ಉಚಿತ ಭಾಗ್ಯಗಳ ಕೊಟ್ಟು ಆರೋಗ್ಯ ಭಾಗ್ಯ ಕಸಿಯುತ್ತಿದ್ದಾರೆ..!
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಗಳ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರೈಸುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯ ಆಡಳಿತ ಹಾಗೂ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿ ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿದೆ. ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರವನ್ನು ಹೆಚ್ಚಿಸಿ ನಾಡಿನ ಬಡ ರೋಗಿಗಳ ಜೇಬಿಗೂ ಕತ್ತರಿ ಹಾಕುವ ಗ್ಯಾರಂಟಿ ನೀಡುತ್ತಿರುವುದು ದುರ್ದೈವದ ಸಂಗತಿ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

ಬರಿದಾಗಿರುವ ತಮ್ಮ ಬೊಕ್ಕಸ ತುಂಬಿಸಿಕೊಳ್ಳಲು ಒಂದಿಲ್ಲೊಂದು ಬೆಲೆ ಏರಿಕೆಯ ದಾರಿ ಹುಡುಕುತ್ತಿರುವ ರಾಜ್ಯ ಸರ್ಕಾರ, ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸಾ ದರವನ್ನು 20% ಹೆಚ್ಚಿಸಿದೆ. ಉಚಿತ ಭಾಗ್ಯಗಳ ಕೊಟ್ಟೆವೆಂದು ಆರೋಗ್ಯ ಭಾಗ್ಯವನ್ನೇ ಕಸಿದುಕೊಳ್ಳುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಜನಸಾಮಾನ್ಯರು ಬೀದಿಗಿಳಿಯುವ ಕಾಲ ದೂರವಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವ್ಯಾಪ್ತಿಗೆ ಬರುವ ವಿಕ್ಟೋರಿಯಾ ಆಸ್ಪತ್ರೆ, ವಾಣಿವಿಲಾಸ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ, ಮಿಂಟೋ ಕಣ್ಣಿನ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಕೇಂದ್ರಗಳಲ್ಲಿ ನೀಡಲಾಗುವ ಚಿಕಿತ್ಸೆಗಳ ದರ ಮಾತ್ರ ಏರಿಕೆಯಾಗಿದೆ ಎಂದು ವರದಿಯಾಗಿದೆ. ಈ ಆಸ್ಪತ್ರೆಗಳಲ್ಲಿನ ಚಿಕಿತ್ಸೆ ದರವನ್ನು ಶೇ. 20ರಷ್ಟು ಏರಿಕೆ ಮಾಡಲಾಗಿದ್ದು, ಈ ಪರಿಷ್ಕೃತ ದರ ನವೆಂಬರ್ 1ರಿಂದಲೇ ಜಾರಿಯಾಗಿರುವಂತೆ ಆದೇಶದಲ್ಲಿ ತಿಳಿಸಿದೆ.

ಇದರ ಬೆನ್ನಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಚಿಕಿತ್ಸಾ ದರ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ. ಚಿಕಿತ್ಸಾ ದರ ಪರಿಷ್ಕರಣೆಗೆ ಈಗಾಗಲೇ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಇದು ಬಡರೋಗಿಗಳಿಗೆ ಮಾರಕ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸಾ ದರ ಪರಿಷ್ಕರಣೆ ಮಾಡಲು ಮುಂದಾಗಿರುವ ನಿರ್ಧಾರದ ಹಿಂದೆ ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ಎರಡು ಅಥವಾ ಮೂರು ವರ್ಷಕ್ಕೊಮ್ಮೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಪರಿಷ್ಕರಣೆ ಮಾಡಲಾಗುವುದು. ಅದೇ ರೀತಿ ಈ ಬಾರಿಯೂ ದರ ಪರಿಷ್ಕರಣೆ ಮಾಡಲು ಮುಂದಾಗಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಎಲ್ಲ ವಿಚಾರಗಳಿಗೂ ಗ್ಯಾರಂಟಿ ಯೋಜನೆಗಳನ್ನು ತಳುಕು ಹಾಕುವುದು ಹೆಚ್ಚಾಗುತ್ತಿದೆ. ದರ ಪರಿಷ್ಕರಣೆ ಎಲ್ಲ ಸರ್ಕಾರಗಳ ಅವಧಿಯಲ್ಲಿಯು ನಡೆಯುತ್ತಲೇ ಇರುತ್ತದೆ. ವರ್ಷಗಳ ಬಳಿಕ ಆಸ್ಪತ್ರೆ ಸೇವೆಗಳ ದರದಲ್ಲಿ ಅಲ್ಪ ಪರಿಷ್ಕರಣೆಯಾಗಿದೆ. ಇದನ್ನು ಗ್ಯಾರಂಟಿ ಯೋಜನೆಗಳೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳ ಬಗ್ಗೆ ಆತಂಕ, ಅನುಮಾನಗಳಿದ್ದಲ್ಲಿ 2ನೇ ವೈದ್ಯಕೀಯ ಅಭಿಪ್ರಾಯ (ಸೆಕೆಂಡ್ ಒಪೀನಿಯನ್) ಪಡೆಯಬಹುದು. ನಮ್ಮ ಸರ್ಕಾರವು ಈ ನಿಟ್ಟಿನಲ್ಲಿ ಸಾರ್ವಜನಿಕರಿಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1800 4258 330 ಆರಂಭಿಸಿದ್ದು, ರಾಜ್ಯದ ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.












Click it and Unblock the Notifications