BJP President: ಲಿಂಗಾಯತ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ, ಈ ಇಬ್ಬರ ಹೆಸರು ಫೈನಲ್?
ರಾಜ್ಯ ಬಿಜೆಪಿಯಲ್ಲಿ ಕಗ್ಗಂಟಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ವಿಚಾರವು ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಹಾಲಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷರಾಗಿ ಮುಂದುವರಿಸಲಾಗುತ್ತೆ ಎಂದು ಹೇಳಲಾಗುತ್ತಿದೆ. ಮತ್ತೊಂದೆ ರೆಬೆಲ್ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಅವರೂ ಈ ಸ್ಥಾನದ ಪ್ರಬಲ ಆಕಾಂಕ್ಷಿ ಎನ್ನಲಾಗಿತ್ತು. ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಕ್ಷದ ಇಬ್ಬರು ಹಿರಿಯ ನಾಯಕರ ಹೆಸರು ಕೇಳಿಬಂದಿದೆ.
ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ಕುಮಾರ್ ಬಂಗಾರಪ್ಪ ಸೇರಿದಂತೆ ಹಲವರು ರಾಜ್ಯಾಧ್ಯಕ್ಷರಾಗುವ ಆಸೆ ಬಿಚ್ಚಿಟ್ಟಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಬಣ ರಾಜಕೀಯಕ್ಕೂ ಅಂತ್ಯ ಹಾಡುವ ಅಂದಾಜಿನಲ್ಲಿದ್ದಾರೆ. ಆದರೆ, ಹೈಕಮಾಂಡ್ ಈ ಬಗ್ಗೆ ಇನ್ನೂ ಯಾವುದೇ ನಿಲುವು ತೆಗೆದುಕೊಂಡಿಲ್ಲ. ಸದ್ಯ ಲಿಂಗಾಯಿತ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಕೊಡುವುದು ಒಳಿತು ಎಂಬ ಮಾತು ಕೇಳಿಬಂದ ಹಿನ್ನೆಲೆ ಲಿಂಗಾತಯ ಅಸ್ತ್ರವನ್ನೇ ಪ್ರಯೋಗಿಸಲು ತಯಾರಿ ನಡೆದಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಇಬ್ಬರು ಲಿಂಗಾಯತ ಪ್ರಬಲ ನಾಯಕರ ಹೆಸರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ಗೆ ಬಂದಿದೆ.

ಕೇಂದ್ರ ಸಚಿವರಾಗಿರುವ ವಿ.ಸೋಮಣ್ಣ ಅಥವಾ ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಭಾರಿ ಚರ್ಚೆಯಾಗಿದೆ. ಬಸನಗೌಡ ಪಾಟೀಲ ಯತ್ನಾಳ್ ಕೂಡ ಲಿಂಗಾಯತ ಸಮುದಾಯ ನಾಯಕಾಗಿದ್ದಾರೆ. ನಿನ್ನೆ ನಡೆದ ಲಿಂಗಾಯತ ನಾಯಕರ ಸಭೆಯಲ್ಲೂ ಈ ಮೂವರ ಹೆಸರೇ ಮುನ್ನೆಲೆಗೆ ಬಂದಿದೆ. ಕೇಂದ್ರ ಸಚಿವ ವಿ. ಸೋಮಣ್ಣ, ಸಂಸದ ಬಸವರಾಜ ಬೊಮ್ಮಾಯಿ ಅಥವಾ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಹೈಕಮಾಂಡ್ ನಾಯಕರನ್ನು ಕೋರಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿಜಯೇಂದ್ರ ಅವರಿಂದ ಹೋರಾಟ ಸಾಧ್ಯವೇ ಇಲ್ಲ. ಒಂದು ವೇಳೆ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿದರೆ ಪಕ್ಷಕ್ಕೆ ಭಾರಿ ನಷ್ಟ ಮಾತ್ರವಲ್ಲದೆ, ಲಿಂಗಾಯತ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಈ ಕಾರಣದಿಂದ ಅವರನ್ನು ಬದಲಾವಣೆ ಮಾಡಲೇಬೇಕು ಎಂದು ಹೈಕಮಾಂಡ್ ನಾಯಕರಿಗೆ ಮನವಿ ಮಾಡಲು ಸಭೆಯಲ್ಲಿ ನಿರ್ಧಾರವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಲು ಹೈಕಮಾಂಡ್ ಮೇಲೆ ಒತ್ತಡ ಹಾಕಲು ಲಿಂಗಾಯತ ಅಸ್ತ್ರವೇ ಸೂಕ್ತ ಎಂದು ತಂತ್ರ ರೂಪಿಸಲಾಗಿದೆ. ಒಂದು ವೇಳೆ ವಿಜಯೇಂದ್ರ ಅವರನ್ನು ಅವರನ್ನು ದಿಢೀರ್ ಬದಲಾಯಿಸಿ, ಲಿಂಗಾಯತರಲ್ಲದ ನಾಯಕರಿಗೆ ಸ್ಥಾನ ಕೊಟ್ಟರೂ ಪಕ್ಷದಲ್ಲಿ ಅಲ್ಲೋಲಕಲ್ಲೋಲವಾಗಲಿದೆ. ಹಾಗಾಗಿ ವಿಜಯೇಂದ್ರ ಬದಲಿದೆ ಲಿಂಗಾಯತ ಸಮುದಾಯದ ಈ ನಾಯಕರಲ್ಲಿ ಒಬ್ಬರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಯಾವುದೇ ಅಸಮಾಧಾನ ಇರುವುದಿಲ್ಲ ಎಂಬ ವಿಚಾರವನ್ನೂ ಹೈಕಮಾಂಡ್ಗೆ ಮನವರಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ನಿನ್ನೆ ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಸಭೆಯಲ್ಲಿ 60ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಭಾಗಿಯಾಗಿದ್ದರು. ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಬಿ.ಪಿ.ಹರೀಶ್, ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಲಿಂಗಾಯತ ಸಮುದಾಯದ ನಾಯಕರು ವಿಜಯೇಂದ್ರ ವಿರುದ್ಧ ರಣತಂತ್ರ ರೂಪಿಸಲು ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಮಣ್ಣ ಹಾಗೂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಹೈಕಮಾಂಡ್ನಿಂದ ಮೆಚ್ಚುಗೆ ಪಡೆದುಕೊಂಡಿರುವುದರಿಂದ ಲಿಂಗಾಯತ ಸಮುದಾಯಕ್ಕೆ ಹೈಕಮಾಂಡ್ ಮತ್ತೆ ಮಣೆ ಹಾಕುವ ಸಾಧ್ಯತೆ ಇದೆ ಎಂದು ಚರ್ಚೆ ನಡೆಯುತ್ತಿವೆ.












Click it and Unblock the Notifications