ಡಿಕೆಶಿ ಭೇಟಿಯಾದ ಸಿಪಿ ಯೋಗೇಶ್ವರ್ ಪುತ್ರಿ: ರಾಮನಗರ ರಾಜಕಾರಣದಲ್ಲಿ ಕಂಪನ- ಎಚ್ಡಿಕೆ ತಂತ್ರಕ್ಕೆ ಪ್ರತಿತಂತ್ರ?
ಬೆಂಗಳೂರು, ಜುಲೈ 26: ರಾಜ್ಯ ರಾಜಕಾರಣವು ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಈ ಬೆಳವಣಿಗೆಯ ನಡುವೆಯೇ ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಪುತ್ರಿ ಡಿಕೆಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದು ರಾಮನಗರ ರಾಜಕಾರಣದಲ್ಲಿ ಕಂಪನವನ್ನು ಸೃಷ್ಟಿಸಿದೆ.
ಎಚ್ಡಿಕೆ ವಿರುದ್ಧ ಡಿಕೆಶಿ ಗಂಭೀರ ಆರೋಪ
ಕಳೆದ ವಾರ ಸಿಎಂಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಚ್ಡಿ ಕುಮಾರಸ್ವಾಮಿ ಅವರು ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿದ್ದರು. ಆ ನಂತರ ಎಚ್ಡಿ ಕುಮಾರಸ್ವಾಮಿ ಅವರು ಸಿಂಗಾಪುರ ಪ್ರವಾಸ ಕೈಗೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಂಗಾಪುರದಲ್ಲಿ ಮಾಸ್ಟರ್ ಸ್ಟ್ರಾಟಜಿ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
'ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಭೇಟಿ ನೀಡಿದ ಬಗ್ಗೆ ನನಗೆ ಮಾಹಿತಿ ಇದೆ. ಬೆಂಗಳೂರಿನಲ್ಲಿ ಗೇಮ್ ಪ್ಲಾನ್ ರೆಡಿ ಮಾಡುವ ಬದಲು, ಸಿಂಗಾಪುರದಲ್ಲಿ ಮಾಸ್ಟರ್ ಸ್ಟ್ರಾಟಜಿ ಸಿದ್ದಗೊಳಿಸಲು ತೆರಳಿದ್ದಾರೆ. ಈ ಕುರಿತು ನಮಗೆ ಎಲ್ಲವೂ ತಿಳಿದಿದೆ' ಎಂದು ಡಿಕೆಶಿ ಹೇಳಿದ್ದಾರೆ.

ಸಿಪಿವೈಗೆ ಡಿಕೆಶಿ ಗಾಳ?
ಎಚ್ಡಿ ಕುಮಾರಸ್ವಾಮಿ ಅವರ ಬದ್ಧ ವೈರಿಯೆಂದೇ ಹೆಸರುವಾಸಿಯಾಗಿರುವ ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಡಿಕೆಶಿ ಗಾಳ ಹಾಕುತ್ತಿದ್ದಾರೆ ಎಂಬ ಮಾತುಗಳು ಚುನಾವಣಾ ಪೂರ್ವದಲ್ಲೇ ಕೇಳಿಬಂದಿದ್ದವು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಸಿಪಿವೈ ಅವರು ಬಿಜೆಪಿಯಿಂದ ಸ್ಪರ್ಧಿಸಿ ಕುಮಾರಸ್ವಾಮಿ ವಿರುದ್ಧ ಸೋಲು ಕಂಡಿದ್ದರು. ಆದರೆ, ರಾಮನಗರ ಭಾಗದಲ್ಲಿ ಪ್ರಭಾವಿ ನಾಯಕರಾಗಿ ಬೆಳೆದಿರುವ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಅವರು ಡಿಕೆಶಿ ಅವರನ್ನು ಭೇಟಿಯಾಗಿ ಮಾತಕತೆ ನಡೆಸಿದ್ದಾರೆ ಎನ್ನಲಾಗಿದೆ.

ಕಳೆದ ಭಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಸಿಪಿ ಯೋಗೇಶ್ವರ್ ಪಾತ್ರ ಮಹತ್ವದ್ದಾಗಿತ್ತು. ಈ ಹಿನ್ನೆಲೆಯಲ್ಲಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ಗೆ ಕರೆದುಕೊಂಡು ಬರುವ ನಿಟ್ಟಿನಲ್ಲಿ ಡಿಕೆ ಸಹೋದರರು ಪ್ಲ್ಯಾನ್ ಮಾಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.
ಒಂದು ವೇಳೆ, ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಗೊಂಡರೆ, ರಾಮನಗರ ಹಾಗೂ ಮಂಡ್ಯ ಭಾಗದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲ ಬಂದಂತಾಗುತ್ತದೆ. ಈ ಮೂಲಕ ಕುಮಾರಸ್ವಾಮಿ ಅವರ ತಂತ್ರಕ್ಕೆ ಪ್ರತಿತಂತ್ರ ಹೆಣೆಯುವುದು ಡಿಕೆಶಿ ಲೆಕ್ಕಾಚಾರವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಯಾವುದೇ ಪಕ್ಷದ ಮೈತ್ರಿ ಇಲ್ಲವೆಂದ ದೇವೇಗೌಡ
ಅತ್ತ ಪುತ್ರ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ನೆಂಟಸ್ತಿಕೆ ಬೆಳೆಸಲು ಮುಂದಾಗಿದ್ದಾರೆ. ಇತ್ತ ಮಾಜಿ ಪ್ರಧಾನಿ ದೇವೇಗೌಡ ಅವರು ಯಾವುದೇ ಪಕ್ಷದ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲವೆಂದು ಹೇಳುತ್ತಿದ್ದಾರೆ. ಒಂದು ವೇಳೆ, ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡರೆ, ಎಚ್ಡಿಕೆ ಬದ್ಧವೈರಿಯಾಗಿರುವ ಸಿಪಿವೈ ಅವರು ಕಾಂಗ್ರೆಸ್ ಸೇರುವುದಕ್ಕೆ ಒಲವು ತೋರಲಿದ್ದಾರೆ ಎಂಬ ಮಾತುಗಳೂ ಕೇಳಿಬಂದಿವೆ.












Click it and Unblock the Notifications