ಸಿದ್ದರಾಮಯ್ಯ ವಿರುದ್ಧ ಮೂಡಾ ಸಮರ: ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ: ವಿಜಯೇಂದ್ರ
ಬೆಂಗಳೂರು, ಜುಲೈ 29: ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ- ಜೆಡಿಎಸ್ ಪಕ್ಷಗಳ ಪಾದಯಾತ್ರೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಭಾನುವಾರ ಬೆಂಗಳೂರಿನಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು 7 ದಿನ ಬೇಕಾಗಲಿದೆ. ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರು ತಿಳಿಸಿದರು.

ಆಗಸ್ಟ್ 10 ರಂದು ಶನಿವಾರ ಸಮಾರೋಪ ನಡೆಯಲಿದೆ. ಅವತ್ತು ನಮ್ಮ ಕೇಂದ್ರದ ನಾಯಕರೂ ಬರಲಿದ್ದಾರೆ. ಇಂದಿನ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜೆಡಿಎಸ್ ಮುಖಂಡ ಮತ್ತು ಕೇಂದ್ರದ ಸಚಿವ ಕುಮಾರಸ್ವಾಮಿ, ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿ ಹಗರಣಗಳ ಕುರಿತು ಚರ್ಚಿಸಲಾಗಿದೆ. ಬಳಿಕ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾಗಿ ವಿವರ ನೀಡಿದರು. ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ ದುರ್ಬಳಕೆ ಆಗಿದೆ. ಮೂಡದಲ್ಲಿ ಸಾವಿರಾರು ಕೋಟಿ ರೂಪಾಯಿಯ ಹಗರಣ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಭ್ರಷ್ಟ ಸರಕಾರ ಕಿತ್ತೊಗೆಯೋಣ- ಯಡಿಯೂರಪ್ಪ
ಇನ್ನೂ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಭ್ರಷ್ಟ ಸರಕಾರ ಕಿತ್ತೊಗೆಯುವ ಹೋರಾಟದಲ್ಲಿ ಜನರೂ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಎರಡೂ ಪಕ್ಷಗಳು ಸೇರಿ ಹೋರಾಟ ನಡೆಸಲಿದ್ದು, ಹತ್ತಾರು ಸಾವಿರ ಜನರು ಸೇರಿ ಹೋರಾಟ ನಡೆಯಲಿದೆ ಎಂದು ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ಕೊಡುವವರೆಗೂ ಹೋರಾಟ ನಿಲ್ಲುವುದಿಲ್ಲ. ಲೋಕಸಭೆ, ರಾಜ್ಯಸಭೆಯಲ್ಲೂ ಇದರ ಕುರಿತು ಚರ್ಚೆ ಆಗಿದೆ. ಮುಖ್ಯಮಂತ್ರಿಗಳಿಗೆ ಕಿಂಚಿತ್ತು ಗೌರವ ಇದ್ದರೆ, ಮಾಡಿರುವ ಅಪರಾಧವನ್ನು ಒಪ್ಪಿಕೊಂಡು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.












Click it and Unblock the Notifications