೇಳಿಕೆ ಕೊಡದಂತೆ ಸೂಚನೆ ನೀಡಲಾಗಿದೆ.
ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, "ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್ ನೀಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಕೂಡ ಕೆಲವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಅಂತವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಹೇಳಿದರು.

ಪಕ್ಷದ ನಾಯಕರ ಬಗ್ಗೆ, ಪಕ್ಷದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವವನ್ನು ಕರೆದು ಮಾತನಾಡುತ್ತೇವೆ. ಮುಂದೆ ಈ ರೀತಿ ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದೇವೆ. ಕಾಂಗ್ರೆಸ್ ಗ್ಯಾರಂಟಿಗಳ ಅನುಷ್ಠಾನ ಮಾಡುವಂತೆ ಆಗ್ರಹಿಸಿ ಹೋರಾಟ ಮಾಡಲಾಗುವುದು ಎಂದು ಕಟೀಲು ಹೇಳಿದರು.
ರೇಣುಕಾಚಾರ್ಯ, ಬಸನಗೌಡ ಪಾಟೀಲ್ಗೆ ನೋಟಿಸ್
ಬಹಿರಂಗವಾಗಿಯೇ ಪಕ್ಷದ ನಾಯಕರ ವಿರುದ್ಧ ಹೇಳಿಕೆ ಕೊಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಮತ್ತು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸೇರಿದಂತೆ ಇತರೆ ನಾಯಕರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದೆ. ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್ ನೀಡಿದ್ದು, ಒಂದು ವಾರದೊಳಗೆ ಲಿಖಿತವಾಗಿ ಉತ್ತರ ನೀಡಬೇಕೆಂದು ಕೇಳಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಹಿರಂಗವಾಗಿಯೇ ಪಕ್ಷದ ನಾಯಕರ ವಿರುದ್ಧ ಮಾತನಾಡುತ್ತಿದ್ದು ಪಕ್ಷಕ್ಕೆ ಇರಿಸು ಮುರಿಸು ಉಂಟಾಗುವಂತೆ ಮಾತನಾಡಿದ್ದಾರೆ. ಕೆಎಸ್ ಈಶ್ವರಪ್ಪ ಕೂಡ ಆಪರೇಷನ್ ಕಮಲದಿಂದ ಪಕ್ಷದಲ್ಲಿ ಶಿಸ್ತು ಹಾಳಾಗಿದೆ ಎಂದು ಹೇಳಿದ್ದರು. ಪ್ರತಾಪ್ ಸಿಂಹ, ಸಿ.ಟಿ. ರವಿ ಹೊಂದಾಣಿಕೆ ರಾಜಕೀಯ ಬಿಜೆಪಿ ಪಾಳಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಇದಕ್ಕೆಲ್ಲ ಉಪ್ಪು ಸುರಿದಂತೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ಬಿಎಎಲ್ ಸಂತೋಷ್, ಅಣ್ಣಾಮಲೈ ವಿರುದ್ಧವೇ ಕಿಡಿ ಕಾರಿದ್ದರು. ಅಲ್ಲದೆ ಕೇಂದ್ರದ ನಾಯಕರ ವಿರುದ್ಧ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸದವರು ನಮಗೆ ಚುನಾವಣೆ ಬಗ್ಗೆ ಪಾಠ ಮಾಡಿದ್ದರು ಎಂದು ಹೇಳಿಕೆ ನೀಡಿದ್ದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಭೆ
ಬಿಜೆಪಿಯಲ್ಲಿ ನಾಯಕರ ಅಸಮಾಧಾನ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇಂದು ಸಭೆ ನಡೆಯಿತು. ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕರಾದ ಗೋವಿಂದ ಕಾರಜೋಳ, ಎ.ಎಸ್. ಪಾಟೀಲ್ ನಡಹಳ್ಳಿ, ವೀರಣ್ಣ ಚರಂತಿಮಠ ಮುಂತಾದವರು ಇದ್ದು, ಪಕ್ಷದ ಮುಂದಿನ ನಡೆ ಬಗ್ಗೆ ಚರ್ಚಿಸಿದರು.
ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆ ಯಾವಾಗ ಎನ್ನುವ ಪ್ರಶ್ನೆ ಇದ್ದು, ಮುಂದಿನ ವಾರದಲ್ಲಿ ವಿರೋಧ ಪಕ್ಷದ ನಾಯಕನ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಜುಲೈ 7ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ಕಲಾಪದ ವೇಳೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.












Click it and Unblock the Notifications