By Election: ನಮ್ಮಲ್ಲಿರುವ ಒಗ್ಗಟ್ಟು ನಿಮ್ಮಲ್ಲಿಲ್ಲ! ಬಿಜೆಪಿ ನಾಯಕರ ವಿರುದ್ಧ ಕಾರ್ಯಕರ್ತರ ಆಕ್ರೋಶ
ಕರ್ನಾಟಕದ ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುಖಭಂಗವಾಗಿದೆ. ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನತ್ತ ಮುನ್ನಡೆದಿದ್ದು, ಬಿಜೆಪಿ ಮತ್ತು ಜೆಡಿಎಸ್ಗೆ ಸೋಲಿನ ಆಘಾತ ಎದುರಾಗಿದೆ. ಬಿಜೆಪಿ ಸೋಲಿನ ಬೆನ್ನಲ್ಲೇ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡಿದ್ದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಕರ್ನಾಟಕ ಬಿಜೆಪಿಯಲ್ಲಿ ಒಗ್ಗಟ್ಟಿನ ಕೊರತೆ ಮೊದಲಿನಂದಲೂ ಕಾಣಿಸುತ್ತಿದೆ. ಒಗ್ಗಟ್ಟಿನ ಕೊರತೆಯಿಂದಲೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿತ್ತು ಎಂದು ಕಾರ್ಯಕರ್ತರು ಸಿಟ್ಟಾಗಿದ್ದರು. ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಭಾರಿ ಕಸರತ್ತು ನಡೆಸಿತ್ತು, ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ಬಿಜೆಪಿ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿದ್ದರು, ಅದರ ವಿರುದ್ಧ ಸಮರ್ಪಕ ಹೋರಾಟ ಮಾಡುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಕಾರ್ಯಕರ್ತರು ಸಿಟ್ಟಾಗಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನ, ಪಿಎಸ್ಐ ಪರೀಕ್ಷೆ ಹಗರಣ, 40% ಕಮಿಷನ್ ವಿಚಾರದಲ್ಲಿ ಜನಾಂದೋಲನ ಮಾಡಿದ್ದ ಕಾಂಗ್ರೆಸ್ ರಾಜ್ಯ ಚುನಾವಣೆಯಲ್ಲಿ ಗೆಲ್ಲಲು ಶತಪ್ರಯತ್ನ ಮಾಡಿ ಯಶಸ್ಸು ಕಂಡಿತ್ತು.
ಆದರೆ ಬಿಜೆಪಿ ನಾಯಕರಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುವಲ್ಲಿ ಯಾವುದೇ ಉತ್ಸಾಹ ಕಾಣಿಸುತ್ತಿಲ್ಲ, ಮುಡಾ ಪ್ರಕರಣ, ವಕ್ಫ್ ವಿವಾದ, ರೇಷನ್ ಕಾರ್ಡ್ ರದ್ದು ಯಾವುದೇ ವಿಚಾರದಲ್ಲೂ ಬಿಜೆಪಿ ನಾಯಕರು ಹೋರಾಟ ನಡೆಸುತ್ತಿಲ್ಲ. ವಿರೋಧ ಕೇವಲ ಹೇಳಿಕೆಗೆ ಸೀಮಿತವಾಗಿದ್ದು ಬೀದಿಗಿಳಿದು ಜನರ ಜೊತೆ ಹೋರಾಟ ನಡೆಸುವಲ್ಲಿ ನಾಯಕರು ವಿಫಲವಾಗಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮಿಂದ ನಮಗೆ ಮರ್ಯಾದೆ ಇಲ್ಲ
ವಕ್ಫ್ ವಿರುದ್ಧದ ಹೋರಾಟದಲ್ಲೂ ರಾಜ್ಯ ಬಿಜೆಪಿ ನಾಯಕರಲ್ಲಿ ಒಗ್ಗಟ್ಟಿನ ಕೊರತೆ ಎದ್ದು ಕಾಣಿಸಿತ್ತು, ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕಿಡಿ ಕಾರಿದ್ದರು. ಈಗ ಉಪಚುನಾವಣೆ ಸೋಲಿನ ಬಳಿಕ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೆಚ್ಚಾಗಿದೆ.
ಚಕ್ರವರ್ತಿ ಸೂಲಿಬೆಲೆ ಆಕ್ರೋಶ
ಉಪಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನಕ್ಕೆ ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಇಲ್ಲಿ ಕಾರ್ಯಕರ್ತರು ಒಗ್ಗಟ್ಟಾಗಿದ್ದರು, ನಾಯಕರ ನಡುವೆ ಒಗ್ಗಟ್ಟಿಲ್ಲ ಎಂದಿರುವ ಅವರು, ರಾಜ್ಯ ಬಿಜೆಪಿಗೆ ಸರ್ಜರಿ ಅಗತ್ಯವಿದ್ದು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾಗೆ ಮನವಿ ಮಾಡಿದ್ದಾರೆ.
ನಾಯಕತ್ವ ಬದಲಾವಣೆ
ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮಾಡದೇ ಇದ್ದರೆ, ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಕಾರ್ಯಕರ್ತರು ಹೇಳಿದ್ದು, ಕೂಡಲೇ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ.












Click it and Unblock the Notifications