ಬಿಜೆಪಿ ತೊರೆದ ಬಿಎಸ್ವೈ ಆಪ್ತ ಮೋಹನ್ ಲಿಂಬಿಕಾಯಿ!
ಬಿ. ಎಸ್. ಯಡಿಯೂರಪ್ಪ ಆಪ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಬಿಜೆಪಿ ತೊರೆದಿದ್ದಾರೆ. ಅವರು ಕಾಂಗ್ರೆಸ್ ಸೇರಲಿದ್ದಾರೆ.
ಬೆಂಗಳೂರು, ಮಾರ್ಚ್ 16; ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ, ಕರ್ನಾಟಕದಲ್ಲಿ ಪಕ್ಷಾಂತರ ಮಾಡುವ ನಾಯಕರ ಸಂಖ್ಯೆಯೂ ಹೆಚ್ಚಾಗಿದೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಪ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಬಿಜೆಪಿ ತೊರೆದರು. ಬೆಳಗಾವಿಯಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳಿವೆ.
ಗುರುವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮೋಹನ್ ಲಿಂಬಿಕಾಯಿ ರಾಜೀನಾಮೆ ನೀಡಿದ್ದಾರೆ. ಸಹಾಯಕರ ಮೂಲಕ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿಯ ರಾಜ್ಯ ಕಚೇರಿಗೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದಾರೆ. ಬಿ. ಎಸ್. ಯಡಿಯೂರಪ್ಪ ಬಿಜೆಪಿ ತೊರೆದು ಕೆಜೆಪಿ ಕಟ್ಟಿದಾಗ ಮೊದಲು ರಾಜೀನಾಮೆ ಸಲ್ಲಿಸಿದ್ದ ನಾಯಕ ಮೋಹನ್ ಲಿಂಬಿಕಾಯಿ.

ಆಗ ವಿಧಾನ ಪರಿಷತ್ ಸದಸ್ಯರಾಗಿದ್ದ ಮೋಹನ್ ಲಿಂಬಿಕಾಯಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ತೊರೆದು ಕೆಜೆಪಿ ಸೇರಿದ್ದರು. ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಕೆಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಕಂಡಿದ್ದರು. ಯಡಿಯೂರಪ್ಪ ಬಿಜೆಪಿಗೆ ಮರಳಿದ ಬಳಿಕ ಅವರ ಜೊತೆಗೆ ಮೋಹನ್ ಲಿಂಬಿಕಾಯಿಯೂ ವಾಪಸ್ ಆಗಿದ್ದರು.
ಯಡಿಯೂರಪ್ಪ ಆಪ್ತರಾಗಿದ್ದ ಮೋಹನ್ ಲಿಂಬಿಕಾಯಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಪತನಗೊಂಡು, ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದರು. ಈಗ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಅವರಿಗೆ ಕಾಂಗ್ರೆಸ್ ಟಿಕೆಟ್ ಖಚಿತವಾಗಿದ್ದು, ಗುರುವಾರ ಸಂಜೆಯೇ ಪಕ್ಷ ಸೇರುತ್ತಿದ್ದಾರೆ.

ಮೋಹನ್ ಲಿಂಬಿಕಾಯಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಇದೆ. ಈ ಕ್ಷೇತ್ರದ ಹಾಲಿ ಶಾಸಕರು ಬಿಜೆಪಿಯ ಅರವಿಂದ ಬೆಲ್ಲದ್. "ಯಾವುದೇ ಷರತ್ತುಗಳನ್ನು ಹಾಕದೇ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ" ಎಂದು ಮೋಹನ್ ಲಿಂಬಿಕಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಪಕ್ಷಕ್ಕೆ ಸೇರುತ್ತಿದ್ದಾರೆ.
ಬೆಳಗಾವಿಗೆ ಮಾರ್ಚ್ 20ರಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಗುರುವಾರ ಸಂಜೆ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿಯೇ ಮೋಹನ್ ಲಿಂಬಿಕಾಯಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ. ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಮೋಹನ್ ಲಿಂಬಿಕಾಯಿ ಅಭ್ಯರ್ಥಿ ಎಂದು ಘೋಷಣೆ ಮಾಡುವ ನಿರೀಕ್ಷೆ ಇದೆ.
ಮೋಹನ್ ಲಿಂಬಿಕಾಯಿ 2008ರಲ್ಲಿ ವಿಧಾನ ಪರಿಷತ್ ಚುನಾವಣೆಗೆ ವಾಯುವ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್ ಹಿರಿಯ ಮುಖಂಡ ಎಚ್. ಕೆ. ಪಾಟೀಲ್ರನ್ನು ಸೋಲಿಸಿ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೊದಲಿನಿಂದಲೂ ಯಡಿಯೂರಪ್ಪ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು. 2013ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕೆಜೆಪಿ ಸೇರಿದ್ದರು. ಬಳಿಕ ಕೆಜೆಪಿ ತೊರೆದು ಮಾತೃ ಪಕ್ಷಕ್ಕೆ ಯಡಿಯೂರಪ್ಪಗಿಂತ ಮೊದಲೇ ಮರಳಿದ್ದರು. ಈಗ ಮತ್ತೆ ಬಿಜೆಪಿ ತೊರೆದಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿದ್ದ ಮೋಹನ್ ಲಿಂಬಿಕಾಯಿ ಪರಿಷತ್ ಸದಸ್ಯತ್ವದ 15 ತಿಂಗಳ ಅವಧಿ ಬಾಕಿ ಇರುವಾಗಲೇ ಬಿಜೆಪಿ ತೊರೆದು, ಸ್ಥಾನಕ್ಕೆ ರಾಜೀನಾಮೆ ನೀಡಿ ಕೆಜೆಪಿ ಪಕ್ಷ ಸೇರಿದ್ದರು. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 12,216 ಮತಗಳನ್ನು ಪಡೆದು 4ನೇ ಸ್ಥಾನ ಪಡೆದು ಸೋಲು ಅನುಭವಿಸಿದ್ದರು. ಈಗ ಅದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಈ ಬಾರಿಯ ಚುನಾವಣೆಯಲ್ಲಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.












Click it and Unblock the Notifications