ಆರಂಭದಲ್ಲೇ ಬಿಜೆಪಿ- ಜೆಡಿಎಸ್ ದೋಸ್ತಿಯಲ್ಲಿ ಬಿರುಕು: ವಿಜಯೇಂದ್ರ ಏನಂದ್ರು?
ಬೆಂಗಳೂರು, ಮಾರ್ಚ್ 19: ಆಡಳಿತರೂಢ ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಈ ದೋಸ್ತಿಯಲ್ಲಿ ಅಪಸ್ವರ ಕೇಳಿ ಬರುತ್ತಿದೆ. ಆರಂಭದಲ್ಲಿಯೇ ಬಿಜೆಪಿ ನಮ್ಮನ್ನು, ನಮ್ಮ ಪಕ್ಷವನ್ನು ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ಬಿಜೆಪಿ ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ ಎಂದು ಜೆಡಿಎಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ. ಜೆಡಿಎಸ್ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ ಹಾಗೂ ಚರ್ಚೆಯಿಂದ ವಿಷಯ ಬಗೆಹರಿಯಲಿದೆ ಎಂದು ತಿಳಿಸಿದರು.

ನಮ್ಮ ರಾಷ್ಟ್ರೀಯ ನಾಯಕರ ಜೊತೆ ನಿನ್ನೆ ದೂರವಾಣಿ ಮೂಲಕ ಚರ್ಚೆ ಮಾಡಿದ್ದೇನೆ. ಬಳಿಕ ಮಾಜಿ ಪ್ರಧಾನಿ ದೇವೇಗೌಡಜೀ ಅವರ ಜೊತೆಗೂ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಎಚ್.ಡಿ.ಕುಮಾರಸ್ವಾಮಿ ಅವರಿಗೂ ಬೆಳಿಗ್ಗೆ ಮಾಹಿತಿ ನೀಡಿದ್ದೇನೆ. ವಿಷಯಗಳ ಕುರಿತು ನಮ್ಮ ಪಕ್ಷದ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರು ಚರ್ಚೆ ಮಾಡಿದ್ದಾರೆ; ಅಲ್ಲದೆ ಚರ್ಚೆ ಮಾಡುತ್ತಿದ್ದಾರೆ. ಎಲ್ಲವೂ ಕೂಡ ಸುಖಾಂತ್ಯ ಕಾಣಲಿದೆ ಎಂದು ಹೇಳಿದರು.
ಕಳೆದ ಒಂದು ವಾರದ ಘಟನೆಗಳನ್ನು ಅವಲೋಕನ ಮಾಡಿದರೆ, ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಅವರ ನಾಯಕರಿಂದ ಬಿಜೆಪಿ ಮುಖಂಡರ ಬಗ್ಗೆ ಹೆಚ್ಚು ವಿಶ್ವಾಸ ಬಂದಿದೆ. ಎಂ.ಬಿ.ಪಾಟೀಲ್ ಮತ್ತು ಇತರರ ಹೇಳಿಕೆ ಗಮನಿಸಿದರೆ, ಬಿಜೆಪಿ ನಾಯಕರ ಮೇಲೆ ಅವರಿಗೆ ವಿಶ್ವಾಸ ಬಂದಿದೆ ಎಂಬುದು ಸ್ಪಷ್ಟವಾಗಿದೆ ಎಂದರು. ಸದಾನಂದಗೌಡರು ಕೂಡ ಬಿಜೆಪಿಯಲ್ಲೇ ಇರುತ್ತಾರೆ ಎಂದು ತಿಳಿಸಿದರು.
ಮೊದಲನೇ ಪಟ್ಟಿ ಬಿಡುಗಡೆ ಆಗಿದೆ. ಅಭ್ಯರ್ಥಿಗಳ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆ ಆಗಲಿದೆ. ಟಿಕೆಟ್ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಅವರು ಸ್ಪಷ್ಟಪಡಿಸಿದರು. ಈಶ್ವರಪ್ಪ ಅವರು ಹಿರಿಯ ನಾಯಕರು. ಕೆಲವು ತಪ್ಪು ಮಾಹಿತಿಗಳು ಅವರಿಗೆ ತಲುಪಿವೆ. ಹಾಗಾಗಿ ಈ ರೀತಿ ಚರ್ಚೆಗಳು ನಡೆಯುತ್ತಿವೆ. ಅವರಿಗೆ ಸತ್ಯ ಅರ್ಥ ಆದಮೇಲೆ ಸಮಸ್ಯೆ ಬಗೆಹರಿಯುವ ವಿಶ್ವಾಸ ನನಗೆ ಈಗಲೂ ಇದೆ ಎಂದು ತಿಳಿಸಿದರು.
ರಾಜ್ಯದಲ್ಲಿ ದಿನೇದಿನೇ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನೂ ಎತ್ತರಕ್ಕೆ ಹೋಗುತ್ತಿರುವುದು ಚುನಾವಣಾ ರಣಭೂಮಿಯಲ್ಲಿರುವ ನಮ್ಮ ಕಾರ್ಯಕರ್ತರಿಗೆ ಉತ್ಸಾಹ ತಂದುಕೊಟ್ಟಿದೆ ಎಂದರು. ಪ್ರಧಾನಿ ನರೇಂದ್ರ ಮೋದಿಯವರ ಶಿವಮೊಗ್ಗದ ಪ್ರವಾಸ, ಸಭೆ ಯಶಸ್ವಿಯಾಗಿದೆ. ಕೇವಲ ಒಂದು ವಾರದಲ್ಲಿ ಇಷ್ಟು ದೊಡ್ಡ ಸಮಾವೇಶ ಆಯೋಜಿಸಲಾಗಿದೆ ಎಂದು ಮೆಚ್ಚುಗೆ ಸೂಚಿಸಿದರು. ಶಿವಮೊಗ್ಗ, ಗುಲ್ಬರ್ಗ ಕಾರ್ಯಕ್ರಮಗಳ ಕುರಿತು ಸ್ವತಃ ಪ್ರಧಾನಿಯವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ವಿಜಯೇಂದ್ರ ಅವರು ಹೇಳಿದರು.












Click it and Unblock the Notifications