ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ₹10,000 ಬಹುಮಾನ ಘೋಷಣೆ: ಯತ್ನಾಳ್ ದೊಡ್ಡ ಆರೋಪ
ಬೆಳಗಾವಿ ಅಧಿವೇಶನದ ಸಮಯದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ 10,000 ರೂಪಾಯಿ ಬಹುಮಾನ ಘೋಷಣೆ ಮಾಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಇಲಾಖೆಯ ದಾಖಲೆ ಕೂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಲಿಂಗಾಯತ ವಿರೋಧಿ ಕಾಂಗ್ರೆಸ್ ಸರ್ಕಾರವು ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೇಕರ ಇವರಿಗೆ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಉತ್ತಮ ಕರ್ತವ್ಯ ನಿರ್ವಹಣೆಗೆ 10,000 ರೂಪಾಯಿ ಬಹುಮಾನ ನೀಡಿದೆ. ಈ ಇನ್ಸ್ಪೆಕ್ಟರ್ ಗಡ್ಡೇಕರ ಹಾಗೂ ಐಪಿಎಸ್ ಅಧಿಕಾರಿ ಹಿತೇಂದ್ರ ಅವರು ಪಂಚಮಸಾಲಿ ಸಮುದಾಯಕ್ಕೆ 2 A ಮೀಸಲು ನೀಡಬೇಕೆಂದು ಹೋರಾಟ ಮಾಡುತ್ತಿದ್ದವರ ಮೇಲೆ ಲಾಠಿ ಬೀಸಿ ಅಮಾನವೀಯವಾಗಿ ನಡೆದುಕೊಂಡಿದ್ದರು ಎಂದು ಯತ್ನಾಳ್ ಕಿಡಿಕಾರಿದ್ದಾರೆ.

ಪ್ರತಿಭಟನಾಕಾರರನ್ನು ಹತ್ತಿಕ್ಕಲು ಖುದ್ದು ಎಡಿಜಿಪಿ ಶ್ರೇಣಿಯ ಅಧಿಕಾರಿ ಫೀಲ್ಡಿಗೆ ಇಳಿದದ್ದು ಬಹುಷಃ ಇದೇ ಮೊದಲ ಬಾರಿ ಇರಬೇಕು. ಅಲ್ಲದೆ ತಾವು ಮಾಡಿದ್ದು ಸರಿ ಎಂದು ಸಮಜಾಯಿಷಿಯನ್ನು ಸಹ ನೀಡಿದ್ದರು. ನ್ಯಾಯಯುತವಾದ ಬೇಡಿಕೆಯನ್ನು ಲಾಠಿ ಮೂಲಕ ಉತ್ತರಿಸಿದ ಲಿಂಗಾಯತ ವಿರೋಧಿ ಹಾಗೂ ಹಿಂದೂ ವಿರೋಧಿ ಸರ್ಕಾರಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣಗಳಲ್ಲಿ ಒಂದು ಕೋಮಿನ ತಪ್ಪಿತಸ್ಥರ ವಿರುದ್ಧ ಪ್ರಕರಣವನ್ನು ಕೈ ಬಿಡಬೇಕು ಎಂದು ಶಿಫಾರಸನ್ನು ಬಹುತೇಕ ಒಪ್ಪಿಕೊಂಡಿದ್ದ ಸರ್ಕಾರ, ಇಂದು ಪಂಚಮಸಾಲಿಗಳ ನೆತ್ತರು ಹರಿಸಿದವರಿಗೆ ಬಹುಮಾನ ಘೋಷಣೆ ಮಾಡಿದೆ. ಕಿಂಚಿತ್ತೂ ಮಾನವೀಯತೆ ಇಲ್ಲದ ಅಧಿಕಾರಿಗಳ ಹೆಸರನ್ನು ಮರೆಯದಿರಿ. ಲಾಠಿ ಪ್ರಹಾರ ನಡೆಸಿದ್ದವರನ್ನು ಹಾಗೂ ಲಾಠಿ ಬೀಸಲು ಪ್ರಚೋದನೆ ಕೊಟ್ಟ ನಿರ್ಲಜ್ಜ ಕಾಂಗ್ರೆಸ್ ಸರ್ಕಾರವನ್ನು ಪಂಚಮಸಾಲಿಗಳು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹಿಡಿಶಾಪ ಹಾಕಿದ್ದಾರೆ.

ಸಿಎಂ ಹೇಳಿದ್ದೇನು?: ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಬಗ್ಗೆ ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದರು. ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದಿದ್ದರು.
ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ, ಕಾನೂನು ಎಲ್ಲರಿಗೂ ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನು ಸಮಾನ ರಕ್ಷಣೆಯನ್ನು ಖಾತರಿಪಡಿಸುತ್ತದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದರು.

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸರು ಕಲ್ಲು ಹೊಡೆದಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ. ವಾಸ್ತವವಾಗಿ ಬಿಜೆಪಿಗರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ಬೇಕಾದರೆ ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು? ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ? ನಾನು ಹೇಳಿರುವುದಕ್ಕೆ ಎಲ್ಲವೂ ಸಾಕ್ಷಿಯಿದೆ ಎಂದು ಸಮರ್ಥಿಸಿಕೊಂಡಿದ್ದರು. ಈಗ ಸರ್ಕಾರ ಪೊಲೀಸರಿಗೆ ಬಹುಮಾನ ಘೋಷಣೆ ಮಾಡಿರುವುದು ಪಂಚಮಸಾಲಿ ಸಮುದಾಯ ಹಾಗು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.












Click it and Unblock the Notifications