ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಇನ್ನೂ ಒಪ್ಪಿಗೆ ಸಿಕ್ಕಿಲ್ಲ
Recommended Video

ಬೆಂಗಳೂರು, ಮಾರ್ಚ್ 21 : ಲೋಕಸಭಾ ಚುನಾವಣೆಗೆ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ರಾಜ್ಯ ನಾಯಕರು ಸಿದ್ಧಪಡಿಸಿರುವ ಪಟ್ಟಿಗೆ ಅಮಿತ್ ಶಾ ಮತ್ತು ರಾಮಲಾಲ್ ಒಪ್ಪಿಗೆ ನೀಡಿಲ್ಲ.
ನವದೆಹಲಿಯಲ್ಲಿ ಎರಡು ದಿನದಿಂದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಒಂದೊಂದು ರಾಜ್ಯದ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ. ಕರ್ನಾಟಕದ ಪಟ್ಟಿಯ ಬಗ್ಗೆ ಮಂಗಳವಾರ ಒಂದು ಸುತ್ತಿನ ಚರ್ಚೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದೆ. 10 ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ವಿಚಾರದಲ್ಲಿ ಇನ್ನೂ ಒಮ್ಮತ ಸಿಕ್ಕಿಲ್ಲ.
ಕರ್ನಾಟಕದಲ್ಲಿ ಎರಡು ಹಂತದಲ್ಲಿ ಏಪ್ರಿಲ್ 18 ಮತ್ತು 23ರಂದು ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ. ಗುರುವಾರ ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ವಲಸಿಗರಿಗೆ ಟಿಕೆಟ್ ಇಲ್ಲ
ಮೂರಕ್ಕೂ ಹೆಚ್ಚು ಹಾಲಿ ಸಂಸದರ ಸಾಧನೆ ತೃಪ್ತಿಕರವಾಗಿಲ್ಲ ಹಾಗೂ ವಲಸಿಗರಿಗೆ ಮಣೆ ಹಾಕುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ರಾಜ್ಯ ನಾಯಕರು ಶಿಫಾರಸು ಮಾಡಿರುವ 10 ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ಕೇಂದ್ರ ನಾಯಕರು ಇನ್ನೂ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ.

ಯಾವ-ಯಾವ ಕ್ಷೇತ್ರಗಳು
ಉಡುಪಿ-ಚಿಕ್ಕಮಗಳೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ ಕ್ಷೇತ್ರದ ಹಾಲಿ ಸಂಸದರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ಸ್ಥಳೀಯ ನಾಯಕರು ಹಾಲಿ ಸಂಸದರಿಗೆ ಟಿಕೆಟ್ ನೀಡುವುದು ಬೇಡ ಎಂದು ಪಟ್ಟು ಹಿಡಿದಿದ್ದಾರೆ.

ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ
ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸುವ ವಿಚಾರದಲ್ಲಿಯೂ ಇನ್ನೂ ಒಮ್ಮತ ಮೂಡಿಲ್ಲ. ಸುಮಲತಾ ಅಂಬರೀಶ್ಗೆ ಬೆಂಬಲ ನೀಡಬೇಕೋ ಎಂದು ಚರ್ಚೆ ನಡೆಯುತ್ತಿದೆ. ಚುನಾವಣೆ ಗೆದ್ದ ಮೇಲೆ ಸುಮಲತಾ ಅವರು ಬಿಜೆಪಿ ಸೇರುವುದಾದರೆ ಬೆಂಬಲ ನೀಡುವ ಸಾಧ್ಯತೆ ಇದೆ.

ಯಡಿಯೂರಪ್ಪ ಹೇಳುವುದೇನು?
'ಈ ಬಾರಿ ಮೂವರು ಮಹಿಳೆಯರಿಗೆ ಟಿಕೆಟ್ ನೀಡುವಂತೆ ವರಿಷ್ಠರಿಗೆ ಶಿಫಾರಸು ಮಾಡಿದ್ದೇವೆ. ಕನಿಷ್ಠ 22 ಸ್ಥಾನಗಳನ್ನು ಗೆಲ್ಲುವುದು ಖಚಿತ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.












Click it and Unblock the Notifications