ಕಮಲ-ದಳ ಮೈತ್ರಿ: ಜೆಡಿಎಸ್ ಗೆ ಸಿಗುವ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ: ಯಾರಿಗೆ ಸಿಗಲಿದೆ ಟಿಕೆಟ್ ?
ಬೆಂಗಳೂರು, ಅಕ್ಟೋಬರ್ 16: 2024 ರ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. 28 ಕ್ಷೇತ್ರಗಳ ಪೈಕಿ 24+4 ಕ್ಷೇತ್ರ ಹಂಚಿಕೆ ಕುರಿತು ಚರ್ಚೆಯಾಗಿದ್ದು, ಜೆಡಿಎಸ್ ಗೆ ಸಿಗುವ ಆ ನಾಲ್ಕು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿ ಕೊರತೆ ಎದುರಾಗಿದೆ.
ಹೌದು, ಬಿಜೆಪಿ ಜೊತೆಗಿನ ಮೈತ್ರಿಯಿಂದಾಗಿ ಜೆಡಿಎಸ್ ಗೆ 28 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳು ದಳಪತಿಗಳ ತೆಕ್ಕೆಗೆ ಬರಲಿದೆ. ಈಗಾಗಲೇ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಜೆಡಿಎಸ್ ಪ್ರಬಲ್ಯ ಕುಸಿಯುತ್ತಿದ್ದು, ಈ ಹಿಂದೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಹಲವು ನಾಯಕರು ಜೆಡಿಎಸ್ ಪಕ್ಷವನ್ನ ಬಿಟ್ಟು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ ರಷವನ್ನ ಸೇರ್ಪಡೆಯಾಗಿದ್ದಾರೆ. ಒಂದು ಕಡೆ ಮತ್ತೆ ಪಕ್ಷವನ್ನ ಸುಭದ್ರಗೊಳಿಸಲು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರು ಹಲವು ತಂತ್ರಗಾರಿಕೆಯ ಜೊತೆಗೆ ಮೈತ್ರಿಯಾಗಿದ್ದಾರೆ.

ಇತ್ತ ಹಳೇ ಮೈಸೂರು ಭಾಗದಲ್ಲಿ ತನ್ನ ಅಸ್ತಿತ್ವವನ್ನ ಮರಳಿ ಪಡೆಯಲು ದಳಪತಿಗಳು ಹಲವು ತಂತ್ರಗಾರಿಕೆಯನ್ನ ನಡೆಸಿದ್ದು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಿಂದ ಸಿಗುವ ನಾಲ್ಕು ಕ್ಷೇತ್ರಗಳಲ್ಲೂ ಸಮರ್ಥ ಅಭ್ಯರ್ಥಿಯ ಕೊರತೆ ಎದುರಾಗಿದೆ. ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಕ್ಷೇತ್ರಗಳ ಕುರಿತು ಮಾತುಕತೆ ನಡೆಸಿದ್ದು, ದಸರಾ ಹಬ್ಬದ ಬಳಿಕ ಮತ್ತೊಮ್ಮೆ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚಿಸಿ ಕ್ಷೇತ್ರ ಹಂಚಿಕೆಯನ್ನ ಅಂತಿಮಗೊಳಿಸಲಿದ್ದಾರೆ.
ದಳಪತಿಗಳು 28 ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳನ್ನ ಕೇಳಿದ್ದು, 5 ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳನ್ನ ನೀಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಹೊರತು ಪಡಿಸಿ, ಕೋಲಾರ, ಹಾಸನ, ಮಂಡ್ಯ ಹಾಗೂ ತುಮಕೂರು ಕ್ಷೇತ್ರಗಳನ್ನ ಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಿದೆ ಎನ್ನಲಾಗಿದೆ. ಈ ನಾಲ್ಕು ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆ ದಳಪತಿಗಳಿಗೆ ಎದುರಾಗಿದೆ. ಆದರೆ, ಈ ನಾಲ್ಕು ಕ್ಷೇತ್ರದಲ್ಲಿ ಹಾಸನ ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ಹೊರತು ಪಡಿಸಿದ್ರೆ ಉಳಿದ ಮೂರು ಕ್ಷೇತ್ರದಲ್ಲೂ ಸಮರ್ಥ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಇನ್ನೂ ಉಳಿದ ಎರಡ್ಮೂರು ಕ್ಷೇತ್ರಗಳಿಗೆ ಪ್ರಬಲ ಅಭ್ಯರ್ಥಿಗಳಿಗಾಗಿ ದಳಪತಿಗಳು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ಸೂಕ್ತ ಅಭ್ಯರ್ಥಿಯ ಕೊರತೆ ಎದುರಾಗಿದೆ. ಈಗಾಗಲೇ ಸರಣಿ ಸೋಲು ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ಅವರು ಇನ್ನೂ ಐದು ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ರೆ, ಆದರೆ, ಮಗನ ರಾಜಕೀಯ ಭವಿಷ್ಯವನ್ನ ರೂಪಿಸುವ ನಿಟ್ಟಿನಲ್ಲಿ ದಳಪತಿಗಳು ಪ್ಲಾನ್ ನಡೆಸಿದ್ದು, ಮಂಡ್ಯ ಕ್ಷೇತ್ರದಲ್ಲಿ ಈ ಬಾರೀ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತ ತುಮಕೂರು ಲೋಕಸಭಾ ಕ್ಷೇತ್ರ ಜೆಡಿಎಸ್ ನಾಯಕರ ಕೈ ಸೇರಲಿದ್ದು, ತುಮಕೂರು ಕ್ಷೇತ್ರದಲ್ಲೂ ಜೆಡಿಎಸ್ ಅಭ್ಯರ್ಥಿಯಾಗಲು ಸಮರ್ಥ ಅಭ್ಯರ್ಥಿಯ ಕೊರತೆ ಎದುರಾಗಿದೆ. ಹೀಗಾಗಿ ಈ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ಏಕೆಂದರೆ 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೇವೇಗೌಡ್ರು ಈ ಕ್ಷೇತ್ರದಿಂದಲೇ ಸ್ಪರ್ಧಿಸಿ ಸೋಲು ಕಂಡಿದ್ರು, ಇನ್ನೂ ಈ ಬಾರೀ ಸ್ಪರ್ಧೆಗೆ ಮುಂದಾಗಲಿದ್ದಾರೆ ಎನ್ನಲಾಗಿದೆ.
ಇನ್ನೂ ಜೆಡಿಎಸ್ ಕೇಳಿರುವ ನಾಲ್ಕನೇ ಕ್ಷೇತ್ರ ಕೋಲಾರ. ಈ ಕ್ಷೇತ್ರದಲ್ಲೂ ಜೆಡಿಎಸ್ ಗೆ ಸಮರ್ಥ ಅಭ್ಯರ್ಥಿಯ ಕೊರತೆ ಎದುರಾಗಿದೆ. ಈಗಾಗಲೇ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದ್ದು, ಕೋಲಾರದಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿದ್ರೆ, ಅಖಂಡ ಶ್ರೀನಿವಾಸ್ ಮೂರ್ತಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ.
ಒಟ್ನಲಿ, ಜೆಡಿಎಸ್ ಪಕ್ಷದ ವರ್ಚಸ್ಸು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಲೋಕಸಭಾ ಚುನಾವಣೆಗೆ ಮೈತ್ರಿಯಿಂದ ಸಿಗುವ ನಾಲ್ಕು ಕ್ಷೇತ್ರದಲ್ಲೂ ಪ್ರಬಲ ಅಭ್ಯರ್ಥಿ ಕೊರತೆಯಿಂದಾಗಿ ಮತ್ತೆ ಕುಟುಂಬದವರ ಸ್ಪರ್ಧೆಯೇ ಅನಿವಾರ್ಯವಾಗುತ್ತದೆಯೇ ಎಂಬುದನ್ನ ಕಾದುನೋಡ್ಬೇಕಾಗಿದೆ.












Click it and Unblock the Notifications