ಶುಕ್ರವಾರ ಅರಮನೆ ಮೈದಾನದಲ್ಲಿ ಕರ್ನಾಟಕ ಬಿಜೆಪಿ ಕಾರ್ಯಕಾರಣಿ
ಬೆಂಗಳೂರು, ಅಕ್ಟೋಬರ್ 06; " ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯು ಅಕ್ಟೋಬರ್ 7ರ ಶುಕ್ರವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ" ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ. ಟಿ. ರವಿ ಹೇಳಿದರು.
ಗುರುವಾರ ರಾಜ್ಯ ಕಾರ್ಯಕಾರಣಿ ಸಭೆ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸಿ. ಟಿ. ರವಿ ಮಾಧ್ಯಮಗಳ ಜೊತೆ ಮಾತನಾಡಿದರು. ಶುಕ್ರವಾರ ಬೆಳಗ್ಗೆ 10.30ಕ್ಕೆ ತ್ರಿಪುರ ವಾಸಿನಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ನಡೆಯಲಿದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಪ್ರಭಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ.

ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪಕ್ಷದ ಎಲ್ಲ ಕೋರ್ ಕಮಿಟಿ ಸದಸ್ಯರು, ಸಹ ಪ್ರಭಾರಿ ಡಿ. ಕೆ. ಅರುಣಾ, 592 ಜನ ರಾಜ್ಯ ಕಾರ್ಯಕಾರಿಣಿಯ ಅಪೇಕ್ಷಿತ ಸದಸ್ಯರು ಭಾಗವಹಿಸಲಿದ್ದಾರೆ.
ಹಾಲಿ ಸಂಸದರು, ಹಾಲಿ ಶಾಸಕರು, ರಾಜ್ಯ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ರಾಜ್ಯ ಅಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠಗಳ ಸಂಚಾಲಕರು, ಜಿಲ್ಲೆ, ವಿಭಾಗಗಳ ಪ್ರಭಾರಿಗಳು, ಜಿಲ್ಲಾ ಬಿಜೆಪಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಈ ರಾಜ್ಯ ಕಾರ್ಯಕಾರಿಣಿಯ ಅಪೇಕ್ಷಿತ ಸದಸ್ಯರಾಗಿದ್ದಾರೆ.
ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೆ ಸಂಘಟನಾತ್ಮಕ ವಿಚಾರಗಳ ಚರ್ಚೆ ನಡೆಯಲಿದೆ. ಅಕ್ಟೋಬರ್ 11ರಿಂದ ಕರ್ನಾಟಕ ಬಿಜೆಪಿ ನಾಯಕರು ರಾಜ್ಯ ಪ್ರವಾಸದ ಯೋಜನೆ ರೂಪಿಸಿದ್ದಾರೆ. ಅಲ್ಲದೇ ಕರ್ನಾಟಕದಲ್ಲಿ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿಯೇ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಸಿ. ಟಿ. ರವಿ, "ಮೈಸೂರು ದಸರಾ ವೈಭವದಿಂದ ನಡೆದಿದೆ. ನವರಾತ್ರಿ, ವಿಜಯದಶಮಿ ಮತ್ತು ದಸರಾವು ಕೇವಲ ಸಾಂಸ್ಕೃತಿಕ ವೈಭವದ ಪ್ರತೀಕ ಮಾತ್ರವಲ್ಲ. ದುಷ್ಟ ಶಕ್ತಿಗಳ ನಿಗ್ರಹ ಮತ್ತು ಸಜ್ಜನ ಶಕ್ತಿಗಳಿಗೆ ರಕ್ಷಣೆ ದೊರಕಲಿ ಎಂಬ ಉದ್ದೇಶದಿಂದ ದೇವಿಯ ಆರಾಧನೆ ಮಾಡಲಾಗುತ್ತದೆ" ಎಂದರು.
ರಾಜ್ಯದ ಜನತೆಗೆ, ಮಾಧ್ಯಮ ಮಿತ್ರರಿಗೂ ದಸರಾ ಹಬ್ಬದ ಶುಭಾಶಯಗಳನ್ನು ಸಿ. ಟಿ. ರವಿ ಕೋರಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು ಮತ್ತು ಮಹೇಶ್ ಟೆಂಗಿನಕಾಯಿ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.
ಕೆಲವು ನಿರ್ಣಯ ಕೈಗೊಳ್ಳಲಾಗುತ್ತದೆ; 'ಸಶಕ್ತ ಭಾರತಕ್ಕಾಗಿ ಸಮೃದ್ಧ ಕರ್ನಾಟಕ' ಎಂಬ ಘೋಷಣೆಯೊಂದಿಗೆ ಕರ್ನಾಟಕ ಬಿಜೆಪಿಯ ಒಂದು ದಿನದ ಕಾರ್ಯಕಾರಣಿ ಸಭೆ ಬೆಂಗಳೂರಿನಲ್ಲಿ ಶುಕ್ರವಾರ ನಡೆಯಲಿದೆ.
ಇಡೀ ದಿನ ರಾಜಕೀಯ, ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚೆ, ವಿಶ್ಲೇಷಣೆಗಳು ನಡೆಯಲಿವೆ. ಒಂದು ದಿನದ ಕಾರ್ಯಕಾರಣಿ ಸಭೆಯಲ್ಲಿ ಕೆಲವು ನಿರ್ಣಯವನ್ನು ಕೈಗೊಳ್ಳಲಾಗುತ್ತದೆ. ಪಕ್ಷದ ನಾಯಕರು ಸಭೆಯ ನಿರ್ಣಯಗಳನ್ನು ಸಂಜೆ ತಿಳಿಸಲಿದ್ದಾರೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕೆಲವೇ ತಿಂಗಳು ಉಳಿದಿದೆ. ಪ್ರತಿಪಕ್ಷಗಳು ಚುನಾವಣೆ ತಯಾರಿ ಆರಂಭಿಸಿವೆ. ಈ ಹಿನ್ನಲೆಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ಮಹತ್ವವನ್ನು ಪಡೆದುಕೊಂಡಿದೆ. ಚುನಾವಣೆ ತಂತ್ರಗಾರಿಕೆ ಕುರಿತು ಪದಾಧಿಕಾರಿಗಳಿಗೆ ಸಭೆಯಲ್ಲಿ ಸೂಚನೆಗಳನ್ನು ಸಹ ನೀಡುವ ನಿರೀಕ್ಷೆ ಇದೆ.
ಪದಾಧಿಕಾರಿಕಾರಿಗಳ ಜೊತೆ ಸಂವಾದಕ್ಕೆ ಸಹ ಅವಕಾಶ ಕಲ್ಪಿಸಲಾಗಿದೆ. ಪಕ್ಷವನ್ನು ಸಂಘಟನಾತ್ಮಕವಾಗಿ ಬಲಗೊಳಿಸುವ, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕುರಿತು ಸಹ ಚರ್ಚೆಗಳು ನಡೆಯಲಿವೆ.












Click it and Unblock the Notifications