ಪ್ರವೀಣ್ ನೆಟ್ಟಾರು ಪತ್ನಿ ನೌಕರಿಯಿಂದ ವಜಾ: ಕಾಂಗ್ರೆಸ್ ಹೇಳಿದ್ದೇನು?
ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡಿದ್ದ ಎಲ್ಲಾ ನೌಕರಿಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ವಜಾಗೊಳಿಸಿದೆ. ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರವು ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲೆಗೀಡಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಯೂ ಕೆಲಸ ಕಳೆದುಕೊಂಡಿದ್ದಾರೆ.
ಸೆಪ್ಟೆಂಬರ್ 29, 2022 ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ಪ್ರವೀಣ್ ಅವರ ಪತ್ನಿ ನೂತನ್ ಕುಮಾರಿ ಎಂ ಅವರನ್ನು ಮುಖ್ಯಮಂತ್ರಿ ಕಚೇರಿಯಲ್ಲಿ 'ಗ್ರೂಪ್ ಸಿ' ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿದೆ ಎಂದು ಹೇಳಲಾಗಿದೆ.

ಅವರ ನೇಮಕಾತಿಯ ಅಧಿಸೂಚನೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವವರೆಗೆ ಅಥವಾ ಅವರ ಕೆಲಸಕ್ಕೆ ಸಂಬಂಧಿಸಿದ ಯಾವುದೇ ಹೊಸ ಆದೇಶ ಹೊರಡಿಸುವವರೆಗೆ ಅವರು ಸೇವೆಯಲ್ಲಿರುತ್ತಾರೆ ಎಂದು ತಿಳಿಸಲಾಗಿತ್ತು.
ನೂತನ್ ಕುಮಾರಿ ಅವರು ಕೋರಿಕೆಯ ಮೇರೆಗೆ ಅಕ್ಟೋಬರ್ 13 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಪತ್ತು ನಿರ್ವಹಣಾ ಇಲಾಖೆಗೆ ಸೇರಿದ್ದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನಡೆದ ಎಲ್ಲಾ ನೇಮಕಾತಿಗಳನ್ನು ಸ್ಥಗಿತಗೊಳಿಸಲಾಗಿದೆ. ಅದರಂತೆ ನೂತನ್ ಕುಮಾರಿ ಕೂಡ ಕೆಲಸ ಕಳೆದುಕೊಂಡಿದ್ದಾರೆ.

ಈ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮಾತನಾಡಿ, ಸರಕಾರ ಬದಲಾದಾಗ ಹಿಂದಿನ ಎಲ್ಲ ತಾತ್ಕಾಲಿಕ ನೇಮಕಾತಿಗಳು ಸ್ವಾಭಾವಿಕವಾಗಿ ರದ್ದಾಗುತ್ತವೆ ಎಂದು ಹೇಳಿದ್ದಾರೆ.
ಕೆಲಸದಿಂದ ಬಿಡುಗಡೆ ಮಾಡುವ ವಿಚಾರವನ್ನು ನೂತನ್ ಕುಮಾರಿ ಅವರ ಗಮನಕ್ಕೆ ತರಲಾಗಿದೆ. ಆಕೆ ತನ್ನನ್ನು ಮುಂದುವರಿಸಲು ಡಿಸಿ ಕಚೇರಿಗೆ ಪತ್ರ ಸಲ್ಲಿಸಿದರೆ, ಅದನ್ನು ಸರ್ಕಾರಕ್ಕೆ ಪರಿಗಣನೆಗೆ ತರಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಹೇಳಿದ್ದೇನು?
ಈ ವಿಚಾರವಾಗಿ ಟ್ವೀಟ್ ಮಾಡಿರುವ ಕರ್ನಾಟಕದ ಕಾಂಗ್ರೆಸ್, 'ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ ಬಿಜೆಪಿಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ ಮತ್ತು ಸಮಯ ಇರಲು ಸಾಧ್ಯವೇ? ನಿಯಮದ ಪ್ರಕಾರ, ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಕ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.












Click it and Unblock the Notifications