ಉಪ ಚುನಾವಣೆ; ಬಿಜೆಪಿ ನಾಯಕರಿಂದ ಡಿ. ಕೆ. ಶಿವಕುಮಾರ್ ಭೇಟಿ!
Recommended Video
ಬೆಂಗಳೂರು, ನವೆಂಬರ್ 11 : ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣೆ ಎದುರಾಗಿರುವಾಗಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇಬ್ಬರು ಬಿಜೆಪಿ ನಾಯಕರು ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಗೋಕಾಕ್ ಕ್ಷೇತ್ರದ ಬಿಜೆಪಿ ನಾಯಕ ಅಶೋಕ್ ಪೂಜಾರಿ ಮತ್ತು ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಭಾನುವಾರ ಡಿ. ಕೆ. ಶಿವಕುಮಾರ್ ಭೇಟಿಯಾದರು. ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಡಿ. ಕೆ. ಶಿವಕುಮಾರ್ ಉಪ ಚುನಾವಣೆ ಕುರಿತ ಸಭೆಯಲ್ಲಿ ಪಾಲ್ಗೊಂಡಿದ್ದರು.
ಈ ಇಬ್ಬರು ಬಿಜೆಪಿ ನಾಯಕರು ಉಪ ಚುನಾವಣೆ ಟಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ರಾಜು ಕಾಗೆ ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
15 ಕ್ಷೇತ್ರಗಳ ಉಪ ಚುನಾವಣೆಗೆ ನವೆಂಬರ್ 11ರ ಸೋಮವಾರ ಅಧಿಸೂಚನೆ ಪ್ರಕಟವಾಗಲಿದೆ. ಕಾಂಗ್ರೆಸ್ 8 ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.

ಡಿ. ಕೆ. ಶಿವಕುಮಾರ್ ಭೇಟಿ
ಗೋಕಾಕ್ ಕ್ಷೇತ್ರದ ಅಶೋಕ್ ಪೂಜಾರಿ ಮತ್ತು ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಉಪ ಚುನಾವಣೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಈ ನಾಯಕರು ಡಿ. ಕೆ. ಶಿವಕುಮಾರ್ ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇಬ್ಬರೂ ಕಾಂಗ್ರೆಸ್ ಸೇರಲಿದ್ದಾರೆಯೇ? ಕಾದು ನೋಡಬೇಕು.

ನಳಿನ್ ಕುಮಾರ್ ಕಟೀಲ್ ಹೇಳಿಕೆ
ಬಿಜೆಪಿ ನಾಯಕರು ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, "ರಾಜಕೀಯದಲ್ಲಿ ವೈಯಕ್ತಿಕ ಸಂಬಂಧಗಳು ಇರುತ್ತವೆ. ಭೇಟಿ ಮಾಡಿದ ಕೂಡಲೇ ಕಾಂಗ್ರೆಸ್ ಸೇರ್ಪಡೆಯಾಗಲ್ಲ. ಜನಾರ್ದನ ಪೂಜಾರಿ ನನ್ನ ಹಳೇ ಸ್ನೇಹಿತರು. ಅವರು ಬಿಜೆಪಿಗೆ ಬರಲಿಲ್ಲ, ನಾನು ಕಾಂಗ್ರೆಸ್ಗೆ ಹೋಗಿಲ್ಲ" ಎಂದು ಹೇಳಿದರು.

ಸಿದ್ದರಾಮಯ್ಯ ಹೇಳಿದ್ದೇನು?
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಕುರಿತು ಹೇಳಿಕೆ ನೀಡಿದ್ದು, "ಪಕ್ಷದ ಸಿದ್ದಾಂತ ಒಪ್ಪಿ ಯಾರು ಬೇಕಾದರೂ ಬರಲಿ. ಮೊದಲು ಪಕ್ಷದ ತತ್ವ, ಸಿದ್ದಾಂತ ಒಪ್ಪಬೇಕು. ಟಿಕೆಟ್ ನೀಡುವ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ" ಎಂದು ಹೇಳಿದರು.

ಅಶೋಕ ಪೂಜಾರಿ, ರಾಜು ಕಾಗೆ
ಅಶೋಕ ಪೂಜಾರಿ ಮತ್ತು ರಾಜು ಕಾಗೆ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿಗಳು. ಅಶೋಕ ಪೂಜಾರಿ ಕಳೆದ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರದಲ್ಲಿ 75,969 ಮತಗಳನ್ನು ಪಡೆದು ರಮೇಶ್ ಜಾರಕಿಹೊಳಿ ವಿರುದ್ಧ ಸೋತಿದ್ದರು.
ರಾಜುಕಾಗೆ ಕಾಗವಾಡ ಕ್ಷೇತ್ರದಲ್ಲಿ 50,118 ಮತಗಳನ್ನು ಪಡೆದು ಕಳೆದ ಚುನಾವಣೆಯಲ್ಲಿ ಶ್ರೀಮಂತ ಪಾಟೀಲ್ ವಿರುದ್ದ ಸೋತಿದ್ದರು. ಆದರೆ, ಅನರ್ಹರಿಗೆ ಟಿಕೆಟ್ ನೀಡಲು ಬಿಜೆಪಿ ಬಯಸಿದ್ದು, ಕಳೆದ ಚುನಾವಣೆಯಲ್ಲಿ ಸೋತವರಿಗೆ ಟಿಕೆಟ್ ಸಿಗುವುದು ಅನುಮಾನವಾಗಿದೆ.












Click it and Unblock the Notifications