ಬಿಜೆಪಿ-ಜೆಡಿಎಸ್ ಮೈತ್ರಿ: ಪ್ರಧಾನಿ ಮೋದಿ ಭೇಟಿಯಾಗಲಿರುವ ಎಚ್ಡಿ ದೇವೇಗೌಡ- ಎಷ್ಟು ಸ್ಥಾನಗಳಿಗೆ ಬೇಡಿಕೆ? ಇನ್ಸೈಡ್ ರಿಪೋರ್ಟ್
ಬೆಂಗಳೂರು, ಸೆಪ್ಟೆಂಬರ್ 20: ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಮೈತ್ರಿ ಮಾಡಿಕೊಳ್ಳಲು ಬಿಜೆಪಿ-ಜೆಡಿಎಸ್ ಮುಂದಾಗಿವೆ. ಈ ಸಂಬಂಧ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹಾಗೂ ಅವರ ಸಹೋದರ ಎಚ್ಡಿ ರೇವಣ್ಣ ಹಾಜರಿರಲಿದ್ದಾರೆ ಎಂದು ತಿಳಿದುಬಂದಿದೆ.
ಎಚ್ಡಿ ಕುಮಾರಸ್ವಾಮಿ ಮತ್ತು ಎಚ್ಡಿ ರೇವಣ್ಣ ಅವರು ಗುರುವಾರ ದೆಹಲಿಗೆ ತೆರಳಲಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡಿರುವ ದೇವೇಗೌಡರು ದೆಹಲಿಯಲ್ಲಿ ಉಳಿದುಕೊಂಡಿದ್ದಾರೆ.
ಪ್ರಧಾನಿ ಮೋದಿ ಭೇಟಿ ವೇಳೆ ಬಿಜೆಪಿಯೊಂದಿಗೆ ಮೈತ್ರಿ ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಕರ್ನಾಟಕದ 28 ಲೋಕಸಭೆ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಿಗೆ ಜೆಡಿಎಸ್ ಬೇಡಿಕೆ ಇಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ನಾಯಕರು ಸುಳಿವು ನೀಡಿದ್ದಾರೆ. ಆದರೆ, ಬಹಿರಂಗವಾಗಿ ಯಾರೂ ಅದನ್ನು ಒಪ್ಪಿಕೊಂಡಿಲ್ಲ. ಸೀಟು ಹಂಚಿಕೆ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಾತನಾಡಲು ನಿರಾಕರಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮೈತ್ರಿ ವಿಚಾರವನ್ನು ಪ್ರಧಾನಿ ಮೋದಿ ಹಾಗೂ ಗೃಹ ಅಮಿತ್ ಶಾ ತೀರ್ಮಾನಿಸಲಿದ್ದಾರೆ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ, ಅಮಿತ್ ಶಾ ಅವರು ಜೆಡಿಎಸ್ಗೆ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ನಿರ್ಧರಿಸಿದ್ದಾರೆ. ಆದರೆ, ಜೆಡಿಎಸ್ ನಾಯಕರು ಹೆಚ್ಚು ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ಕುಮಾರಸ್ವಾಮಿ ಗಣೇಶ ಚತುರ್ಥಿಯ ನಂತರ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಯಲಿದೆ ಎಂದು ಹೇಳಿದ್ದಾರೆ.

5 ಸ್ಥಾನಕ್ಕೆ ಜೆಡಿಎಸ್ ಬೇಡಿಕೆ?
ಜೆಡಿಎಸ್ಗೆ 28 ಸ್ಥಾನಗಳ ಪೈಕಿ 4 ಸ್ಥಾನಗಳನ್ನು ಬಿಟ್ಟುಕೊಡಲು ಶಾ ಒಪ್ಪಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಖಚಿತಪಡಿಸಿದ್ದಾರೆ. ಆದರೆ, ಕುಮಾರಸ್ವಾಮಿ ಅವರ ಆಪ್ತ ಮೂಲಗಳ ಪ್ರಕಾರ, ಜೆಡಿಎಸ್ ಹೆಚ್ಚು ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ.
ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಕ್ಷೇತ್ರಗಳಿಗೆ ಜೆಡಿಎಸ್ ಬೇಡಿಕೆ ಇಡಲಿದೆ ಎನ್ನಲಾಗಿದೆ. ಈ ಐದು ಸ್ಥಾನಗಳಲ್ಲಿ ಕೋಲಾರ ಮತ್ತು ತುಮಕೂರಿನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿ ಸುಮಲತಾ ಜಯಗಳಿಸಿದ್ದಾರೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ಸೀಟು ಹಂಚಿಕೆ ಅಂತಿಮಗೊಂಡ ನಂತರ ಜೆಡಿಎಸ್ ಮತ್ತು ಬಿಜೆಪಿ ನಾಯಕರು ದೆಹಲಿಯಲ್ಲಿ ಮೈತ್ರಿ ಬಗ್ಗೆ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ.
ರಾಜ್ಯ ನಾಯಕರನ್ನು ಸಂಪರ್ಕಿಸದ ಬಿಜೆಪಿ ಹೈಕಮಾಂಡ್
ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಬಿಜೆಪಿ ಹೈಕಮಾಂಡ್ ಇದುವರೆಗೆ ರಾಜ್ಯ ನಾಯಕರನ್ನು ಸಂಪರ್ಕಿಸಿಲ್ಲ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಪಕ್ಷದ ಕೆಲ ಮುಖಂಡರು ಆಕ್ಷೇಪ ವ್ಯಕ್ತಪಡಿಸಿರುವ ಸಂದರ್ಭದಲ್ಲೇ ಈ ಹೇಳಿಕೆ ಹೊರಬಿದ್ದಿದೆ.
224 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 66 ಸ್ಥಾನಗಳನ್ನು ಗೆದ್ದಿದೆ. ಜೆಡಿಎಸ್ 18 ಕ್ಷೇತ್ರಗಳಲ್ಲಿ ಜಯಗಳಿಸಿದೆ.












Click it and Unblock the Notifications