ಲಾಟರಿ ಹಗರಣ, ಸಿಬಿಐ ತನಿಖೆಗೆ ಪ್ರತಿಪಕ್ಷಗಳ ಪಟ್ಟು
ಬೆಂಗಳೂರು, ಮೇ 25 : ಎರಡು ವರ್ಷ ಪೂರ್ಣಗೊಳಿಸಿದ ಕರ್ನಾಟಕ ಸರ್ಕಾರಕ್ಕೆ ಒಂದಂಕಿ ಲಾಟರಿ ಹಗರಣ ಮುಜುಗರ ತಂದೊಡ್ಡಿದೆ. ಬಹುಕೋಟಿ ರೂಪಾಯಿ ಲಾಟರಿ ಹಗರಣದ ಸಂಬಂಧ ಅಬಕಾರಿ ಮತ್ತು ಲಾಟರಿ ನಿಷೇಧ ದಳದ ಎಸ್ಪಿ ಧರಣೇಶ್ ಮತ್ತು ಐಜಿಪಿ ಅಲೋಕ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರತಿಪಕ್ಷಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪಟ್ಟು ಹಿಡಿದಿವೆ.
ಒಂದಂಕಿ ಲಾಟರಿ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಸಿಐಡಿ ವರದಿಯೇ ಹೇಳಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಇಲ್ಲವಾದರಲ್ಲಿ ಸತ್ಯಾಂಶ ಹೊರಬರುವುದಿಲ್ಲ ಎಂದು ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿವೆ. [ಸಿಐಡಿ ಪ್ರಶ್ನೆಗಳಿಗೆ ಅಲೋಕ್ ಕುಮಾರ್ ಉತ್ತರವೇನು?]
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವರಾದ ಅನಂತ ಕುಮಾರ್, ಡಿ.ವಿ.ಸದಾನಂದ ಗೌಡ, ಮಾಜಿ ಸಚಿವ ಸುರೇಶ್ ಕುಮಾರ್ ಮುಂತಾದವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಅತ್ತ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಐಜಿಪಿ ಅಲೋಕ್ ಕುಮಾರ್ ಅವರ ವಿಚಾರಣೆ ನಡೆಸಿದ್ದಾರೆ. [ಒಂದಂಕಿ ಲಾಟರಿ ದಂಧೆ: ಪಾರಿ 'ಕಿಂಗ್ ಪಿನ್' ಅಲ್ಲರೀ!]
ಪಾರಿರಾಜನ್ ಕಾರಾಗೃಹಕ್ಕೆ : ಬೆನ್ನು ನೋವಿಗಾಗಿ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ಪಾರಿರಾಜನ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಕೆಜಿಎಫ್ ಉಪ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಪೊಲೀಸರ ಬಂಧನದಲ್ಲಿರುವ ಪಾರಿರಾಜನ್ ನ್ಯಾಯಾಂಗ ಬಂಧನದಲ್ಲಿದ್ದಾನೆ. ಲಾಟರಿ ಹಗರಣ ಯಾರು ಏನು ಹೇಳಿದರು. [ಲಾಟರಿ ಹಗರಣ ಐಪಿಎಸ್ ಅಧಿಕಾರಿ ಅಮಾನತು : ವಿಡಿಯೋ]

ವಿಸ್ಕೃತ ತನಿಖೆ ನಡೆಸಬೇಕು
ಒಂದಂಕಿ ಲಾಟರಿ ಹಗರಣವನ್ನು ಸಿಬಿಐಗೆ ಒಪ್ಪಿಸಿ ವಿಸ್ಕೃತ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಹಗರಣದಜಾಲ ದೊಡ್ಡದಾಗಿದ್ದು ರಾಜಕಾರಣಿಗಳ ಕೈವಾಡವಿದೆ. ಹೀಗಾಗಿ ಸಿಐಡಿ ಮೂಲಕ ಹಗರಣದ ತನಿಖೆ ನಡೆಸುವ ಬದಲು ಸಿಬಿಐಗೆ ಒಪ್ಪಿಸಿ ಎಂದು ಅವರು ಒತ್ತಾಯಿಸಿದರು.

ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ
ಲಾಟರಿ ದಂಧೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಆಗಬೇಕು ಎಂದು ಕೇಂದ್ರ ಕಾನೂನು ಸಚಿವ ಡಿವಿ ಸದಾನಂದಗೌಡ ಒತ್ತಾಯಿಸಿದ್ದಾರೆ. ಹಗರಣದಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಆದ್ದರಿಂದ ಸತ್ಯಾಂಶ ಹೊರಬರಬೇಕಾದರೆ ಸಿಬಿಐ ವಹಿಸುವುದೇ ಸೂಕ್ತ ಎಂದು ಹೇಳಿದ್ದಾರೆ.

ಇಲಾಖೆ ಬಗ್ಗೆ ಜನರು ನಂಬಿಕೆ ಕಳೆದುಕೊಳ್ಳಬೇಕಾಗುತ್ತದೆ
ಲಾಟರಿ ದಂಧೆಯ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಮಾಜಿ ಸಚಿವ ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ. ದಂಧೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ. ಗುಪ್ತಚರ ಇಲಾಖೆ ಈ ಬಗ್ಗೆ ಸಿಎಂಗೆ ಮಾಹಿತಿ ಕೊಡಬೇಕಿತ್ತು. ಆದರೆ ಇಲ್ಲಿ ಗುಪ್ತಚರ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆ ನಿಷ್ಕ್ರೀಯವಾಗಿದೆ. ಸರ್ಕಾರ ತನಿಖೆಯನ್ನು ಸಿಬಿಐಗೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಬಗ್ಗೆ ಸಾರ್ವಜನಿಕರು ನಂಬಿಕೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳನ್ನು ಅಮಾನತು ಮಾಡಿ
ಅಕ್ರಮ ಲಾಟರಿ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು ಕೇಳಿಬರುತ್ತಿದೆ. ಇಂತಹ ಅಧಿಕಾರಿಗಳನ್ನು ಸರ್ಕಾರ ತಕ್ಷಣ ಅಮಾನತು ಮಾಡಬೇಕು. ಲಾಟರಿ ಹಗರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕಣ್ಣೊರೆಸುವ ತಂತ್ರ ಅಂದ್ರು ಎಚ್ಡಿಕೆ
ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಅಲೋಕ್ ಕುಮಾರ್ ಅವರನ್ನು ಮಾತ್ರ ಅಮಾನತು ಮಾಡಿರುವುದು ಕಣ್ಣೊರೆಸುವ ತಂತ್ರ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಿರಿಯ ಅಧಿಕಾರಿ ಪದ್ಮನಯನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಕ ಚಂದ್ರಕಾಂತ್ ಅವರ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.












Click it and Unblock the Notifications