ನರೇಗಾ ಹಾಗೂ ಎತ್ತಿನಹೊಳೆ ಯೋಜನೆಗಳಲ್ಲಿ ಭ್ರಷ್ಟಾಚಾರ: ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು
ಹಾಸನ ಮಾರ್ಚ್ 28: ಚುನಾವಣೆ ಹತ್ತಿರವಾಗುತ್ತಿದ್ದಂತೆ ಭ್ರಷ್ಟಾಚಾರದ ಆರೋಪಗಳೂ ಹೆಚ್ಚಾಗಿ ಕೇಳಿ ಬರುತ್ತಿವೆ. ಜನನಾಯಕರು ದಾಖಲೆ ಸಮೇತ ಭ್ರಷ್ಟಾಚಾರ ಬಯಲಿಗೆ ಎಳೆಯುತ್ತಿದ್ದಾರೆ. ಇಂತಹದ್ದೇ ಆರೋಪಕ್ಕೆ ಸದ್ಯ ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ಗುರಿಯಾಗಿದ್ದಾರೆ.
ಬಿಜೆಪಿ ಮುಖಂಡ ಎನ್. ಆರ್ ರಮೇಶ್ ಶಾಸಕ ಶಿವಲಿಂಗೇಗೌಡ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಕೋಟಿ ಕೋಟಿ ಹಣವನ್ನು ಶಾಸಕ ಲಪಟಾಯಿಸಿದ್ದಾರೆಂದು ಎನ್. ಆರ್ ರಮೇಶ್ ಲೋಕಾಯುಕ್ತಕ್ಕೆ ಶಿವಲಿಂಗೇಗೌಡ ವಿರುದ್ಧ ದೂರು ಕೊಟ್ಟಿದ್ದಾರೆ. ಇದರಿಂದಾಗಿ ಚುನಾವಣೆ ಹೊಸ್ತಿಲಲ್ಲೇ ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ ಶಿವಲಿಂಗೇಗೌಡರಿಗೆ ಸಂಕಷ್ಟ ಎದುರಾಗಿದೆ.

ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಎರಡು ಮಹತ್ವಾಕಾಂಕ್ಷಿ ನರೇಗಾ ಹಾಗೂ ಎತ್ತಿನಹೊಳೆ ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. 200 ಕೋಟಿಗೂ ಅಧಿಕ ಹಣ ಭ್ರಷ್ಟಾಚಾರ ಆಗಿರೋ ಬಗ್ಗೆ ಎನ್.ಆರ್ ರಮೇಶ್ ದಾಖಲೆ ಬಿಡುಗಡೆ ಮಾಡಿದ್ದಾರೆ.
ಮಲೆನಾಡಿನ ಬಯಲು ಸೀಮೆ ಪ್ರದೇಶ, ಎತ್ತಿನಹೊಳೆಯಿಂದ ಕುಡಿಯುವ ನೀರಿನ ಯೋಜನೆಗೆ ಕಳೆದ ಮೂರು ವರ್ಷದಲ್ಲಿ ಕೋಟಿ ಕೋಟಿ ಅನುದಾನ ಬಿಡುಗಡೆ ಆಗಿದೆ. ಆದರೆ ಐದು ಕೋಟಿ ಕಾಮಗಾರಿಗೆ ಟೆಂಡರ್ ಕರೆಯದೇ ಏಕಾಏಕಿ ಕೆಲಸ ಮಾಡಲಾಗಿದೆ. ಕೆಲವು ಕಡೆ ಕಾಂಕ್ರಿಟೀಕರಣ ಆಗಿದ್ದರೂ ಮತ್ತೆ ಆ ರಸ್ತೆ ದುರಸ್ಥಿ ಮಾಡಲಾಗಿದೆ ಎಂದು ಎನ್ ಆರ್ ರಮೇಶ್ ಆರೊಪಿಸಿದ್ದಾರೆ.
ನರೇಗಾ ಕೆಲಸದಲ್ಲಿ 150 ಕೋಟಿ, ಎತ್ತಿನಹೊಳೆ ಯೋಜನೆಯಲ್ಲಿ 100 ಕೋಟಿ ನುಂಗಿರುವ ಆರೋಪವನ್ನು ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಮಾಡಿದ್ದಾರೆ. ಕೋಟ್ಯಾಂತರ ರೂಪಾಯಿ ಬಳಕೆ ಮಾಡಿ ಸುಳ್ಳು ದಾಖಲೆ ಸಲ್ಲಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ದಾಖಲಿಸಿರುವುದಾಗಿ ಎನ್.ಆರ್ ರಮೇಶ್ ಹೇಳಿದ್ದಾರೆ.

ಶಾಸಕ ಶಿವಲಿಂಗೇಗೌಡ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮದ ತುಮಕೂರು ವಿಭಾಗದ ಮುಖ್ಯ ಅಭಿಯಂತರ ಮಾಧರ್, ಹಾಸನ ವಿಭಾಗದ ಕಾರ್ಯಪಾಲಕ ಅಭಿಯಂತರ ರಘುನಾಥ್, ಅಧೀಕ್ಷಕ ಅಭಿಯಂತರ ಆನಂದ್ ಕುಮಾರ್, ಅರಸೀಕೆರೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರಘು, ಕೆಆರ್ ಐಡಿಎಲ್ ಸಂಸ್ಥೆಯ ಹಾಸನ ವಿಭಾಗದ ಕಾರ್ಯಪಾಲಕ ಅಭಿಯಂತರ ಸಿದ್ದಪ್ಪ, ಅರಸೀಕೆರೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಜಯ, ಸಹಾಯಕ ಅಭಿಯಂತರ ದೀಕ್ಷಿತ್, ಪಂಚಾಯತ್ ರಾಜ್ ಇಲಾಖೆಯ ಅರಸೀಕೆರೆ ವಿಭಾಗದ ಕಾರ್ಯಪಾಲಕ ಅಭಿಯಂತರ ಬಾಲಕೃಷ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ಬಸವರಾಜು ಮತ್ತು ಕಿರಿಯ ಅಭಿಯಂತರ ಉಮೇಶ್ ಸೇರಿದಂತೆ ಇತರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ದೂರುಗಳು ದಾಖಲಿಸಿರುವುದಾಗಿ ಉಲ್ಲೇಖಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಟಿಟಿಪಿ ಕಾಯ್ದೆಯ ಪ್ರಕಾರ ೧ ಲಕ್ಷ ರೂಪಾಯಿಗಳಿಗೂ ಹೆಚ್ಚು ಮೊತ್ತದ ಕಾಮಗಾರಿಗಳನ್ನು ಈ ಪ್ರೋಕ್ಯೂರ್ಮೆಂಟ್ ವಿಧಾನದಲ್ಲಿ ಟೆಂಡರ್ ಗಳನ್ನು ಆಹ್ವಾನಿಸಿ ನಿಯಮಾನುಸಾರ ಅರ್ಹ ಗುತ್ತಿಗೆದಾರರಿಗೆ ಕಾಮಗಾರಿಗಳ ನಿರ್ವಹಣೆಯ ಗುತ್ತಿಗೆಯನ್ನು ನೀಡಬೇಕಿರುತ್ತದೆ.
ಆದರೆ, ಅರಸೀಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಒಂದು ಕೋಟಿಯಿಂದ ಐದು ಕೋಟಿ ರೂಪಾಯಿಗಳ ವರೆಗಿನ ಎಲ್ಲಾ ಕಾಮಗಾರಿಗಳನ್ನು ನಿಯಮಾನುಸಾರ ಟೆಂಡರ್ ಕರೆಯದೆ ಕೆಆರ್ ಐಡಿಎಲ್ ಸಂಸ್ಥೆಯ ಮೂಲಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ದೂರಿದರು.












Click it and Unblock the Notifications