ಬಿಜೆಪಿ ಬಂಡಾಯ: 'ಸಮಸ್ಯೆಗಳಿವೆ, ಎಲ್ಲರನ್ನೂ ಸಮಾಧಾನಪಡಿಸಲು ಪ್ರಯತ್ನ' ಎಂದ ಬಿಎಸ್ ಯಡಿಯೂರಪ್ಪ
ಬೆಂಗಳೂರು, ಏಪ್ರಿಲ್. 13: ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡಿಗಡೆ ಮಾಡಿದ ನಂತರ ಬಿಜೆಪಿಯಲ್ಲಿ ಭಾರೀ ಬಂಡಾಯ ಆರಂಭವಾಗಿದೆ. ಅಭ್ಯರ್ಥಿಗಳ ಆಯ್ಕೆಯಿಂದ ಅತೃಪ್ತರಾದವರನ್ನು ಸಮಾಧಾನಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಮೇ 10 ರ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಬಿಜೆಪಿ ನಾಯಕರು ರಾಜೀನಾಮೆ ನೀಡುತ್ತಿದ್ದು, ಹಲವರು ಪಕ್ಷೇತರರಾಗಿ ಮತ್ತು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ವರ್ಧಿಸುವ ಬೆದರಿಕೆ ಹಾಕಿದ್ದಾರೆ. ಮತ್ತೆ ಕೆಲವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯದ ಬಗ್ಗೆ ಯಡಿಯೂರಪ್ಪ ಮಾತನಾಡಿದ್ದಾರೆ.

ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, "ಕೆಲವು ಸಮಸ್ಯೆಗಳಿವೆ ಎಂದು ನಾವು ಒಪ್ಪಿಕೊಳ್ಳುತ್ತೇವೆ. ನಾನು ಅತೃಪ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದೇನೆ. ರಾಜ್ಯವನ್ನು ಉಳಿಸಿಕೊಳ್ಳಲು ನಾವು ನಮ್ಮ ಅತ್ಯುತ್ತಮ ಪ್ರಯತ್ನ ನಡೆಸಬೇಕಾಗಿದೆ. 3-4 ಜನರು ತಮ್ಮ ಆದ್ಯತೆಯ ಕ್ಷೇತ್ರಗಳಿಂದ ಕಣಕ್ಕಿಳಿಯುವ ನಿರೀಕ್ಷೆಯಿರುವುದರಿಂದ ಸಮಸ್ಯೆಗಳಾಗಿವೆ" ಎಂದಿದ್ದಾರೆ.
"ನಾವು ಬಂಡಾಯವೆದ್ದ ನಾಯಕರನ್ನು ಸಮಾಧಾನಪಡಿಸಲು ಮತ್ತು ಪಕ್ಷವನ್ನು ಒಟ್ಟುಗೂಡಿಸಲು ಮತ್ತು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಮುಖ್ಯ ಎಂಬುದನ್ನು ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತಿದ್ದೇವೆ. ಬಂಡಾಯ ಕೆಲವು ಸ್ಥಳಗಳಲ್ಲಿ ಮಾತ್ರ ನಡೆಯುತ್ತಿದೆ. ಅವರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ" ಎಂದು ಮಾಹಿತಿ ನೀಡಿದ್ದಾರೆ.
ಮಂಗಳವಾರ ತಡರಾತ್ರಿ ಬಿಡುಗಡೆಯಾದ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸ್ಥಾನ ಘೋಷಷಣೆಯಾಗದವರ ಪೈಕಿ ಕರ್ನಾಟಕದ ಮಾಜಿ ಸಿಎಂ ಮತ್ತು ಆರು ಬಾರಿ ಬಿಜೆಪಿ ಶಾಸಕರಾಗಿರುವ ಜಗದೀಶ್ ಶೆಟ್ಟರ್ ಅವರ ಹೆಸರು ಇದೆ. ಅವರಿಗೆ ಎರಡನೇ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಉತ್ತಮ ಅವಕಾಶವಿದೆ ಎಂದು ಯಡಿಯೂರಪ್ಪ ಹೇಳಿದ್ದರು. ಆದರೆ. ಬುಧವರಾ ಬಿಡು್ಡೆಯಾದ ಎರಡನೇ ಪಟ್ಟಿಯಲ್ಲಿಯೂ ಅವರ ಹೆಸರು ಘೋಷಣೆಯಾಗಿಲ್ಲ. .

ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿರುವುದಾಗಿ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಘೋಷಿಸಿದ ಬೆನ್ನಲ್ಲೇ, ಇದು ಸ್ವಯಂಪ್ರೇರಿತ ನಿರ್ಧಾರ ಎಂದು ಯಡಿಯೂರಪ್ಪ ಹೇಳಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತೇನೆ ಎಂದು ಪಕ್ಷದ ಅಧ್ಯಕ್ಷರಿಗೆ ಈಶ್ವರಪ್ಪ ಸ್ವಯಂಪ್ರೇರಣೆಯಿಂದ ಪತ್ರ ಬರೆದಿದ್ದಾರೆ. ಆದರೆ ಸ್ಪರ್ಧಿಸಲು ಇಚ್ಛಿಸಿಲ್ಲ ಎಂದು ಈಶ್ವರಪ್ಪ ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮುಂದುವರಿದು, "ಆದರೆ, ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಸರು ಕಾಣದೆ ಅಸಮಾಧಾನಗೊಂಡಿರು ನಾಯಕರಿದ್ದಾರೆ. ಅವರನ್ನು ಸಮಾಧಾನಪಡಿಸುವ ಕೆಲಸ ಮಾಡುತ್ತಿದ್ದೇವೆ. ಅವರೆಲ್ಲಾ ದೊಡ್ಡ ಉದ್ದೇಶಕ್ಕಾಗಿ ಒಂದಾಗುತ್ತಾರೆ. ಇದು ಬಿಜೆಪಿಯನ್ನು ಕರ್ನಾಟಕವನ್ನು ಮತ್ತೆ ಗೆಲ್ಲಲು ಸಹಾಯ ಮಾಡುತ್ತದೆ. ಏನಾಗುತ್ತದೆ ಮುಂದೆ ನೋಡೋಣ" ಎಂದು ಯಡಿಯೂರಪ್ಪ ಹೇಳಿದ್ದಾರೆ.
ಟಿಕೆಟ್ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ಮಾಜಿ ಉಪ ಸಿಎಂ ಲಕ್ಷ್ಮಣ ಸವದಿ ಪಕ್ಷ ತೊರೆದಿರುವ ಬಗ್ಗೆ ಯಡಿಯೂರಪ್ಪ ಅವರು, "ಅವರು ಯಾಕೆ ಅಸಮಾಧಾನಗೊಂಡಿದ್ದಾರೆಂದು ನನಗೆ ತಿಳಿದಿಲ್ಲ, ನಾವು ಅವರಿಗೆ ಎಲ್ಲವನ್ನೂ ನೀಡಿದ್ದೇವೆ. ನಾವು ಅವರನ್ನು ಎಂಎಲ್ಎ, ಎಂಎಲ್ಸಿ ಮಾಡಿದ್ದೇವೆ. ಅವರನ್ನು ಮಂತ್ರಿ ಮಾಡಬೇಕೆಂದು ಬಯಸಿದ್ದೇವು. ನಾವು ನಿನ್ನೆಯಿಂದ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ, ಆದರೆ ಸಾಧ್ಯವಾಗಲಿಲ್ಲ" ಎಂದಿದ್ದಾರೆ.
ಹಿರಿಯ ನಾಯಕ ಸವದಿ ಅವರು ಮಂಗಳವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆಯದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದಾರೆ. ಇನ್ನು, ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಹಿರಿಯ ನಾಯಕ ಮತ್ತು ಮೀನುಗಾರಿಕಾ ಸಚಿವ ಎಸ್ ಅಂಗಾರ ಅವರು ಈ ಬಾರಿ ಟಿಕೆಟ್ ನಿರಾಕರಿಸಿದ್ದರಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿಧಾನಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಎಂಎಲ್ಸಿ ಆರ್ ಶಂಕರ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.












Click it and Unblock the Notifications