Breaking; ಸೆ.8ರ ಬಿಜೆಪಿ ಜನೋತ್ಸವ ಸಮಾವೇಶ ಮುಂದೂಡಿಕೆ
ಬೆಂಗಳೂರು, ಸೆಪ್ಟೆಂಬರ್ 07: ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ದೊಡ್ಡಬಳ್ಳಾಪುರದಲ್ಲಿ ಗುರುವಾರ ನಡೆಯಬೇಕಿದ್ದ 'ಜನೋತ್ಸವ' ಸಮಾವೇಶ ಮುಂದೂಡಿದೆ. ಇದುವರೆಗೂ ಎರಡು ಬಾರಿ ಜನೋತ್ಸವ ಸಮಾವೇಶ ಮುಂದೂಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಗುರುವಾರ ಬಿಜೆಪಿ ಜನೋತ್ಸವ ಸಮಾವೇಶ ನಡೆಸಲು ತೀರ್ಮಾನಿಸಲಾಗಿತ್ತು. ಅದನ್ನು ಸೆಪ್ಟೆಂಬರ್ 11ರ ಭಾನುವಾರಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆ ಈ ಸಮಾವೇಶ ನಡೆಸಲಾಗುತ್ತಿದೆ.

ಮಂಗಳವಾರ ರಾತ್ರಿ ಸಚಿವ ಉಮೇಶ್ ಕತ್ತಿ (61) ನಿಧನರಾದ ಹಿನ್ನಲೆಯಲ್ಲಿ ಜನೋತ್ಸವ ಸಮಾವೇಶ ಮುಂದೂಡಿಕೆ ಮಾಡಲಾಗಿದೆ. ಈ ಸಮಾವೇಶಕ್ಕೆ ಸುಮಾರು 5-6 ಲಕ್ಷ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಲು ರಾಜ್ಯ ಬಿಜೆಪಿ ಘಟಕ ತೀರ್ಮಾನಿಸಿದೆ.
ಜುಲೈ 26ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿತ್ತು. ಆದ್ದರಿಂದ 'ಜನೋತ್ಸವ' ಸಮಾವೇಶವನ್ನು ಜುಲೈ 28ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ದಕ್ಷಿಣ ಕನ್ನಡದ ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ ಜನೋತ್ಸವ ಸಮಾವೇಶ ರದ್ದುಗೊಳಿಸಿದ್ದರು.

ಬಳಿಕ ಸೆಪ್ಟೆಂಬರ್ 8ರಂದು ಜನೋತ್ಸವ ಸಮಾವೇಶ ನಡೆಸಲು ತೀರ್ಮಾನಿಸಲಾಗಿತ್ತು. ದೊಡ್ಡಬಳ್ಳಾಪುರದಲ್ಲಿ ವೇದಿಕೆ ನಿರ್ಮಾಣ ಕಾರ್ಯವೂ ಪೂರ್ಣಗೊಂಡಿತ್ತು. ಆದರೆ ಈಗ ಅದನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ.
ಜನೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ವಿವಿಧ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳಲಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ 75ನೇ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಎಂಬ ಹೆಸರಿನಲ್ಲಿ ಬೃಹತ್ ಸಮಾವೇಶ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಜನೋತ್ಸವ ಸಮಾವೇಶ ನಡೆಸುತ್ತಿದೆ. ಆದರೆ ಈ ಸಮಾವೇಶ ಈಗ ಮುಂದೂಡಿಕೆಯಾಗಿದೆ.












Click it and Unblock the Notifications