BJP, JDS Alliance; ಜೆಡಿಎಸ್ ತೊರೆಯಲು ಮುಂದಾದ ಮುಸ್ಲಿಂ ನಾಯಕರು!
ಬೆಂಗಳೂರು, ಸೆಪ್ಟೆಂಬರ್ 24; ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ರಾಜ್ಯ ರಾಜಕೀಯದಲ್ಲಿ ಹೊಸ ಲೆಕ್ಕಾಚಾರಕ್ಕೆ ಕಾರಣವಾಗಿದೆ.
ಜೆಡಿಎಸ್ ಎನ್ಡಿಎ ಮೈತ್ರಿಕೂಟ ಸೇರುವುದಕ್ಕೆ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದೆ. ಪಕ್ಷದ ಹಲವು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆ. ಮುಸ್ಲಿಂ ಸಮುದಾಯದ ನಾಯಕ ಸಿ. ಎಂ. ಇಬ್ರಾಹಿಂ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರೂ ಸಹ ಹಲವರು ಪಕ್ಷ ತೊರೆಯಲು ಮುಂದಾಗಿದ್ದಾರೆ.

ಮಾಜಿ ಸಚಿವ ಎನ್. ಬಿ. ನಬಿ ಸೇರಿದಂತೆ ಹಲವು ನಾಯಕರು ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಶುಕ್ರವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದರು.
ಈ ಭೇಟಿಯ ಬಳಿಕ ಜೆಡಿಎಸ್ ಎನ್ಡಿಎ ಮೈತ್ರಿಕೂಟ ಸೇರುವ ಕುರಿತು ಜೆ. ಪಿ. ನಡ್ಡಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು. ಈ ಘೋಷಣೆ ಬಳಿಕ ಮುಸ್ಲಿಂ ಸಮುದಾಯದ ನಾಯಕರು ಪ್ರತ್ಯೇಕವಾದ ಸಭೆ ನಡೆಸಿ ಮುಂದಿನ ರಾಜಕೀಯ ನಿಲುವಿನ ಕುರಿತು ಚರ್ಚೆ ನಡೆಸಿದ್ದಾರೆ.
ಯಾವ-ಯಾವ ನಾಯಕರು; ಮಾಜಿ ಸಚಿವ ಎನ್. ಎಂ. ನಬಿ, ಜೆಡಿಎಸ್ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿದ್ದ ಮೊಹಿದ್ ಅಲ್ತಾಫ್, ಯುವ ಘಟಕದ ಅಧ್ಯಕ್ಷ ಎನ್. ಎಂ. ನೂರ್, ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ನಾಸಿರ್ ಹುಸೇನ್ ಉಸ್ತಾದ್ ಪಕ್ಷ ತೊರೆಯುವ ತೀರ್ಮಾನ ಮಾಡಿದ್ದಾರೆ.
ಈ ಕುರಿತು ಪ್ರಜಾವಾಣಿ ಜೊತೆ ಮಾತನಾಡಿರುವ ಸೈಯದ್ ಶಫಿವುಲ್ಲಾ, "ಜಾತ್ಯತೀತ ನಿಲುವು ಸಡಿಲಗೊಂಡಿರುವ ಕಾರಣ ಪಕ್ಷ ತೊರೆಯಲು ತೀರ್ಮಾನ ಮಾಡಲಾಗಿದೆ. ಈ ಮೈತ್ರಿ ಬೆಳವಣಿಗೆಯಿಂದ ಮುಸ್ಲಿಂ ನಾಯಕರು ಅಸಮಾಧಾನಗೊಂಡಿದ್ದಾರೆ. ಇನ್ನಷ್ಟು ಪದಾಧಿಕಾರಿಗಳು ಮುಂದಿನ ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ" ಎಂದರು.
ಜೆಡಿಎಸ್ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಟ್ಟು ಬಂದ ಸಿ. ಎಂ. ಇಬ್ರಾಹಿಂರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿತ್ತು. ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ಜೆಡಿಎಸ್ ಪಕ್ಷದ ಬೆಂಬಲಕ್ಕೆ ನಿಲ್ಲಲಿದೆ ಎಂದು ಅಂದಾಜಿಸಿತ್ತು. ಆದರೆ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಹೆಚ್ಚಾಗಿ ಬೆಂಬಲಿಸಿತ್ತು.
ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪರಿಪೂರ್ಣ ಬಹುಮತ ಪಡೆದು ಅಧಿಕಾರ ಹಿಡಿಯಿತು. ಜೆಡಿಎಸ್ ಪಕ್ಷ 19 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಸೋಲು ಕಂಡರು. ಈಗ ಲೋಕಸಭೆ ಚುನಾವಣೆ ಮುಂದಿಟ್ಟುಕೊಂಡು ಜೆಡಿಎಸ್ ಬಿಜೆಪಿ ಜೊತೆ ಮೈತ್ರಿಯ ಘೋಷಣೆ ಮಾಡಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಚುನಾವಣೆ ಎದುರಿಸಿತ್ತು. ಪರಿಣಾಮ ಕಾಂಗ್ರೆಸ್ (ಬೆಂಗಳೂರು ಗ್ರಾಮಾಂತರ), ಜೆಡಿಎಸ್ (ಹಾಸನ) ಒದೊಂದು ಸ್ಥಾನ ಗೆದ್ದಿದ್ದವು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ತುಮಕೂರಿನಲ್ಲಿ ಸೋಲು ಕಂಡಿದ್ದರು.
ಈಗ 2024ರ ಲೋಕಸಭೆ ಚುನಾವಣೆ ಮುಂದಿಟ್ಟುಕೊಂಡು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ದಸರಾ ಹಬ್ಬದ ಬಳಿಕ ಸೀಟು ಹಂಚಿಕೆ ತೀರ್ಮಾನವಾಗುವ ನಿರೀಕ್ಷೆ ಇದೆ. ಮಾಹಿತಿಯ ಪ್ರಕಾರ ಜೆಡಿಎಸ್ 28 ಲೋಕಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದೆ.
ಜೆ. ಪಿ. ನಡ್ಡಾ, ಅಮಿತ್ ಶಾರನ್ನು ಎಚ್. ಡಿ. ಕುಮಾರಸ್ವಾಮಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಎಚ್. ಡಿ. ದೇವೇಗೌಡರು ಸಹ ದೆಹಲಿಯಲ್ಲಿಯೇ ಇದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಒಂದಾಗಿ ಹೋರಾಟ ಮಾಡುತ್ತಿವೆ. ಈಗ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿವೆ.












Click it and Unblock the Notifications